ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪರಿಪೂರ್ಣ ವೈದ್ಯಕೀಯ ಅಧ್ಯಯನಕ್ಕೆ ಕೌಶಲ್ಯಾಭಿವೃದ್ಧಿ ತರಬೇತಿ ಅಗತ್ಯ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ ಹೇಳಿದ್ದಾರೆ.
ಶುಕ್ರವಾರ ನಗರದದಲ್ಲಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗದ ವತಿಯಿಂದ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾದ ಪ್ರಥಮ ವರ್ಷದ ಶಸ್ತ್ರ ಚಿಕಿತ್ಸೆ ಆಧಾರಿತ ವಿಭಾಗಗಳ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಯು ದೇಶಾದ್ಯಂತ ವೈದ್ಯಕೀಯ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಚಲಿಸುವ ವಾಹನದ ಮೂಲಕ ಕೌಶಲ್ಯಾಭಿವೃದ್ಧಿ ತರಬೇತಿ ನೀಡುತ್ತಿರುವುದು ಶ್ಲಾಘನೀಯವಾಗಿದೆ. ಬಿ.ಎಲ್.ಡಿ.ಇ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಈಗಾಗಲೇ ವಿಶ್ವದರ್ಜೆಯ ಕೌಶಲ್ಯಾಭಿವೃದ್ಧಿ ಪ್ರಯೋಗಾಲಯ ಕಾರ್ಯನಿರ್ವಹಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದಿದ್ದಾರೆ ಎಂದು ಅವರು ತಿಳಿಸಿದರು.
ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಅವರು ಸ್ವಾಗತಿಸಿ ಮಾತನಾಡಿ, ಶಸ್ತ್ರ ಚಿಕಿತ್ಸೆ ಆಧಾರಿತ ವಿಭಾಗಗಳ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ರೋಗಿಗಳಿಗೆ ಸಂಪೂರ್ಣ ಪ್ರಮಾಣದ ಚಿಕಿತ್ಸೆ ನೀಡುವ ಮುನ್ನ ಇಂಥ ಕೌಶಲ್ಯಾಭಿವೃದ್ಧಿ ತರಬೇತಿಗಳು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತವೆ. ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್ಎಂಸಿ) ನಿಯಮಾವಳಿಗಳ ಪ್ರಕಾರವೂ ಇಂತಹ ತರಬೇತಿಗಳು ಅತ್ಯಗತ್ಯವಾಗಿವೆ ಎಂದು ಹೇಳಿದರು.
ಶಿಬಿರದಲ್ಲಿ ಬಿ.ಎಲ್.ಡಿ.ಇ. ವೈದ್ಯಕೀಯ ಮಹಾವಿದ್ಯಾಲಯ, ಅಲ್ ಅಮೀನ್ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ವಿಭಾಗ, ಎಲುಬು ಮತ್ತು ಕೀಲು ವಿಭಾಗ ಹಾಗೂ ಸ್ತ್ರೀರೋಗ ವಿಭಾಗಗಳ ಸುಮಾರು 60 ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತರಬೇತಿಯ ಪ್ರಯೋಜನ ಪಡೆದುಕೊಂಡರು.
ಈ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ಡಾ. ಎಂ. ಬಿ. ಪಾಟೀಲ, ಡಾ. ವಿಜಯಾ ಪಾಟೀಲ, ಡಾ. ರಮಾಕಾಂತ ಬಳೂರಕರ, ಡಾ. ದೀಪಕ ಚವ್ಹಾಣ, ಡಾ. ದಯಾನಂದ ಬಿರಾದಾರ ಹಾಗೂ ಡಾ. ಪ್ರದೀಪ ಜಾಜು, ಡಾ. ಗಿರೀಶ ಕುಲ್ಲೊಳ್ಳಿ, ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಯ ಅನಿಲಕುಮಾರ, ಅಮನ್ ಅಥಣಿಕರ, ಶ್ರೀನಿವಾಸ ಮುಂತಾದವರು ಉಪಸ್ಥಿತರಿದ್ದರು.

