ಕೋಟಿ ವೃಕ್ಷ ಅಭಿಯಾನ ಅಂಗವಾಗಿ ವೃಕ್ಷೋತ್ಥಾನ ಹೆರಿಟೇಜ್ ರನ್ ಲಾಂಛನ ಅನಾವರಣ
ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಕೋಟಿ ವೃಕ್ಷ ಅಭಿಯಾನ ಕಾರ್ಯಕ್ರಮ ಅಂಗವಾಗಿ ವೃಕ್ಷೋತ್ಥಾನ ಹೆರಿಟೇಜ್ ರನ್ ೨೦೨೩ರ ಲಾಂಛನ ಗುರುವಾರ ಅನಾವರಣಗೊಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿಸೆಂಬರ್ ೨೪ ರಂದು ಐತಿಹಾಸಿಕ ವಿಜಯಪುರದಲ್ಲಿ ಅರಣ್ಯೀಕರಣ ಅಭಿವೃದ್ಧಿಪಡಿಸುವುದರ ಜೊತೆಗೆ ಸ್ಮಾರಕಗಳ ಕುರಿತು ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ವೃಕ್ಷೋಥಾನ್ ಹೆರಿಟೇಜ್ ರನ್-೨೦೨೩ಅನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಪರಿಸರ ರಕ್ಷಣೆ ಜೊತೆಗೆ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಮಹತ್ವ ಕುರಿತು ಪರಿಣಾಮಕಾರಿಯಾಗಿ ಪ್ರಚಾರಗೊಳಿಸಲಾಗುವುದು. ಐತಿಹಾಸಿಕ ಸ್ಮಾರಕಗಳ ಮಹತ್ವದ ಕುರಿತು ಜನರಲ್ಲಿ ಆಸಕ್ತಿ ಮೂಡಿಸಿ, ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಜನರಲ್ಲಿ ಮರ ಬೆಳೆಸುವ ಪರಿಸರ ಉಳಿಸುವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಸ್ಮಾರಕಗಳ ಸಂರಕ್ಷಣೆ ಮಹತ್ವ ಈ ಮೂಲಕ ಸಾರಲಾಗುತ್ತಿದೆ ಎಂದು ಹೇಳಿದರು.
ಈ ಹಿಂದೆ ಕೋಟಿವೃಕ್ಷ ಅಬಿಯಾನ ಆರಂಭಿಸಿ ಪ್ರತಿ ವರ್ಷ ೨೫ ಲಕ್ಷ ಸಸಿಳನ್ನು ನೆಟ್ಟು ೫ ವರ್ಷಗಳಲ್ಲಿ ಒಂದು ಕೋಟಿ ಗಿಡಗಳನ್ನು ವಿಜಯಪುರದಲ್ಲಿ ಮರಗಳನ್ನಾಗಿ ಬೆಳೆಸಬೇಕೆಂಬ ಉದಾತ್ತ ಮನೋಭಾವದಿಂದ ಕೋಟಿ ವೃಕ್ಷ ಆರಂಭಿಸಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಕೋಟಿ ವೃಕ್ಷ ಅಭಿಯಾನದಡಿ ಸಸಿಗಳ ಬೆಳೆಸುವಿಕೆ ಪ್ರಮಾಣ ಕುಂಠಿತಗೊಂಡು, ೨೦೧೭ರ ಮುಂಚೆ ಇದ್ದ ಸ್ಥಿತಿಯೇ ಮರುಕಳಿಸಿದೆ. ಅರಣ್ಯ ಬಲಪಡಿಸುವ ನಿಟ್ಟಿನಲ್ಲಿ ಕೋಟಿ ವೃಕ್ಷ ಅಭಿಯಾನಕ್ಕೆ ಪುನಶ್ಚೇತನ ನೀಡಲಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಹಲವು ವರ್ಷಗಳ ನಂತರ ಬರಗಾಲ ಎದುರಿಸುತ್ತಿದ್ದು, ಈ ಸಂದರ್ಭದಲ್ಲಿ ಕೋಟಿ ವೃಕ್ಷ ಅಭಿಯಾನವನ್ನು
