ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಸಮೀಪದ ಕೃಷ್ಣಾ ನದಿಯಿಂದ ಅಕ್ರಮವಾಗಿ ಮಣ್ಣು ಸಾಗಣೆ ನಡೆಯುತ್ತಿರುವುದನ್ನು ಖಂಡಿಸಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ 218ರ ಕೊಲ್ಹಾರ ಸೇತುವೆ ಪಕ್ಕದ ತೋಟದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಡಂಪರ್ ವಾಹನಗಳನ್ನು ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳದಲ್ಲಿ ರೈತರು ಡಂಪರ್ಗಳನ್ನು ನಿಲ್ಲಿಸಿ, ಅಕ್ರಮ ಮಣ್ಣು ಸಾಗಣೆಗೆ ತಕ್ಷಣ ಕಡಿವಾಣ ಹಾಕುವಂತೆ ಆಗ್ರಹಿಸಿದರು.
ಡಂಪರ್ಗಳಲ್ಲಿ ನಿಯಮ ಮೀರಿ ಮಣ್ಣು ತುಂಬಿ ಸಾಗಿಸಲಾಗುತ್ತಿದ್ದು, ವಾಹನ ಸಂಚಾರದಿಂದ ಏಳುವ ಭಾರೀ ಧೂಳು ಬೆಳೆಗಳ ಮೇಲೆ ಕುಳಿತು ಬೆಳೆ ಹಾನಿಯಾಗುತ್ತಿದೆ ಎಂದು ರೈತರು ಆರೋಪಿಸಿದರು.
ರೈತರಾದ ಮಲ್ಲಪ್ಪ ಗಾಣಿಗೇರ ಮತ್ತು ಲಕ್ಷ್ಮಣ್ ಅಂಬಿಗೇರ ಮಾತನಾಡಿ, “ನದಿಯಲ್ಲಿ ನೀರು ಇಳಿಮುಖವಾಗುತ್ತಿದ್ದಂತೆಯೇ ಮಣ್ಣು ಮಾಫಿಯಾ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. “ಪೊಲೀಸ್ ದೂರು ನೀಡಿ” ಎಂದು ಹೇಳಿ ಅಧಿಕಾರಿಗಳು ಸಮಸ್ಯೆಯನ್ನು ಕಂಡೂ ಕಾಣದಂತೆ ವರ್ತಿಸುತ್ತಿದ್ದಾರೆ, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಡಂಪರ್ಗಳ ಅತಿಯಾದ ಓಡಾಟದಿಂದ ರಸ್ತೆ ಸಂಪೂರ್ಣ ಹಾಳಾಗಿದ್ದು, ಧೂಳಿನ ಮಬ್ಬಿನಿಂದ ವಾಹನ ಸವಾರರಿಗೆ ರಸ್ತೆ ಕಾಣದ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆ 5ರಿಂದ ರಾತ್ರಿ 10ರವರೆಗೆ ನಿರಂತರ ವಾಹನ ಸಂಚಾರದಿಂದ ವಾಯು ಮಾಲಿನ್ಯ ಹೆಚ್ಚಾಗಿ ಸಾರ್ವಜನಿಕರು, ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ತಕ್ಷಣ ಕ್ರಮ ಕೈಗೊಳ್ಳದಿದ್ದರೆ ರಾಷ್ಟ್ರೀಯ ಹೆದ್ದಾರಿ ತಡೆದು ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ನಾಗಪ್ಪ ಏಳಗಂಟಿ, ಮಲ್ಲಯ್ಯ ಮಠಪತಿ, ಸುರೇಶ್ ಉಪ್ಪಾರ, ಬಸವರಾಜ್ ಗಾಣಿಗೇರ್, ಪರಮಾನಂದ ಬರಗಿ ಸೇರಿದಂತೆ ಅನೇಕ ರೈತರು ಭಾಗವಹಿಸಿದ್ದರು.

