ಮೂವರು ಮಹಿಳಾ ಸಾಧಕಿಯರಿಗೆ ಗೌರವ ಡಾಕ್ಟರೇಟ್ | 86 ವಿದ್ಯಾರ್ಥಿನಿಯರಿಗೆ ಪಿಎಚ್ಡಿ ಪದವಿ | ವಿವಿ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ವಿವರಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇಲ್ಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದ 17ನೇ ಘಟಿಕೋತ್ಸವವನ್ನು ಇದೇ ದಿ. 21 ರಂದು ವಿವಿ ಜ್ಞಾನಶಕ್ತಿ ಆವರಣದ ಕ್ರೀಡಾಂಗಣದಲ್ಲಿ ವಿಶೇಷವಾಗಿ ನಿರ್ಮಿಸಿರುವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ವಿವಿ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ಅವರು, ಘಟಿಕೋತ್ಸವ ಕಾರ್ಯಕ್ರಮದ ಕುರಿತು ಸಂಪೂರ್ಣ ವಿವರಣೆ ನೀಡಿದರು.
ಈ ಘಟಿಕೋತ್ದವದ ಅಧ್ಯಕ್ಷತೆಯನ್ನು ರಾಜ್ಯಪಾಲರು ಹಾಗೂ ಮಹಿಳಾ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆದ ಥಾವರ್ ಚಂದ್ ಗೆಲ್ಹೋಟ್ ವಹಿಸಲಿದ್ದು, ಮುಂಬೈನ ಎಸ್ಎನ್ ಟಿಡಿ ಮಹಿಳಾ ವಿವಿ ಕುಲಪತಿ ಪ್ರೊ.ಉಜ್ವಲಾ ಚಕ್ರದೇವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ, ಕುಲಪತಿ ಪ್ತೊ. ವಿಜಯಾ ಬಿ.ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಹಾಗೂ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್.ಲಕ್ಕಣ್ಣವರ ಉಪಸ್ಥಿತರಿರುವರು ಎಂದು ಅವರು ತಿಳಿಸಿದರು.
ಈ ಘಟಿಕೋತ್ದವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು. ಜಾನಪದ ಕ್ಷೇತ್ರದ ಸಾಧನೆಗಾಗಿ ಧಾರವಾಡದ ಶ್ರೀಮತಿ ಪಾರ್ವತೆವ್ವ ಸಿದ್ದಪ್ಪ ಹೊಂಗಲ್, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಕಲಬುರ್ಗಿಯ ಡಾ.ಸಂಗೀತಾ ಎನ್ ಕಟ್ಟಿಮನಿ, ಉದ್ಯಮ ಮತ್ತು ಸಾಮಾಜಿಕ ಸೇವಾ ಕ್ಷೇತ್ರದ ಸಾಧನೆಗಾಗಿ ಬಾಗಲಕೋಟೆಯ ಶ್ರೀಮತಿ ಆಶಾದೇವಿ ಜಗದೀಶ ಗುಡಗುಂಟಿ ಈ ಮೂವರು ಸಾಧಕಿಯರಿಗೆ ರಾಜ್ಯಪಾಲರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುವರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಿಂದ ವಿವಿಧ ಸಾಧಕ ಮತ್ತು ಸ್ನಾತಕೋತ್ತರ ಕೋಸ್೯ಗಳಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿ ತೇರ್ಗಡೆಯಾದ ಒಟ್ಟು 70 ವಿದ್ಯಾರ್ಥಿನಿಯರಿಗೆ 58 ಚಿನ್ನದ ಪದಕ ಮತ್ತು 12 ನಗದು ಪಾರಿತೋಷಕ ಪದಕಗಳನ್ನು ಪ್ರದಾನ ಮಾಡಲಾಗುತ್ತದೆ. ಈ ಘಟಿಕೋತ್ಸವದಲ್ಲಿ ಒಟ್ಟು 13,441 ವಿದ್ಯಾರ್ಥಿನಿಯರು ಪದವಿ ಪಡೆಯಲು ಅರ್ಹರಾಗಿದ್ದಾರೆ. ಹಾಗೆಯೇ 86 ವಿದ್ಯಾರ್ಥಿನಿಯರಿಗೆ ಪಿಎಚ್ ಡಿ ಪದವಿ ಪ್ರದಾನ ಮಾಡಲಾಗುವುದು
ವಿವಿಯ 17ನೇ ಘಟಿಕೋತ್ಸವವನ್ನು ಯಶಸ್ವಿಯಾಗಿ ಸಂಘಟಿಸಲು ಹಲವಾರು ಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಅವರು ವಿವರಿಸಿದರು.
