ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳ ತಡೆಯಲು “ಜಿಲ್ಲಾ ಶುಲ್ಕ ಪರಿಶೀಲನಾ ಸಮಿತಿ” ರಚನೆ ಮಾಡಲು ಆಪ್ ಆಗ್ರಹ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಖಾಸಗಿ ಶಾಲೆಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶೇ.15 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಶಾಲಾ ಶುಲ್ಕವನ್ನು ಹೆಚ್ಚಿಸುತ್ತಿರುವ ಕ್ರಮವನ್ನು ಖಂಡಿಸಿ, ಆಮ್ ಆದ್ಮಿ ಪಾರ್ಟಿ (ಎಎಪಿ) ವಿಜಯಪುರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಭೋಗೇಶ್ ಸೋಲಾಪುರ್ ನೇತೃತ್ವದಲ್ಲಿ, ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತಕ್ಷಣದ ಕ್ರಮಕ್ಕೆ ಆಗ್ರಹಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ “ಜಿಲ್ಲೆಯ ಮಧ್ಯಮ ಹಾಗೂ ಬಡ ವರ್ಗದ ಕುಟುಂಬಗಳು ಈಗಾಗಲೇ ಬೆಲೆ ಏರಿಕೆಯ ಹೊರೆ ಹೊತ್ತಿದ್ದು, ಇಂತಹ ಸಂದರ್ಭದಲ್ಲಿ ವಿಜಯಪುರದ ಖಾಸಗಿ ಶಾಲೆಗಳ ಅನಿಯಂತ್ರಿತ ಶುಲ್ಕ ಹೆಚ್ಚಳವು ಪೋಷಕರ ಮೇಲೆ ಹೆಚ್ಚುವರಿ ಆರ್ಥಿಕ ಭಾರವನ್ನು ಹೊರಿಸುತ್ತಿದೆ” ಎಂದು ಅವರು ಆರೋಪಿಸಿದರು.
“ಕರ್ನಾಟಕ ಶಿಕ್ಷಣ ಇಲಾಖೆಯ ನಿಯಮಗಳ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳು ಗರಿಷ್ಠ ಶೇ.5 ರವರೆಗೆ ಮಾತ್ರ ಶುಲ್ಕ ಹೆಚ್ಚಳ ಮಾಡಬಹುದಾಗಿದ್ದು, ಅದಕ್ಕಿಂತ ಹೆಚ್ಚಿನ ಏರಿಕೆ ನಿಯಮಬಾಹಿರವಾಗಿದೆ.
ಅಲ್ಲದೆ, ಹೆಚ್ಚಿನ ಶಾಲೆಗಳು ಶುಲ್ಕ ಹೆಚ್ಚಳಕ್ಕೆ ಅನುಗುಣವಾಗಿ ಮೂಲಸೌಕರ್ಯ, ಶಿಕ್ಷಕರ ಗುಣಮಟ್ಟ ಅಥವಾ ಶಿಕ್ಷಣದ ಮಟ್ಟದಲ್ಲಿ ಯಾವುದೇ ಗಮನಾರ್ಹ ಸುಧಾರಣೆ ಮಾಡಿಲ್ಲ. ಅತಿಯಾದ ಶುಲ್ಕ ಹೆಚ್ಚಳವು ಶಿಕ್ಷಣ ಕ್ಷೇತ್ರದಲ್ಲಿ ಅಸಮಾನತೆಯನ್ನು ಹೆಚ್ಚಿಸುವುದರ ಜೊತೆಗೆ ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಶಿಕ್ಷಣದ ಹಕ್ಕಿಗೆ ಧಕ್ಕೆಯುಂಟು ಮಾಡಲಿದೆ” ಎಂದು ಭೋಗೇಶ್ ಸೋಲಾಪುರ್ ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಾಧ್ಯಮ ಉಸ್ತುವಾರಿ ಸಂಜು ಶೆಟಗಾರ, ಯುವ ಮುಖಂಡ ಪ್ರಕಾಶ್ ಸಬರದ, ನಗರ ಜಂಟಿ ಕಾರ್ಯದರ್ಶಿ ಜ್ಯೋತಿಭಾ ಹೊನ್ನಕಲಸೆ ಉಪಸ್ಥಿತರಿದ್ದರು.

