ವಿಜಯಪುರದಲ್ಲಿ ನಡೆದ ಮಾದಕ ವಸ್ತು ನಿಯಂತ್ರಣ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಖಡಕ್ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಯುವ ಜನಾಂಗ ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಲು ಇಲಾಖಾಧಿಕಾರಿಗಳು ಸಮನ್ವಯತೆ ಹಾಗೂ ಸಹಕಾರದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ವಸ್ತು ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ವಸತಿ ನಿಲಯಗಳ ಮೇಲೆ ನಿಗಾ ವಹಿಸಬೇಕು. ಶೈಕ್ಷಣಿಕ ಅವಧಿ ಮುಗಿದ ನಂತರ ಮಾದಕ ವಸ್ತು ನಿಯಂತ್ರಣ ಕುರಿತ ಅಭಿಯಾನ ಜಾಗೃತಿ ಹಮ್ಮಿಕೊಳ್ಳಬೇಕು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಖಾಸಗಿ ಹಾಗೂ ಸರ್ಕಾರಿ ಶಾಲೆ ಸೇರಿದಂತೆ ಎಲ್ಲಾ ಶಾಲೆಗಳಲ್ಲಿ ಮಾದಕ ವಸ್ತು ನಿಯಂತ್ರಣ ಕೋಶ ರಚಿಸಿಕೊಳ್ಳಬೇಕು ಶಾಲಾ ಮಕ್ಕಳಿಂದ ಒಂದು ಸಮಿತಿ ರಚಿಸಿ ಮಕ್ಕಳಿಂದ ಕಾರ್ಯಕ್ರಮ ಮಾಡಿಸಿ. ಹಾಸ್ಟೆಲ್ ಕಮಿಟಿ, ಕ್ರೀಡಾ ಮತ್ತು ಸಾಂಸ್ಕೃತಿಕ ಸಮಿತಿ ಮಾದರಿಯಲ್ಲಿ ಮಾದಕ ವಸ್ತು ನಿಯಂತ್ರಣ ಕುರಿತ ಸಮಿತಿ ರಚಿಸಿಕೊಂಡು ವ್ಯಾಪಕ ತಿಳಿವಳಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿಕಾರ್ಜುನ ಕುಸುನಾಳ, ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣವರ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂ ಬಾಬಾ ಮುದ್ದೇಬಿಹಾಳ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಪರಸುರಾಮ ಹಿಟ್ನಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಮಂಟೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಕಾಳೆ, ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವಿವಿಧ ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆ
ಮಾದಕ ದ್ರವ್ಯಗಳ ನಿಯಂತ್ರಣ ಕೇವಲ ಪೊಲೀಸರಿಗೆ ಸೀಮಿತವಾಗದೆ, ಎಲ್ಲ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಅರಣ್ಯ ಇಲಾಖೆ, ಆರೋಗ್ಯ ಮತ್ತು ಶಿಕ್ಷಣ ಇಲಾಖೆ, ಔಷಧ ನಿಯಂತ್ರಣ ಇಲಾಖೆ, ಅಬಕಾರಿ ಇಲಾಖೆ ಅಧಿಕಾರಿಗಳು ಮಾದಕ ವಸ್ತು ಸೇವನೆಯ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಮಾದಕ ವಸ್ತುಗಳ ಬೆಳೆ ಬೆಳೆಯದಂತೆ ಜಾಗೃತಿ ಮೂಡಿಸಬೇಕು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಬೆಳೆ ಬೆಳೆಯದಂತೆ ಕಾನೂನು ಅರಿವು, ಜಾಗೃತಿ ಮೂಡಿಸಬೇಕು. ಬಾರ್ ರೆಸ್ಟೊರೆಂಟ್ ಆವರಣದಲ್ಲಿ ಸೂಚನಾ ಫಲಕಗಳನ್ನು ಪ್ರದರ್ಶಿಸುವಂತೆ ನೋಡಿಕೊಳ್ಳಬೇಕು. ಈ ಬಗ್ಗೆ ನಿರಂತರವಾಗಿ ಪರಿಶೀಲನೆ ನಡೆಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾ ಮಟ್ಟದ ಮಾದಕ ದ್ರವ್ಯಗಳ ಹಾವಳಿ ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್ (ಓ-ಅಔಖಆ) ಸಮಿತಿಯು ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ನಡೆದ ಮಾದಕ ದ್ರವ್ಯ ಜಪ್ತಿ ಮತ್ತು ಕಾನೂನು ಕ್ರಮಗಳ ಬಗ್ಗೆ ಜಿಲ್ಲೆಯಾದ್ಯಂತ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ.
೨೦೨೪ನೇ ಸಾಲಿನಲ್ಲಿ: ಒಟ್ಟು ೨೮ ಪ್ರಕರಣಗಳು ದಾಖಲಾಗಿದ್ದು, ೨೯೭ ಕೆ.ಜಿ. ೮೭೨ ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿತ್ತು. ಇದರಲ್ಲಿ ೩೭೩ ಕೆ.ಜಿ. ೫೭೪ ಗ್ರಾಂ ಗಾಂಜಾವನ್ನು ನಾಶಪಡಿಸಲಾಗಿದೆ.
೨೦೨೫ನೇ ಸಾಲಿನಲ್ಲಿ: ೩೩೮ ಕೆ.ಜಿ. ೦೩೭ ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಜೊತೆಗೆ ೧೮ ಕೆ.ಜಿ. ೪೩೨ ಗ್ರಾಂ ಅಫೀಮು ವಶಪಡಿಸಿಕೊಳ್ಳಲಾಗಿದ್ದು, ಗಣನೀಯ ಪ್ರಮಾಣದ ಮಾದಕ ದ್ರವ್ಯವನ್ನು ನಾಶಪಡಿಸಲಾಗಿದೆ.
ಪ್ರಸಕ್ತ ವರ್ಷದಲ್ಲಿ ಇಲ್ಲಿಯವರೆಗೆ ೧೩ ಪ್ರಕರಣಗಳು ದಾಖಲಾಗಿದ್ದು, ಸುಮಾರು ೯ ಕೆ.ಜಿ. ೫೩೨ ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ವಿವರಿಸಿದರು.

ಕೋಟ್ಪಾ ಕಾಯ್ದೆ ಪರಿಣಾಮಕಾರಿ ಜಾರಿಗೆ ಕಟ್ಟುನಿಟ್ಟಿನ ಸೂಚನೆ
ವಿಜಯಪುರ ಜಿಲ್ಲೆಯಾದ್ಯಂತ ಇರುವ ಶಾಲಾ-ಕಾಲೇಜ್ ಆವರಣದ ೧೦೦ ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಉತ್ಪನ್ನಗಳ ಮಾರಾಟವಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ ನೀಡಿದರು.
ಶಾಲೆಯ ಮುಖ್ಯೋಪಾಧ್ಯಾಯರು ಸೇರಿದಂತೆ ಶಾಲಾ ಅಭಿವೃದ್ಧಿ ಸಮಿತಿಯವರು ಕೊಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು, ಅರಿವು ಮೂಡಿಸಬೇಕು. ತಂಬಾಕು ಉತ್ಪನ್ನಗಳ ಉಪಯೋಗದಿಂದ ದುಷ್ಪರಿಣಾಮ ಹಾಗೂ ಕಾಯ್ದೆಯ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅವರು ಸೂಚನೆ ನೀಡಿದರು.

