ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಧಾರ್ಮಿಕ ಕಾರ್ಯಕ್ರಮಗಳು ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿಯನ್ನು ನೀಡುತ್ತವೆ. ಪುರಾಣ ಪ್ರವಚನ ಆಲಿಸುವುದರಿಂದ ಮನಸ್ಸು ಶುದ್ಧಗೊಳ್ಳುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ನಗರದ ನಂದಿಕೋಲ್ ಓಣಿಯಲ್ಲಿ ಶ್ರೀ ಮಲ್ಲಿಕಾರ್ಜುನ ಜಾತ್ರೆ ಮಹೋತ್ಸವ ನಿಮಿತ್ತ ಹಮ್ಮಿಕೊಂಡ ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ಪುರಾಣ ಪ್ರವಚನ ಮಂಗಲೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ದೇವರು, ಧರ್ಮ, ಆಚಾರ-ವಿಚಾರ, ಸಂಪ್ರದಾಯ, ಸಂಸ್ಕೃತಿ, ಸಂಸ್ಕಾರ, ಮಾನವೀಯ ಮೌಲ್ಯಗಳಿಂದ ಕೂಡಿದ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವಲ್ಲಿ ಪುರಾಣ, ಸತ್ಸಂಗ ಕಾರ್ಯಕ್ರಮಗಳು ಅತ್ಯವಶ್ಯಕ. ಮಾನವ ತನ್ನ ಬದುಕಿನ ಜಟಾಪಟಿಯ ಮದ್ಯೆಯೂ ಜೀವನ ಪವಿತ್ರಗೊಳಿಸಲು ಆಧ್ಯಾತ್ಮಿಕ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಶರಣ-ಶರಣೆಯರ, ಮಹಾತ್ಮರ ಜೀವನ ಚರಿತ್ರೆಗಳನ್ನು ಆಲಿಸುವ ಮೂಲಕ ಸನ್ಮಾರ್ಗದತ್ತ ಸಾಗಬೇಕು ಎಂದರು.
ಈ ವೇಳೆ ಕಾರ್ಯಕ್ರಮದ ಸಾನಿಧ್ಯ ವಹಿಸಿದ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯ ಆಶೀರ್ವಚನ ನೀಡಿದರು.
ಸಾನಿಧ್ಯವನ್ನು ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯ, ಮಾಜಿ ಶಾಸಕ ಶರಣಪ್ಪ ಸುಣಗಾರ, ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಅಶೋಕ ವಾರದ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಣಮಂತ ಸುಣಗಾರ, ಗಣ್ಯ ವ್ಯಾಪಾರಸ್ಥ ಬಸವರಾಜ್ ವಸ್ತ್ರದ, ಚನ್ನು ಪಟ್ಟಣಶೆಟ್ಟಿ, ಸಂಗನಬಸವ ಬಿರಾದಾರ ಸೇರಿದಂತೆ ದೇವಸ್ಥಾನ ಕಮೀಟಿ ಸದಸ್ಯರು ಹಾಗೂ ಭಕ್ತರು ಇದ್ದರು.

