ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಗುರುವಾರ ನಡೆದ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆಯ ಮೊದಲ ದಿನ ಭೌತಶಾಸ್ತ್ರ ವಿಷಯದ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗಳನ್ನು ಸಮಗ್ರವಾಗಿ ಅವಲೋಕಿಸಿದರು.
ಪರೀಕ್ಷಾರ್ಥಿಗಳಿಗೆ ಕಲ್ಪಿಸಲಾದ ಕುಡಿಯುವ ನೀರು, ಸಮರ್ಪಕ ಬೆಳಕು ಮತ್ತು ಗಾಳಿ ವ್ಯವಸ್ಥೆ, ಆಸನದ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ನಿಖರವಾಗಿ ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಮೇಲ್ವಿಚಾರಕರು ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸುತ್ತಿರುವುದು, ಅಭ್ಯರ್ಥಿಗಳು ನಿಯಮಾನುಸಾರ ಪರೀಕ್ಷೆಗೆ ಹಾಜರಾಗಿರುವುದು ಹಾಗೂ ಯಾವುದೇ ಲೋಪಗಳಿಗೆ ಅವಕಾಶ ಇಲ್ಲದಂತೆ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಅವರು ಖಚಿತಪಡಿಸಿಕೊಂಡರು.
ಸಿಸಿಟಿವಿ ನಿಗಾ ವ್ಯವಸ್ಥೆ, ಪ್ರವೇಶ ದ್ವಾರಗಳಲ್ಲಿ ಭದ್ರತಾ ತಪಾಸಣೆ ಹಾಗೂ ಪೊಲೀಸ್ ಬಂದೋಬಸ್ತ್ಗಳ ಕುರಿತು ಮಾಹಿತಿ ಪಡೆದು,ವ್ಯವಸ್ಥೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭೌತಶಾಸ್ತ್ರ ಪ್ರಮುಖ ವಿಷಯದ ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ತೋರಿಸುವಂತಿವೆ. ಆದ್ದರಿಂದ ಪರೀಕ್ಷೆಗಳು ಸಂಪೂರ್ಣ ಪಾರದರ್ಶಕವಾಗಿ, ನ್ಯಾಯಬದ್ಧವಾಗಿ ಮತ್ತು ಯಾವುದೇ ಅಡಚಣೆಗಳಿಲ್ಲದೆ ನಡೆಯಬೇಕು ಎಂದ ಅವರು, ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದು, ಪರೀಕ್ಷಾ ಪ್ರಗತಿ ಹಾಗೂ ಕೈಗೊಳ್ಳಲಾಗಿರುವ ವ್ಯವಸ್ಥೆಗಳ ಕುರಿತು ವಿವರಿಸಿದರು.

