ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಶಾಮನೂರ ಹಾಗೂ ಬಾಗಲಕೋಟೆಯಲ್ಲಿ ಉಮೇಶ್ ಮೇಟಿ ಗೆ ವಿಜಯಮಾಲೆ | ಬಿಜೆಪಿಗೆ ಮುಖಭಂಗ
ಉದಯರಶ್ಮಿ ದಿನಪತ್ರಿಕೆ
ದಾವಣಗೆರೆ: ಐದು ರಾಜ್ಯಗಳ ಚುನಾವಣೆ ಫಲಿತಾಂಶದೊಂದಿಗೆ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ.
ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಕೊನೆಗೂ ಪ್ರಯಾಸದ ಗೆಲುವು ದಾಖಲಿಸಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ವಿರುದ್ಧ 5708 ಮತಗಳ ಅಂತರದಿಂದ ಗೆದ್ದಿದ್ದು, 20ನೇ ಸುತ್ತಿನ ಎಣಿಕೆ ಬಳಿಕ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.
ಬಾಗಲಕೋಟೆಯಲ್ಲಿ ಹೆಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಬಿಜೆಪಿಯ ತಮ್ಮ ಪ್ರತಿಸ್ಪರ್ಧಿ ವಿರುದ್ಧ 22,332 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದು ಕ್ಷೇತ್ರವನ್ನು ಮರಳಿ ಕಾಂಗ್ರೆಸ್ ತನ್ನ ತೆಕ್ಕೆಗೆ ಪಡೆದುಕೊಂಡಿದೆ.
ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಪ್ರಬಲ ಪೈಪೋಟಿ ನೀಡಿದ್ದರೂ ಅಂತಿಮವಾಗಿ ಸೋಲುಂಡಿದ್ದಾರೆ. ಹೆಚ್.ವೈ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ ಟಿಕೆಟ್ ನೀಡಲು ನಿರ್ಧರಿಸಿದ್ದ ಕಾಂಗ್ರೆಸ್, ಮೇಟಿ ಪುತ್ರ ಉಮೇಶ್ಅವರನ್ನು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಉಮೇಶ್ ಮೇಟಿ ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದರು.
ಎಚ್ ವೈ ಮೇಟಿ ಅವರ ಪುತ್ರ ಉಮೇಶ್ ಮೇಟಿ 98,919 ಮತಗಳನ್ನು ಪಡೆದರೆ, ಮಾಜಿ ಶಾಸಕ ಮತ್ತು 2023 ರಲ್ಲಿ ಪರಾಜಿತ ಅಭ್ಯರ್ಥಿಯಾಗಿದ್ದ ಬಿಜೆಪಿಯ ವೀರಭದ್ರಯ್ಯ ಚರಂತಿಮಠ 76,587 ಮತಗಳನ್ನು ಪಡೆದರು.


