ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ರಿಂದ ಎಂ.ಬಿ.ಬಿ.ಎಸ್ ಕಲಿಕೆಗೆ ಹಣಕಾಸು ನೆರವು
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದರೂ ಆರ್ಥಿಕ ಸಮಸ್ಯೆಯಿಂದಾಗಿ ಸಂಕಷ್ಟದಲ್ಲಿದ್ದ ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಹಣಕಾಸು ನೆರವು ನೀಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ.
ಶನಿವಾರ ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಇಬ್ಬರು ವಿದ್ಯಾರ್ಥಿಗಳಾದ ಆಲಮೇಲದ ವಿದ್ಯಾರ್ಥಿ ಉದಯಕುಮಾರ ನಾರಾಯಣಕರ ಮತ್ತು ರತ್ನಾಪುರದ ಮನೋಹರ ಹರಗೆ ಅವರ ಎಂ.ಬಿ.ಬಿ.ಎಸ್ ಕೋರ್ಸಿನ ಬೋಧನಾ ಶುಲ್ಕ, ಊಟ ಮತ್ತು ವಸತಿ (ಹಾಸ್ಟೇಲ್ ಮತ್ತು ಮೆಸ್)ಕ್ಕೆ ಅಗತ್ಯವಾಗಿರುವ ಹಣದ ಚೆಕ್ ನ್ನು ಸಚಿವರು ವಿತರಿಸಿದರು.
ಬಳಿಕ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಶ್ರಮವಹಿಸಿ, ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು. ಶಿಕ್ಷಣಕ್ಕೆ ಅಗತ್ಯವಾಗಿರುವ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಂಡು ಪೋಷಕರು ಮತ್ತು ಬಸವನಾಡು ವಿಜಯಪುರ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹೇಳಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟಾರ್ ಡಾ. ಆರ್.ವಿ.ಕುಲಕರ್ಣಿ ಮತ್ತು ಅಕೌಂಟ್ಸ್ ಸುಪರಿಂಟೆಂಡೆಂಟ್ ಎಸ್. ಎಸ್. ಪಾಟೀಲ, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಸಚಿವರಿಂದ ಆರ್ಥಿಕ ನೆರವು ಪಡೆದ ವಿದ್ಯಾರ್ಥಿಗಳ ಹಿನ್ನೆಲೆ
ಆಲಮೇಲದ ವಿದ್ಯಾರ್ಥಿ ಉದಯಕುಮಾರ ನಾರಾಯಣಕರ
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಎಂ.ಬಿ.ಬಿ.ಎಸ್ ಸೀಟು ಪಡೆದಿದ್ದಾರೆ. ಇವರ ತಂದೆ ಸಂಜೀವಕುಮಾರ ನಾರಾಯಣಕರ ಮತ್ತು ತಾಯಿ ಮಹಾದೇವಿ ನಾರಾಯಣಕರ ಇಬ್ಬರೂ ಕೃಷಿ ಕಾರ್ಮಿಕರಾಗಿದ್ದಾರೆ. ಈ ವಿದ್ಯಾರ್ಥಿಗೆ ಎಂ.ಬಿ.ಬಿ.ಎಸ್ ಕೋರ್ಸಿಗೆ ಅಗತ್ಯವಾಗಿರುವ ರೂ.1 ಲಕ್ಷ 88, ಸಾವಿರದ 850 ಮೊತ್ತದ ಚೆಕ್ ನ್ನು ಸಚಿವರು ವಿತರಿಸಿದರು.
ಎರಡನೇ ವಿದ್ಯಾರ್ಥಿ ತಿಕೋಟಾ ತಾಲೂಕಿನ ರತ್ನಾಪುರದ ಮನೋಹರ ಹರಗೆ ಬೆಂಗಳೂರಿನಲ್ಲಿರುವ ಬಿ.ಎಂ.ಅರ್.ಸಿ.ಐ ವೈದ್ಯಕೀಯ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ಸೀಟು ಪಡೆದಿದ್ದಾನೆ. ಈ ವಿದ್ಯಾರ್ಥಿಗೆ ಬೇಕಾದ ರೂ. 1 ಲಕ್ಷ 28 ಸಾವಿರದ 400 ಮೊತ್ತದ ಚೆಕ್ ನ್ನು ಸಚಿವರು ವಿತರಿಸಿದರು.
ವಿದ್ಯಾರ್ಥಿಯ ತಂದೆ ಬಸಪ್ಪ ಹರಗೆ ಮತ್ತು ತಾಯಿ ಯಮನವ್ವ ಹರಗೆ ರೈತರಾಗಿದ್ದು, ಎರಡು ಎಕರೆ ಹೊಲ ಹೊಂದಿದ್ದಾರೆ.

