ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದಿಂದ ಜಿಲ್ಲಾಧಿಕಾರಿ ಡಾ.ಆನಂದ್ ಕೆ ಅವರಿಗೆ ಮನವಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಕೆಲವರಿಗೆ ಪರಿಶಿಷ್ಟ ಪಂಗಡದ ವಾಲ್ಮೀಕಿ ಜಾತಿಯ ನಕಲಿ ಜಾತಿ ಪ್ರಮಾಣ ನೀಡಿರುವವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದಿಂದ ಜಿಲ್ಲಾಧಿಕಾರಿ ಡಾ.ಆನಂದ ಕೆ ಹಾಗೂ ಡಿವೈಎಸ್ಪಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಕೊಂಡಗೂಳಿ ಗ್ರಾಮದ ಲಚ್ಚೆಪ್ಪ ಬಸಪ್ಪ ಬಸವಪಟ್ಟಣ ಇವರು ಹಿಂದೂ ಕಬ್ಬಲಿಗ ಜಾತಿಗೆ ಸೇರಿದವರಾಗಿರುತ್ತಾರೆ. ಆದರೆ ಇವರ ಮಗ ಮಹಾಂತೇಶ ಲ. ಬಸವಪಟ್ಟಣ ಇವನ ಜಾತಿ ಹಾಗೂ ಜನ್ಮ ದಿನಾಂಕ ದೃಢೀಕರಣ ಪತ್ರದಲ್ಲಿ ಹಿಂದೂ ವಾಲ್ಮೀಕಿ ಎಂದು ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡು ವಾಲ್ಮಿಕಿ ಸಮಾಜಕ್ಕೆ ಅನ್ಯಾಯ ಮಾಡಿರುತ್ತಾರೆ. ಜಿಲ್ಲೆಯಲ್ಲಿ ಇದೇ ರೀತಿ ಸುಮಾರು 5700 ನಕಲಿ ಜಾತಿ ಪ್ರಮಾಣ ಪತ್ರಗಳನ್ನು ತಳವಾರ, ಅಂಬಿಗ, ಕಬ್ಬಲಿಗ, ಡೋಹರ ಕೋಳಿ, ಠೋಕರೆ ಕೋಳಿ, ನಾಯ್ಕಡ ಅಂತ ಹೇಳಿ ಈ ಹೆಸರಿನ ಮೇಲೆ ನಕಲಿ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡು ನಿಜವಾದ ವಾಲ್ಮೀಕಿ ಜನಾಂಗಕ್ಕೆ ಹಾಗೂ ಸರ್ಕಾರಕ್ಕೆ ಮೋಸಮಾಡಿ ಸರ್ಕಾರದ ಯೋಜನೆಗಳನ್ನು ಹಾಗೂ ಅಟ್ರಾಸಿಟಿ ಕೇಸ್ಗಳನ್ನು ಹಾಕಿ ಅಮಾಯಕ ಜನರನ್ನು ಮೋಸ ಮಾಡಿರುತ್ತಾರೆ. ಈ ಕುರಿತು ಸಾಕಷ್ಟು ಸಲ ಮನವಿ ಕೊಟ್ಟರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ಈ ಕುರಿತು ಇತ್ತೀಚೆಗೆ ವಿಜಯಪುರ ಜಿಲ್ಲೆಗೆ ಆಗಮಿಸಿದ ಎಸ್ಟಿ ಎಸ್ಟಿ ಆಯೋಗದ ಅಧ್ಯಕ್ಷರ ಸಭೆಯಲ್ಲಿ ಬಹಿರಂಗವಾಗಿ ಹೇಳಲಾಗಿದ್ದು ಇದರ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಕಾರಣ ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹಾಗೂ ನಕಲಿ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡವರ ಹಾಗೂ ನೀಡಿದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು ಮಾಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಹಣಮಂತ ಜೋಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

