ರಾಜ್ಯದ 31 ಜಿಲ್ಲೆಗಳ 200 ಮಕ್ಕಳಿಗೆ ಪ್ರತಿಭಾ ಪುರಸ್ಕಾರ | ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತಿತರ ಗಣ್ಯರು ಭಾಗಿ | ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರು ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ಚಿಕ್ಕಬಳ್ಳಾಪುರ: ರಾಜ್ಯದ ಫಲಪುಪ್ಪಗಳ ಗಿರಿಧಾಮ ನಾಡು ಎಂದೇ ಖ್ಯಾತಿ ಪಡೆದಿರುವ ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ಮೇ.31 ರಂದು ಭಾನುವಾರ ರಾಜ್ಯ ಮಟ್ಟದ ಕೆಯುಡಬ್ಲ್ಯೂಜೆ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಎಂ.ಶಿವಾನಂದ ತಗಡೂರು ಹೇಳಿದರು.
ನಗರದ ಪತ್ರಕರ್ತರ ಭವನದಲ್ಲಿ ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅತಿಥ್ಯವನ್ನು ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವಹಿಸಿಕೊಂಡಿದ್ದು ರಾಜ್ಯದ ಸುಮಾರು 200 ಕ್ಕೂ ಹೆಚ್ಚು ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಗುವುದೆಂದರು.
ಭಾರತ ರತ್ನ ಸರ್ಎಂವಿ, ಖ್ಯಾತ ವಿಜ್ಞಾನಿ ಸಿಎನ್ಆರ್ ರಾವ್ ರವರ ಹುಟ್ಟಿ ಬೆಳೆದ ಚಿಕ್ಕಬಳ್ಳಾಪುರ ಜಿಲ್ಲೆಯು ನಾಡಿಗೆ ಅನೇಕ ದಿಗ್ಗಜರನ್ನು ಕೊಡುಗೆಯಾಗಿ ನೀಡಿದ್ದು, ಅನೇಕ ಐತಿಹ್ಯಗಳನ್ನು ಜಿಲ್ಲೆಯು ಹೊಂದಿದೆ. ವಿಶೇಷವಾಗಿ ಫಲಪುಪ್ಪಗಳ ಗಿರಿಧಾಮ ನಾಡನಾಗಿ ಗಮನ ಸೆಳೆದಿದೆ. ಈ ಹಿನ್ನಲೆಯಲ್ಲಿ ಪ್ರತಿಭಾ ಪುರಸ್ಕಾರ ವಿತರಣೆಯನ್ನು ಈ ಬಾರಿಗೆ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದು ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘವೂ ಅರ್ಥಪೂರ್ಣವಾಗಿ ಕಾರ್ಯಕ್ರಮದ ಯಶಸ್ವಿಗೆ ಸಿದ್ದತೆ ಮಾಡಿಕೊಂಡಿದ್ದು, ಊಟ, ವಸತಿ, ಸಾರಿಗೆ, ನೋಂದಣಿ, ಸಾಂಸ್ಕೃತಿಕ ಚಟುವಟಿಕೆಗಳ ಆಯೋಜನೆಗೆ ಸಂಬಂದಿಸಿದ್ದಂತೆ ಹಲವು ಉಪ ಸಮಿತಿಗಳನ್ನು ರಚಿಸಲಾಗಿದೆ. ಕಾರ್ಯಕ್ರಮದಲ್ಲಿ 200 ಕ್ಕೂ ಹೆಚ್ಚು ಪ್ರತಿಭಾವಂತ ಮಕ್ಕಳ ಜೊತೆಗೆ ಪೋಷಕರು ಹಾಗೂ ಸಂಘದ ವಿವಿಧ ಜಿಲ್ಲೆಗಳ ಹಾಗೂ ರಾಜ್ಯ ಪದಾಧಿಕಾರಿಗಳು ಸೇರಿ 500 ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು
ಸಂಘದ ಜಿಲ್ಲಾಧ್ಯಕ್ಷರಾದ ವಿ.ರವಿಕುಮಾರ್ ಮಾತನಾಡಿ, ಇಡೀ ರಾಜ್ಯಕ್ಕೆ ಮಾದರಿ ಆಗುವ ರೀತಿಯಲ್ಲಿ ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾ ಸಂಘ ಅತಿಥ್ಯ ವಹಿಸಿ ಹಲವು ಸಿದ್ದತೆಗಳನ್ನು ಮಾಡಿಕೊಂಡಿದ್ದು, ಕಾರ್ಯಕ್ರಮದಲ್ಲಿ ಮಾಧ್ಯಮ ಹಾಗೂ ಸ್ತ್ರೀಶಕ್ತಿ ಸಂಘಗಳು ತಯಾರಿಸಿ ಉತ್ಪನ್ನಗಳ ಮಾರಾಟ ಹಾಗೂ ವಸ್ತು ಪ್ರದರ್ಶನ ವ್ಯವಸ್ಥೆ ಮಾಡಲಾಗಿದೆ. ಬರುವ ಎಲ್ಲಾ ಪತ್ರಕರ್ತರ ಕುಟುಂಬಗಳಿಗೆ ಅಗತ್ಯ ವಸತಿ ಸೌಕರ್ಯ ಹಾಗೂ ಕಾರ್ಯಕ್ರಮದಲ್ಲಿ ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗುತ್ತಿದ್ದು, ನೋಂದಣಿ ಮಾಡಿಕೊಂಡ ದೂರದ ಜಿಲ್ಲೆಗಳವರಿಗೆ ಮಾತ್ರ ವಸತಿ ಸೌಕರ್ಯ ಮಾಡಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಖಜಾಂಚಿ ವಾಸುದೇವ ಹೊಳ್ಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜಪ್ಪ, ರಾಜ್ಯ ಸಮಿತಿ ಸದಸ್ಯರಾದ ಎನ್.ಚಂದ್ರಶೇಖರ್ ಸೇರಿದಂತೆ ಮತ್ತಿತರರು ಇದ್ದರು.
ಪ್ರತಿ ವಿದ್ಯಾರ್ಥಿಗೂ 3 ಸಾವಿರ ರೂ, ನಗದು ಪುರಸ್ಕಾರ
ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯದ ಎಲ್ಲಾ ಜಿಲ್ಲೆಗಳ ಪತ್ರಕರ್ತರ ಮಕ್ಕಳಿಗೆ ರಾಜ್ಯ ಸಂಘದಿಂದ ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ 3000 ಸಾವಿರ ರೂ, ನಗದು, ಸ್ಮರಣಿಕೆ, ಅಭಿನಂದನಾ ಪತ್ರ ವಿತರಿಸಲಾಗುತ್ತಿದೆ.

