ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಇದೇ ಏ. ೧೪ ರಂದು ನಡೆಯಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜನ್ಮ ದಿನಾಚರಣೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಭಾಗವಹಿಸಲು ಹಾಗೂ ಜಿಲ್ಲೆಯ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಎಲ್ಲಾ ಸಮುದಾಯದ ಗಣ್ಯರು ಭಾಗವಹಿಸುವಂತೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಅಂದು ಬೆಳಗ್ಗೆ ೮ ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಬಿ ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು.
ನಂತರ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರದ ಮೆರವಣಿಗೆಯನ್ನು ವಿವಿಧ ಕಲಾ ತಂಡಗಳೊಂದಿಗೆ ಬುದ್ಧವಿಹಾರ ಜಲನಗರದಿಂದ ಪ್ರಾರಂಭಿಸಿ, ಜಿಲ್ಲಾ ನ್ಯಾಯಾಲಯದ ಮಾರ್ಗವಾಗಿ, ಬಾಗಲಕೋಟೆ ಕ್ರಾಸ್, ಕಿತ್ತೂರು ರಾಣಿ ಚನ್ನಮ್ಮ ಕೇಂದ್ರ ಬಸ್ ನಿಲ್ದಾಣ, ಕೆ.ಸಿ.ಮಾರ್ಕೆಟ್, ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಕಂದಗಲ್ ಶ್ರೀ ಹನುಮಂತರಾಯರ ರಂಗಮಂದಿರದವರೆಗೆ ನಡೆಯಲಿದೆ.
ಬೆಳಿಗ್ಗೆ ೧೦ ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಜರುಗುವುದು. ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಹಾಗೂ ಜಿಲ್ಲೆಯ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಎಲ್ಲಾ ಸಮುದಾಯದ ಗಣ್ಯರು ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

