ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ತೊರವಿ ಸಮೀಪ ಭಾನುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿಕ್ಷಕ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರನ್ನು ವಿಜಯಪುರ ತಾಲ್ಲೂಕಿನ ಖತಿಜಾಪುರ ಎಚ್ಪಿಎಸ್ ಶಾಲೆಯ ಜಿಪಿಟಿ ಶಿಕ್ಷಕಿ ಅಂಬವ್ವ ಪೂಜೇರಿ (34) ಹಾಗೂ ನಗರದ ಚಾಣಕ್ಯ ಕರಿಯರ್ ಅಕಾಡೆಮಿಯ ಶಿಕ್ಷಕ ಗುರುಲಿಂಗ ಹುಣಶ್ಯಾಳ (37) ಎಂದು ಗುರುತಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರ ಅಕಾಲಿಕ ನಿಧನ ಕುಟುಂಬಸ್ಥರು ಮತ್ತು ಶಿಕ್ಷಣ ವಲಯದಲ್ಲಿ ದುಃಖದ ಛಾಯೆ ಮೂಡಿಸಿದೆ.ಮಾಹಿತಿಯ ಪ್ರಕಾರ, ತಿಕೋಟಾದಲ್ಲಿರುವ ಸಂಬಂಧಿಕರ ಮನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜಯಪುರ ನಗರಕ್ಕೆ ಬೈಕ್ನಲ್ಲಿ ಮರಳುತ್ತಿದ್ದ ವೇಳೆ ತೊರವಿ ಬಳಿ ಅತಿವೇಗವಾಗಿ ಬಂದ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಶಿಕ್ಷಕ ದಂಪತಿಯ ಅಕಾಲಿಕ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಬಂಧುಗಳು, ಸ್ನೇಹಿತರು ಹಾಗೂ ಶಿಕ್ಷಣ ಕ್ಷೇತ್ರದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