ದೇಶದಲ್ಲಿಯೇ ಅತಿ ಹೆಚ್ಚು ಸ್ಮಾರಕಗಳನ್ನು ಹೊಂದಿರುವ ಎರಡನೇ ನಗರ ವಿಜಯಪುರದ ಐತಿಹಾಸಿಕ ಸ್ಮಾರಕಗಳ ಕುರಿತು ವ್ಯಾಪಕ ಪ್ರಚಾರ ಹಾಗೂ ಜಾಗೃತಿ ಮೂಡಿಸಿ, ಹೆಚ್ಚೆಚ್ಚೆ ಪ್ರವಾಸಿಗರನ್ನು ಜಿಲ್ಲೆಗೆ ಆಕರ್ಷಿಸುವ ನಿಟ್ಟಿನಲ್ಲಿ ವಿಜಯಪುರ ಪ್ರವಾಸೋದ್ಯಮ ಅಭಿವೃದ್ದಿ ಜೊತೆಗೆ ಜಿಲ್ಲೆಯ ಉದ್ದಿಮೆಗಳಿಗೆ, ವ್ಯಾಪಾರಕ್ಕೆ ಉತ್ತೇಜನ ದೊರೆಯಲಿರುವುದರಿಂದ ಈ ಬಾರಿ ಸ್ಮಾರಕಗಳ ರಕ್ಷಣೆ ಜೊತೆಗೆ ಪರಿಸರ ಜಾಗೃತಿ ಮೂಡಿಸಲು ಡಿ.೨೪ ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ವೃಕ್ಷೋತ್ಥಾನ ಹೆರಿಟೇಜ್ ರನ್-೨೦೨೩ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಡಿ.೨೪ ರಂದು ನಡೆಯುವ ಓಟದಲ್ಲಿ ೩,೫ ೧೦ ಮತ್ತು ೨೧ ಕಿ.ಮೀ.ಗಳ ಓಟ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಿಂದ ಆರಂಭಗೊಂಡು ಐತಿಹಾಸಿಕ ಸ್ಮಾರಕಗಳಾದ ಗೋಲಗುಂಬಜ್, ಗಗನಮಹಲ್, ನರಸಿಂಹ ದೇವಸ್ಥಾನ, ಬಾರಾಕಮಾನ ಹಾಗೂ ಮುಖ್ಯ ವೃತ್ತಗಳು, ಸೈನಿಕ ಶಾಲೆ, ಬಿಎಲ್ಡಿಇ ಡೀಮ್ಡ್ವಿವಿ ಆವರಣ ಜ್ಞಾನಯೋಗಾಶ್ರಮದ ಮಲ್ಲಿಕಾರ್ಜುನ ಸ್ವಾಮಿಗಳ ಗದ್ದುಗೆ, ಶತಮಾನಗಳ ಇತಿಹಾಸವಿರುವ ಶ್ರೀ ಸಿದ್ದೇಶ್ವರ ದೇವಾಲಯದ ಮುಂದೆ ಓಟಗಳು ನಡೆಯಲಿವೆ.
ಶತಮಾನದ ಸಂತ ಜ್ಞಾನಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರಿಗೆ ಸಮರ್ಪಿತವಾದ ಈ ಓಟದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಹೊರ ಜಿಲ್ಲೆ, ರಾಜ್ಯಗಳಿಂದ ಅಂದಾಜು ೨ ರಿಂದ ೩ ಸಾವಿರ ಓಟಗಾರರು ಭಾಗವಹಿಸುವ ನಿರೀಕ್ಷೆ ಇದ್ದು, ಒಟ್ಟು ೧೦ ಸಾವಿರ ಜನರು ಈ ಓಟದಲ್ಲಿ ಭಾಗವಹಿಸಲಿದ್ದಾರೆ. ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ಈ ಓಟವನ್ನು ನಿರಂತರವಾಗಿ ಏರ್ಪಡಿಸಲಾಗುವುದು. ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವರು ಆನಲೈನ್ ನೋಂದಣಿ ಮಾಡಿಕೊಳ್ಳುವ ಮೂಲಕ ಆನ್ ಲೈನ್ ನೋಂದಣಿಗೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ, ಪ್ರಾದೇಶಿಕ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆಬಿಜೆಎನ್ಎಲ್ ಅರಣ್ಯ ವಿಭಾಗದ ನಾಗಶೆಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