ಈ ಘಟಿಕೋತ್ದವನ್ನು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಕ್ಕ ಟಿವಿ ಯುಟ್ಯೂಬ್ ಚಾನೆಲ್ ಮೂಲಕ ಲೈವ್ ಕವರೇಜ್ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಇರುವ ಅಕ್ಕಮಹಾದೇವಿ ಮಹಿಳಾ ವಿವಿ ಸಂಲಗ್ನ ಕಾಲೇಜುಗಳ ವಿದ್ಯಾರ್ಥಿನಿಯರು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ಅಕ್ಕ ಟಿವಿ ಯುಟ್ಯೂಬ್ ನ್ಯೂಸ್ ಚಾನೆಲ್ ಮೂಲಕ ಪ್ರಸಾರವಾಗುವ ಲೈವ್ ವರೇಜ್ ವೀಕ್ಷಿಸುವುದರೊಂದಿಗೆ ಘಟಿಕೋತ್ಸವದಲ್ಲಿ ಆನಲೈನ್ ಮೂಲಕ ಭಾಗವಹಿಸಲಿದ್ದಾರೆ. ಇದಕ್ಕಾಗಿ ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.
ಘಟಿಕೋತ್ಸವದ ಸಭಾಂಗಣದಲ್ಲಿ ಹನ್ನೆರಡು ವರ್ಷದೊಳಗಿನ ಮಕ್ಕಳಿಗೆ ಪ್ರವೇಶವಿರುವುದಿಲ್ಲ. ಸಭಾಂಗಣದಲ್ಲಿ ಕ್ಯಾಮೆರಾ, ಮೊಬೈಲ್, ವಾಟರ್ ಬಾಟಲ್, ಕೊಡೆ, ಕೈಚೀಲ ಮುಂತಾದ ವದ್ತುಗಳನ್ನು ನಿಷೇಧಿಸಲಾಗಿದೆ. ಘಟಿಕೋತ್ಸವ ಕಾರ್ಯಕ್ರಮ ನಿಗದಿತ ಸಮಯಕ್ಕೆ ಆರಂಭವಾಗುವುದು. ಆಹ್ವಾನಿತರು ಅಂದು ಬೆಳಿಗ್ಗೆ 11.15 ಗಂಟೆಯೊಳಗೆ ಸಭಾಂಗಣದೊಳಗೆ ಬಂದು ಆಸೀನರಾಗಬೇಕೆಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್.ಲಕ್ಕಣ್ಣವರ, ಆರ್ಥಿಕ ಅಧಿಕಾರಿ ರಾಮಣ್ಣ ಅಥಣಿ, ಘಟಿಕೋತ್ಸವ ಸಂಯೋಜನಾಧಿಕಾರಿ ಪ್ರೊ. ರಾಜಕುಮಾರ ಮಾಲಿಪಾಟೀಲ, ಮಾಧ್ಯಮ ಸಮಿತಿ ಅಧ್ಯಕ್ಷ ಪ್ರೊ.ಓಂಕಾರ ಕಾಕಡೆ, ಡಾ.ತಹಮೀನಾ ಕೋಲಾರ, ಸಂದೀಪ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಅತೀ ಹೆಚ್ಚು ಚಿನ್ನದ ಪದಕ ಪಡೆದ ವಿದ್ಯಾರ್ಥಿನಿಯರು
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿ ವಿಜಯಪುರ ಮುಖ್ಯ ಆವರಣದ ವಿದ್ಯಾರ್ಥಿನಿ ಸಭಾ ಮಹ್ಮದ ರಫೀಕ ಕುಡಚಿ ಅವರು ಎಂ.ಎ
ಸಮಾಜಶಾಸ್ತ್ರ ವಿಷಯದಲ್ಲಿ ಐದು ಚಿನ್ನದ ಪದಕ ಪಡೆದಿದ್ದಾರೆ. ಕಲಬುರ್ಗಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ರೇಖಾ ದೊಡವಾಡ ಅವರು ಎಂ.ಎ.ಕನ್ನಡ ವಿಷಯದಲ್ಲಿ, ಅಕ್ಕಮಹಾದೇವಿ ಮಹಿಳಾ ವಿವಿ ವಿಜಯಪುರ ಮುಖ್ಯ ಆವರಣದ ವಿದ್ಯಾರ್ಥಿನಿ ಗೀತಾ ಸಿ.ಕಾಟಿ ಅವರು ಎಂ.ಎ.ಅರ್ಥಶಾಸ್ತ್ರ ವಿಷಯದಲ್ಲಿ ಹಾಗೂ ಶಹಿಸ್ತಾ ತಜೀನ್ ಮಳ್ಳಿ ಎಂ.ಎಸ್ಸಿ ಆಹಾರ ಸಂಸ್ಕರಣೆ ಮತ್ತು ಪೋಷಣೆ ವಿಷಯದಲ್ಲಿ ತಲಾ ಮೂರು ಚಿನ್ನದ ಪದಕಗಳನ್ನು ಪಡೆದಿದ್ದಾರೆ.

