ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದಲ್ಲಿ ಸೋಮವಾರ ನಾನಾ ಅಭಿವೃದ್ದಿ ಕಾಮಗಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಅವರು ಚಾಲನೆ ನೀಡಿದರು.
ಬೆಳಿಗ್ಗೆ ೧೦ ಗಂಟೆಗೆ ಗೋಲ್ ಗುಂಬಜ್ ನಿಂದ ಹಕೀಮ್ ಚೌಕ್ ವರೆಗೆ ೨ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ಬಳಿಕ ವಾರ್ಡ್ ನಂ.೧೮ ರಲ್ಲಿ ೨ ಕೋಟಿ ರೂ. ವೆಚ್ಚದಲ್ಲಿ ಪರಿಶಿಷ್ಟ ವರ್ಗಗಳ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಹಾಗೂ ಹರಣಶಿಖಾರಿ ಓಣಿಯಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿದರು.
ಅಲ್ಲಿಂದ ನೇರವಾಗಿ ಕಾಸಗೇರಿ ಖಾದಿ ಗ್ರಾಮೋದ್ಯೋಗ ಮಾರ್ಗವಾಗಿ ಮುಬೀನ್ ಸರ್ಕಲ್ ಅಥಣಿ ಗಲ್ಲಿ ಮುಖಾಂತರ ಕೇಂದ್ರ ಬಸ್ ನಿಲ್ದಾಣವರೆಗೆ ಒಳಚರಂಡಿ, ಮಳೆ ನೀರು ಚರಂಡಿ, ಅಲಂಕಾರಿಕ ಬೀದಿ ದೀಪ ಅಳವಡಿಸಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಗಂಗಾಧರ ಸಂಬಣ್ಣಿ ಮಹಾಪೌರ ಎಂ.ಎಸ್. ಕರಡಿ, ಪಾಲಿಕೆ ಸದಸ್ಯರು, ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.

