ಹಸಿವು ನೀಗಿಸುವ ‘ಇಂದಿರಾ ಕ್ಯಾಂಟೀನ್’ ಉದ್ಘಾಟಿಸಿದ ಶಾಸಕ ಲಕ್ಷ್ಮಣ ಸವದಿ | ಜನಸಾಮಾನ್ಯರೊಂದಿಗೆ ಕುಳಿತು ಉಪಾಹಾರ ಸೇವನೆ
ಉದಯರಶ್ಮಿ ದಿನಪತ್ರಿಕೆ
ಅಥಣಿ: ಬಡವರು, ಕಾರ್ಮಿಕರು ಹಾಗೂ ಸಾರ್ವಜನಿಕರ ಹಸಿವು ನೀಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷಿ ಯೋಜನೆಯಾದ ’ಇಂದಿರಾ ಕ್ಯಾಂಟೀನ್’ಅನ್ನು ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಅಧಿಕೃತವಾಗಿ ಉದ್ಘಾಟಿಸಿದರು.
ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಕಟ್ಟಡದ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದ ಶಾಸಕರು, ಬಳಿಕ ಸಾರ್ವಜನಿಕರೊಂದಿಗೆ ಸಾಲಿನಲ್ಲಿ ನಿಂತು ತಾವೇ ತಟ್ಟೆ ಹಿಡಿದು ಆಹಾರ ಪಡೆದು, ಉಪಹಾರ ಸೇವಿಸುವ ಮೂಲಕ ಆಹಾರದ ಗುಣಮಟ್ಟ ಪರೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, “ಗ್ರಾಮೀಣ ಭಾಗದಿಂದ ಪಟ್ಟಣಕ್ಕೆ ಬರುವ ರೈತರು, ಕೂಲಿ ಕಾರ್ಮಿಕರು ಹಾಗೂ ಬಡ ವಿದ್ಯಾರ್ಥಿಗಳಿಗೆ ಹೊಟ್ಟೆತುಂಬ ಊಟ ಸಿಗಬೇಕು ಎನ್ನುವುದು ಈ ಯೋಜನೆಯ ಮುಖ್ಯ ಆಶಯವಾಗಿದೆ ಎಂದರು.
ಪಟ್ಟಣದ ಆಯಕಟ್ಟಿನ ಜಾಗದಲ್ಲಿ ಈ ಕ್ಯಾಂಟೀನ್ ಆರಂಭವಾಗಿರುವುದರಿಂದ ನಿತ್ಯ ನೂರಾರು ಜನರಿಗೆ ಅನುಕೂಲವಾಗಲಿದೆ.
ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪುರಸಭೆ ಸದಸ್ಯರು ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.

