ರಾಜ್ಯದಲ್ಲಿ ಖಾಲಿ ಇರುವ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಆದ್ಯತೆ ನೀಡಲು ಸಂತೋಷ್ ಬಗಲಿ ಆಗ್ರಹ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಾಧಿಕಾರಿಗಳ ಹುದ್ದೆಗಳು ಖಾಲಿ ಇರುವುದರಿಂದ ಸಾರ್ವಜನಿಕ ಆರೋಗ್ಯ ಸೇವೆಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಖಾಲಿ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಆದರೆ ಈ ನೇಮಕಾತಿ ಪ್ರಕ್ರಿಯೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಸರ್ಕಾರದಿಂದ ಅನ್ಯಾಯಕ್ಕೆ ಒಳಗಾದ ಆಯುಷ್ಯ ವೈದ್ಯರನ್ನು ಕಡೆಗಣಿಸದೆ. ಈ ನೇಮಕಾತಿಯಲ್ಲಿ ಆಯುಷ್ಯ ವೈದ್ಯರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಯುವ ಮುಖಂಡ ಸಂತೋಷ್ ಬಗಲಿ ಆಗ್ರಹಿಸಿದರು.
ಇತ್ತೀಚೆಗೆ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸಾವಿರಾರು ಆಯುಷ್ಯ ವೈದ್ಯರು ಶಿಕ್ಷಣ ಪಡೆದು ಉದ್ಯೋಗವಕಾಶಕ್ಕಾಗಿ ಕಾಯುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸುವಲ್ಲಿ ಆಯುಷ್ಯ ವೈದ್ಯರು ಮಹತ್ವದ ಪಾತ್ರ ವಹಿಸುತ್ತಿದ್ದು. ಕೋವಿಡ್ ಸೇರಿದಂತೆ ಹಲವು ಸಂಕಷ್ಟದ ಸಂದರ್ಭಗಳಲ್ಲಿ ತಮ್ಮ ಸೇವಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಅದರಿಂದ ವೈದ್ಯರ ಕೊರತೆ ನಿವಾರಣೆಗೆ ಸರ್ಕಾರ ಆಯುಷ್ಯ ವೈದ್ಯರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಕೋವಿಡ್ ಅನ್ನೋ ಮಹಾಮಾರಿ ದೇಶವನ್ನು ಮತ್ತು ರಾಜ್ಯವನ್ನು ವಕರಿಸಿಕೊಂಡ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸಾವಿರಾರು ಆಯುಷ್ಯ ವೈದ್ಯರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಂಡು. ಸುಮಾರು 6 ತಿಂಗಳ ಕಾಲ ಸೇವೆ ಪಡೆದುಕೊಂಡಿತ್ತು. ಮನೆಯಿಂದ ಹೊರಗೆ ಬರಲು ಭಯಪಡುವಂತ ಸಂದಿಗ್ಧ ಸ್ಥಿತಿಯಲ್ಲಿ ತಮ್ಮ ಜೀವದ ಹಂಗು ತೊರೆದು ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಹಗಲಿರುವ ದುಡಿದ ಈ ವೈದ್ಯರು ಆರೋಗ್ಯ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿ ಕಾರ್ಯನಿರ್ವಹಿಸಿದರು. ಆದರೆ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾದ ತಕ್ಷಣ ಈ ವೈದ್ಯರನ್ನು ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಏಕಾಏಕಿ ಸೇವೆಯಿಂದ ಬಿಡುಗಡೆ ಮಾಡಿರುವುದು ಅವರಲ್ಲಿ ತೀವ್ರ ನಿರಾಶೆಯನ್ನು ಉಂಟುಮಾಡಿದೆ. ಸಂಕಷ್ಟದ ಸಮಯದಲ್ಲಿ ಅವರ ಸೇವೆಯನ್ನು ಬಳಸಿಕೊಂಡ ಸರ್ಕಾರ ನಂತರ ಅವರ ಭವಿಷ್ಯದ ಬಗ್ಗೆ ಸೂಕ್ತ ಕಾಳಜಿ ವಹಿಸದಿರುವುದು ನ್ಯಾಯ ಸಮ್ಮತವಲ್ಲ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿಯೂ ವ್ಯಕ್ತವಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ವೈದ್ಯಾಧಿಕಾರಿಗಳ ಹುದ್ದೆಗಳು ಖಾಲಿ ಇರುವ ಹಿನ್ನಲೆಯಲ್ಲಿ ಸರ್ಕಾರ ತಾತ್ಕಾಲಿಕ ನೇಮಕಾತಿಗೆ ಮುಂದಾಗಿದೆ. ಈ ಸಂದರ್ಭದಲ್ಲಿ ಕೋವಿಡ್ ಅವಧಿಯಲ್ಲಿ ಸೇವೆ ಸಲ್ಲಿಸಿ ಅನುಭವ ಬಂದಿರುವ ಆಯುಷ್ಯ ವೈದ್ಯರಿಗೆ ಮೊದಲ ಆದ್ಯತೆ ನೀಡುವುದು ನ್ಯಾಯೋಚಿತ ಮಾನವಿಯ ಕ್ರಮವಾಗಲಿದೆ. ಸಂಕಷ್ಟದ ಸಮಯದಲ್ಲಿ ಸಲ್ಲಿಸಿದ ಸೇವೆಗೆ ಸರಕಾರದ ಕೃತಜ್ಞತೆಯ ಸಂಕೇತವು ಆಗಲಿದೆ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಯುತ ನಿರ್ಧಾರ ಕೈಗೊಳ್ಳಬೇಕು ಎಂದು ಸಂತೋಷ ಬಗಲಿ ಒತ್ತಾಯಿಸಿದ್ದಾರೆ.

