ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಜಿಲ್ಲಾಡಳಿತ | ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಕ್ರೋಶ | ಆಮ್ ಆದ್ಮಿ ಪಾರ್ಟಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಗಾಂಧಿ ಚೌಕ್ನಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೇ 3 ರಂದು ನಡೆಯಲಿರುವ ನೀಟ್ (NEET) ಪರೀಕ್ಷಾ ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳು ಇಲ್ಲದಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಕ್ರೋಶ ವ್ಯಕ್ತಪಡಿಸಿದರು.
ವಿಜಯಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಫ್ಯಾನ್ಗಳ ವ್ಯವಸ್ಥೆ ಇಲ್ಲದಿರುವುದು, ನಿರಂತರ ವಿದ್ಯುತ್ ಪೂರೈಕೆಯ ಕೊರತೆ ಇರುವುದು ಮತ್ತು ಬೇಸಿಗೆಯ ತೀವ್ರ ಬಿಸಿಲಿನಲ್ಲಿ (40–42 ಡಿಗ್ರಿ ಸೆಲ್ಸಿಯಸ್) ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಪರೀಕ್ಷಾ ಕೊಠಡಿಗಳಲ್ಲಿ ಫ್ಯಾನ್ ಇದ್ರೆ ವಿದ್ಯುತ್ ಇಲ್ಲ, ವಿದ್ಯುತ್ ಇದ್ರೆ ಫ್ಯಾನ್ ಇಲ್ಲ.. ಕೆಲವೊಂದು ಕೊಠಡಿಗಳಲ್ಲಿ ವಿದ್ಯುತ್ ಹಾಗೂ ಫ್ಯಾನ್ ಪಾಯಿಂಟ್ ಗಳೇ ಇಲ್ಲ.
ಇದರಿಂದ ವಿದ್ಯಾರ್ಥಿಗಳ ಆರೋಗ್ಯಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಹೆಚ್ಚಿದೆ ಹಾಗೂ ಪರೀಕ್ಷೆಯಲ್ಲಿ ಏಕಾಗ್ರತೆ ಕಾಯ್ದುಕೊಳ್ಳುವುದು ಅಸಾಧ್ಯವಾಗುತ್ತದೆ ಎಂದು ಭೋಗೇಶ್ ಸೋಲಾಪುರ್ ಹೇಳಿದರು.
ಆಮ್ ಆದ್ಮಿ ಪಾರ್ಟಿ ವಿದ್ಯಾರ್ಥಿಗಳ ಹಿತಕ್ಕಾಗಿ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣದ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆಡಳಿತ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಒತ್ತಾಯಿಸುತ್ತಿದರು.

“ನೀಟ್ ಪರೀಕ್ಷೆಯು ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರಕ ಪರೀಕ್ಷೆ. ಇಂತಹ ಮುಖ್ಯ ಪರೀಕ್ಷೆಯ ಸಮಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಕಷ್ಟಪಡುತ್ತಿದ್ದರೆ ಅದು ಸರ್ಕಾರದ ವೈಫಲ್ಯವಾಗುತ್ತದೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಜಿಲ್ಲಾಡಳಿತ ಚೆಲ್ಲಾಟ ಆಡುತ್ತಿದೆ.
ತಕ್ಷಣ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ಅನುಕೂಲಕರ ವಾತಾವರಣವನ್ನು ಒದಗಿಸಬೇಕು.”
– ಭೋಗೇಶ್ ಸೋಲಾಪುರ್
ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷರು

