ಉದಯರಶ್ಮಿ ದಿನಪತ್ರಿಕೆ
ಇಂಡಿ: ನಾಲ್ವಡಿ ಕೃಷ್ಣರಾಜ ಒಡೆಯರ ಆಡಳಿತವು ದೂರದೃಷ್ಟಿ, ಜನಪರ ಕಲ್ಯಾಣ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಾಕ್ಷಿಯಾಗಿದ್ದು, ಅವರ ಕಾಲದಲ್ಲಿ ರಾಜ್ಯವು ಕೈಗಾರಿಕೆ, ಶಿಕ್ಷಣ, ತಂತ್ರಜ್ಞಾನದಲ್ಲಿ ಭಾರತದಲ್ಲೇ ಮುಂಚೂಣಿಯಲ್ಲಿತ್ತು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಗುರುವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಅವರ 142 ನೇ ಜಯಂತ್ಯೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಸ್ತುತ ನಗರೀಕರಣದ ಸಮಸ್ಯೆಗಳು ಮತ್ತು ನೀರಿನ ಬಿಕ್ಕಟ್ಟುಗಳನ್ನು ಎದುರಿಸುತ್ತಿರುವ ನಮಗೆ, ಶಿವನಸಮುದ್ರ ಜಲವಿದ್ಯುತ್ ಯೋಜನೆ ಮತ್ತು ಕನ್ನಂಬಾಡಿ ಅಣೆಕಟ್ಟು ನಿರ್ಮಾಣದ ಅವರ ದೂರದೃಷ್ಟಿ ಇಂದಿಗೂ ಅತ್ಯಂತ ಪ್ರಸ್ತುತವಾಗಿದೆ ಎಂದು ಹೇಳಿದರು.
ಹೆಣ್ಣು ಮಕ್ಕಳ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಿ, ಉದ್ಯೋಗದಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಕಲ್ಪಿಸಿದ ನಾಲ್ವಡಿ ಕೃಷ್ಣರಾಜರು ಇಂದಿನ ಆಧುನಿಕ ಕಾಲದ ಸಮಾನತೆಯ ಆಶಯಗಳನ್ನು ಅಂದೇ ಕಾರ್ಯರೂಪಕ್ಕೆ ತಂದು, ದಲಿತರ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದ್ದರು ಎಂದು ಹೇಳಿದರು.
ಹಿರಿಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ,ಇಂದಿನ ಅಭಿವೃದ್ಧಿಶೀಲ ಭಾರತಕ್ಕೆ ನಾಲ್ವಡಿ ಅವರ ಆಡಳಿತ ಒಂದು ಮಾದರಿಯಾಗಿದೆ. ಸರ್ ಎಂ. ವಿಶ್ವೇಶ್ವರಯ್ಯ ಮತ್ತು ಮಿರ್ಜಾ ಇಸ್ಮಾಯಿಲ್ ರಂತಹ ಸಮರ್ಥ ದಿವಾನರನ್ನು ಒಳಗೊಂಡು ಅವರು ರೂಪಿಸಿದ ಯೋಜನೆಗಳು ಇಂದಿಗೂ ದೀರ್ಘಾವಧಿ ಪ್ರಯೋಜನ ನೀಡಿವೆ. ಮೈಸೂರು ರಾಜ್ಯಕ್ಕೆ ನೀಡಿದ ಅವರ ಕೊಡುಗೆ ಅಮೂಲ್ಯವಾದುದು ಎಂದು ಹೇಳಿದರು.
ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ ಸೇರಿದಂತೆ ಮಕ್ಕಳು ಉಪಸ್ಥಿತರಿದ್ದರು.

