ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಾಂಡ್ (ನೋಟರಿ) ಮೂಲಕ ಖರೀದಿಸಿದ ಭಕ್ಷೀಸ್ ಪತ್ರಗಳು, ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಾಯಿತ ಗುಂಟಾ ಪ್ಲಾಟ್ಗಳಲ್ಲಿ ನಿರ್ಮಿಸಿರುವ ಹಾಗೂ ನಿರ್ಮಾಣ ಹಂತದಲ್ಲಿರುವ ಮನೆಗಳಿಗೆ ತಾತ್ಕಾಲಿಕ, ಶಾಶ್ವತ ಮತ್ತು ವಾಣಿಜ್ಯ ವಿದ್ಯುತ್ ಸಂಪರ್ಕ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ವೇಳೆ ಗುತ್ತಿಗೆದಾರರ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಸೈಯದ ಯಾಸೀನ್ ಎಲ್. ಗುಲ್ಬರ್ಗಾ ಮಾತನಾಡಿ, 03-07-2025 ರಂದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 1200 ಚದರ ಅಡಿ ವರೆಗಿನ ಕಟ್ಟಡಗಳಿಗೆ ಓಸಿ ಹಾಗೂ ಸಿಸಿ ಪಡೆಯುವುದರಿಂದ ವಿನಾಯಿತಿ ನೀಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಆ ಆದೇಶಗಳನ್ನು ಉಲ್ಲಂಘಿಸಿ ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಮಂಜೂರು ಮಾಡುವಲ್ಲಿ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಗುಂಟಾ ಪ್ಲಾಟ್ಗಳಲ್ಲಿ ನಿರ್ಮಿಸಿರುವ ಹಾಗೂ ನಿರ್ಮಾಣ ಹಂತದಲ್ಲಿರುವ ಮನೆಗಳಿಗೆ ತಾತ್ಕಾಲಿಕ, ಶಾಶ್ವತ ಹಾಗೂ ವಾಣಿಜ್ಯ ವಿದ್ಯುತ್ ಸಂಪರ್ಕ ಕಲ್ಪಿಸದೇ ಇರುವುದರ ವಿರುದ್ಧ ಹಾಗೂ ವಿದ್ಯುತ್ ಗುತ್ತಿಗೆದಾರರ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಹೆಸ್ಕಾಂ ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದೊಡ್ಡಪ್ಪ ಮೂಲಿಮನಿ ಹಾಗೂ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಕ್ಷರಬಾಶಾ ಕುರಿ ಅವರ ಕಾರ್ಯವೈಖರಿಯನ್ನು ಸಂಘ ಪದಾಧಿಕಾರಿಗಳು ಖಂಡಿಸಿದರು.
ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು, ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿರುವ ಗ್ರಾಹಕರು ಹಾಗೂ ವಿವಿಧ ರೈತ ಸಂಘಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

