ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯ. ಶುದ್ಧ ಕುಡಿಯುವ ನೀರಿನ ಘಟಕವನ್ನು ಮಾಜಿ ಸಚಿವ ದಿ.ಎಮ್.ಸಿ.ಮನಗೂಳಿ ಪ್ರತಿಷ್ಠಾನದಿಂದ ಸ್ಥಾಪಿಸುವ ಮೂಲಕ ಮನಗೂಳಿ ಕುಟುಂಬ ಸಾಮಾಜಿಕ ಸೇವೆ ಮಾಡುತ್ತಿರುವುದು ಶ್ಲಾಘನೀಯ ಎಂದು ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು..
ನಗರದ ಪೂಜ್ಯಶ್ರೀ ಚನ್ನವೀರ ಸ್ವಾಮೀಜಿ ಬಸ್ ನಿಲ್ದಾಣದಲ್ಲಿ ದಿ.ಎಂ.ಸಿ.ಮನಗೂಳಿ ಪ್ರತಿಷ್ಠಾನದಿಂದ ಪ್ರಯಾಣಿಕರ ಹಿತಕ್ಕಾಗಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಕಲುಷಿತ-ಮುಕ್ತ ನೀರು ಒದಗಿಸುವ ಉದ್ದೇಶದಿಂದ ಸಿಂದಗಿ ಬಸ್ ನಿಲ್ದಾಣದಲ್ಲಿ ಹೊಸ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆಗೊಂಡಿರುವುದು ಸಂತಸ ತಂದಿದೆ. ಈ ಘಟಕ ಪ್ರಯಾಣಿಕರ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಈ ವೇಳೆ ಶಾಸಕ ಅಶೋಕ ಮನಗೂಳಿ ಮಾತನಾಡಿ, ನಮ್ಮ ತಂದೆಯವರಾದ ದಿವಂಗತ ಎಂ.ಸಿ.ಮನಗೂಳಿ ಅವರ ಹೆಸರಿನ ಮೇಲೆ ದಿ.ಎಂ.ಸಿ.ಮನಗೂಳಿ ಪ್ರತಿಷ್ಠಾನವನ್ನು ಸ್ಥಾಪಿಸಿ ಅವರ ಕನಸಿನಂತೆ ಅನೇಕ ಸಾಮಾಜಿಕ ಸೇವೆಗಳನ್ನು ಪ್ರತಿಷ್ಠಾನದ ಮೂಲಕ ಮಾಡುತ್ತಾ ಬಂದಿದೆ. ಸಿಂದಗಿ ಮತಕ್ಷೇತ್ರದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮೊದಲ ಹಂತದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರಾರಂಭಿಸಲಾಗಿದೆ. ಮುಂದಿನ ದಿನಮಾನಗಳಲ್ಲಿ ಉಳಿದ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಆರಂಭಿಸಲಾಗುವುದು. ಅದಲ್ಲದೇ ಪ್ರತಿಷ್ಠಾನದಿಂದ ಆರೋಗ್ಯ, ಶಿಕ್ಷಣ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದ ಅವರು ಪ್ರಯಾಣಿಕರ ಆರೋಗ್ಯದ ಹಿತ ದೃಷ್ಟಿಯಿಂದ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರಾರಂಭಿಸಲಾಗಿದೆ. ಇದರ ಸದುಪಯೋಗವನ್ನು ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ಅಶೋಕ್ ವಾರದ, ಆಲಮೇಲ ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ ಕೊಳಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಪೂಜಾರಿ, ಸಂದೀಪ ಚೌರ, ಶಾಂತು ರಾಣಾಗೋಳ, ಸಾಯಬಣ್ಣ ಪುರಾದಾಳ, ಎಂ.ಎ.ಖತೀಬ, ಸುನಂದಾ ಯಂಪುರೆ, ಜಯಶ್ರೀ ಹದನೂರ, ಶಶಿಕಲಾ ಅಂಗಡಿ ಸೇರಿದಂತೆ ಇತರರು ಇದ್ದರು.

