6 ತಿಂಗಳು ಚೀಟಿ ಅಮಾನತ್ತು | ಬಾಗಲಕೋಟೆ ಜಿಲ್ಲಾಡಳಿತ ಎಚ್ಚರಿಕೆ
ಉದಯರಶ್ಮಿ ದಿನಪತ್ರಿಕೆ
ಬಾಗಲಕೋಟೆ: ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಎನ್ಎಫ್ಎಸ್ಎ ಹಾಗೂ ಅನ್ನಭಾಗ್ಯ ಯೋಜನೆಗಳಡಿ ಉಚಿತ ಆಹಾರಧಾನ್ಯ ವಿತರಣೆ ನಡೆಯುತ್ತಿದೆ. ಆದರೆ, ಕೆಲವರು ತಮ್ಮ ಪಾಲಿನ ಪಡಿತರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ವರದಿಗಳು ಕೇಳಿಬರುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಕಠಿಣ ಎಚ್ಚರಿಕೆ ನೀಡಿದೆ.
ಯಾವುದೇ ಪಡಿತರ ಚೀಟಿದಾರ ಅಥವಾ ಅದರ ಸದಸ್ಯರು ತಮಗೆ ಹಂಚಿಕೆಯಾದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಪತ್ತೆಯಾದರೆ, ಅಂತಹವರ ಪಡಿತರ ಚೀಟಿಯನ್ನು 6 ತಿಂಗಳ ಅವಧಿಗೆ ಅಮಾನತ್ತು ಪಡಿಸಲಾಗುವುದು. ಇದಲ್ಲದೆ, ಅವರು ಮಾರಾಟ ಮಾಡಿದ ಆಹಾರಧಾನ್ಯದ ಪ್ರಮಾಣಕ್ಕೆ ಅನುಗುಣವಾಗಿ ಮುಕ್ತ ಮಾರುಕಟ್ಟೆ ದರದಂತೆ ದಂಡ ವಿಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಜಂಟಿ ನಿರ್ದೇಶಕರು ಶ್ರೀಶೈಲ ಕಂಕಣವಾಡಿ ಅವರು, ಪಡಿತರವು ಬಡ ಮತ್ತು ಅರ್ಹ ಫಲಾನುಭವಿಗಳಿಗೆ ಸರ್ಕಾರದಿಂದ ನೀಡುವ ಮಹತ್ವದ ಸೌಲಭ್ಯವಾಗಿದ್ದು, ಇದರ ದುರುಪಯೋಗ ತಡೆಯುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.
ಪಡಿತರವನ್ನು ಕಾಳಸಂತೆಗೆ ಮಾರಾಟ ಮಾಡುವಂತಹ ಅನಧಿಕೃತ ಚಟುವಟಿಕೆಗಳಲ್ಲಿ ತೊಡಗದಂತೆ ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಉಲ್ಲಂಘನೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದಾಗಿ ಆಹಾರ ಇಲಾಖೆ ಎಚ್ಚರಿಕೆ ನೀಡಿದೆ.

