ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಬಸನಗೌಡ ಎಂ.ಪಾಟೀಲರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆ ಜಿಲ್ಲೆಯ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸದಾ ನೆರವು ನೀಡುತ್ತ ಬಂದಿದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಮತ್ತು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ.
ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಎಸ್.ಎಸ್ ಪಿ.ಯು ಕಾಲೇಜಿನ ವಿದ್ಯಾರ್ಥಿನಿ ಸಾನಿಕಾ ಮೆಟಗಾರ, ತೃತೀಯ ಸ್ಥಾನ ಪಡೆದ ಅಕ್ಷತಾ ಚವ್ಹಾಣ ಮತ್ತು ಬರಡೋಲ ಸರಕಾರಿ ಪಿ.ಯು ಕಾಲೇಜಿನ ಲಕ್ಷ್ಮಿ ಶ್ರೀಕಾಂತ ನಂದೂರ ಹಾಗೂ ನಾಲ್ಕನೇ ಸ್ಥಾನ ಪಡೆದೆ ಎಸ್.ಎಸ್ ಪಿಯು ಕಾಲೇಜಿನ ವಿದ್ಯಾರ್ಥಿ ಯುವರಾಜ ಬಗಲಿ ಅವರನ್ನು ಸನ್ಮಾನಿಸಿ ಮತ್ತು ಆರ್ಥಿಕ ನೆರವು ನೀಡಿ ಅವರು ಮಾತನಾಡಿದರು.
ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆ 29ನೇ ಸ್ಥಾನದಲ್ಲಿತ್ತು ಈ ಹಿನ್ನಲೆಯಲ್ಲಿ ಬೋಧನೆ ಗುಣಮಟ್ಟ ಸುಧಾರಿಸಿ, ಪರೀಕ್ಷೆಗೆ ಸಾಕಷ್ಟು ಪೂರ್ವ ಸಿದ್ದತೆ ನಡೆಸುವಂತೆ ಸಚಿವ ಎಂ. ಬಿ. ಪಾಟೀಲ ಅವರು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದರು. ಅದರಂತೆ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಮಂಡಳಿ ಅಧಿಕಾರಿಗಳು, ಶಿಕ್ಷಕರು ಸಾಕಷ್ಟು ತಯಾರಿ ನಡೆಸಿ, ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡಿದ್ದರು. ಇದರಿಂದಾಗಿ ವಿಜಯಪುರ ಜಿಲ್ಲೆ ಈ ಬಾರಿ ಪಲಿತಾಂಶದಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ. ಅಲ್ಲದೇ, ನಾಲ್ಕು ಜನ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ರ್ಯಾಂಕ್ ಪಡೆಯುವ ಮೂಲಕ ಬಸವ ನಾಡಿಗೆ ಕೀರ್ತಿ ತಂದಿದ್ದಾರೆ. ಇಂಥ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಚಿವ ಎಂ. ಬಿ. ಪಾಟೀಲ ಅವರು ಬಿ.ಎಲ್.ಡಿ.ಇ ಸಂಸ್ಥೆ ಮೂಲಕ ಈ ಹಿಂದಿನಿಂದಲೂ ಸಹಾಯ ಮಾಡುತ್ತ ಬಂದಿದ್ದಾರೆ. ಈ ವರೆಗೆ ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಸೀಟು ಪಡೆದ ಸುಮಾರು 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಿದ್ದಾರೆ ಎಂದು ಅವರು ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ. ಕೆ. ಹೊಸಮನಿ ಮಾತನಾಡಿ, ಸಚಿವ ಎಂ. ಬಿ. ಪಾಟೀಲರ ಕಟ್ಟುನಿಟ್ಟಿನ ಸೂಚನೆ ಹಿನ್ನಲೆಯಲ್ಲಿ ಫಲಿತಾಂಶ ಸುಧಾರಣೆಗೆ ಇಲಾಖೆ ವತಿಯಿಂದ ಸಾಕಷ್ಟು ಸಿದ್ದತೆ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀಡುವ ಮೂಲಕ ಎರಡು ಬಾರಿ ಪೂರ್ವ ಸಿದ್ದತೆ ಪರೀಕ್ಷೆ ನಡೆಸಲಾಗಿತ್ತು. ಇದರ ಪರಿಣಾಮವಾಗಿ ಜಿಲ್ಲೆಯ ಫಲಿತಾಂಶ ಹೆಚ್ಚಾಗಿದ್ದು ನಾಲ್ಕು ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ರ್ಯಾಂಕ್ ಪಡೆದಿದ್ದಾರೆ ಎಂದು ಹೇಳಿದರು.
ಕಗ್ಗೋಡ ಸರಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಕೆ. ಎ. ಉಪ್ಪಾರ ಮಾತನಾಡಿ, ರಾಜ್ಯಕ್ಕೆ ರ್ಯಾಂಕ್ ಪಡೆದಿರುವ ನಾಲ್ಕೂ ವಿದ್ಯಾರ್ಥಿಗಳು ಗ್ರಾಮೀಣ ಭಾಗದವರಾಗಿದ್ದಾರೆ. ಈ ಪ್ರತಿಭಾವಂತ ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಂಡು ಯು.ಪಿ.ಎಸ್.ಸಿ ಮತ್ತು ಕೆ.ಪಿ.ಎಸ್.ಸಿ ಸಿದ್ದತೆ ನಡೆಸಿ ಉನ್ನತ ಅಧಿಕಾರಿಗಳಾಗಬೇಕು ಎಂದು ಕಿವಿಮಾತು ಹೇಳಿದರು.
ಇದೇ ವೇಳೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ. ಕೆ. ಹೊಸಮನಿ ಅವರನ್ನು ಬಸನಗೌಡ ಎಂ. ಪಾಟೀಲ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಬಿ. ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿಗಳಾದ ಐ. ಎಸ್. ಕಾಳಪ್ಪನವರ, ಎಸ್. ಎ. ಬಿರಾದಾರ(ಕನ್ನಾಳ), ಬರಡೋಲ ಸರಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಸುರೇಶ ನಾರಾಯಣಕರ, ಉಪನ್ಯಾಸಕ ಟಿ. ಎಂ. ಪವಾರ, ಸಂತೋಷ ಮಸಳಿ, ವಿದ್ಯಾರ್ಥಿಗಳ ಪೋಷಕರು ಮುಂತಾದವರು ಉಪಸ್ಥಿತರಿದ್ದರು.
ಸಂತೋಷ ಲೋಕುರಿ ಸ್ವಾಗತಿಸಿ, ಪರಿಚಯಿಸಿ, ವಂದಿಸಿದರು.

