ವಿಜಯಪುರ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ | ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸರ್ಕಾರದಿಂದ ಅನುಷ್ಠಾನಗೊಳ್ಳುವ ಯೋಜನೆಗೆ ಸಂಬಂಧಿಸಿದಂತೆ ಬ್ಯಾಂಕಿನಲ್ಲಿ ಅರ್ಹ ಫಲಾನುಭವಿಗಳ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೇ ನಿಗದಿತ ಅವಧಿಯಲ್ಲಿ ಇತ್ಯರ್ಥಪಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ದೌರ್ಜನ್ಯ ನಿಯಂತ್ರಣ ೧೯೮೯ ಪ್ರತಿಬಂಧ ಕಾಯ್ದೆಯಡಿ ರಚಿತವಾದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ಮೂರು ತಿಂಗಳಿಗೊಮ್ಮೆ ಬ್ಯಾಂಕಿನ ಅಧಿಕಾರಿಗಳ ಸಭೆ ನಡೆಸಲಾಗುತ್ತಿದೆ. ಈ ಬಗ್ಗೆ ನಿರಂತರ ಪ್ರಗತಿ ವರದಿ ಅವಲೋಕಿಸಲಾಗುತ್ತಿದೆ. ಜಿಲ್ಲೆಯ ವಿವಿಧ ಬ್ಯಾಂಕಿನ ಶಾಖಾ ವ್ಯವಸ್ಥಾಪಕರೊಂದಿಗೆ ವಿವಿಧ ಸರ್ಕಾರದ ಯೋಜನೆಯಡಿ ಫಲಾನುಭವಿಗಳ ಬಾಕಿ ಅರ್ಜಿ ಸ್ಥಿತಿಗತಿ ಕುರಿತು ಅಗ್ರಣೀಯ ಬ್ಯಾಂಕಿನ ಅಧಿಕಾರಿಗಳು ಕಾಲ-ಕಾಲಕ್ಕೆ ಸಭೆ ನಡಸಬೇಕು. ಈ ವಿಷಯದಲ್ಲಿ ವಿನಾ ಕಾರಣ ವಿಳಂಬ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಗ್ರಣೀಯ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಭೆಯಲ್ಲಿ ಚರ್ಚೆಯಾದ ವಿಷಯದ ಸಮಸ್ಯೆಗಳನ್ನು ತಕ್ಷಣ ಇತ್ಯರ್ಥಪಡಿಸಬೇಕು ಎಂದು ಸಭೆಯಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ದೌರ್ಜನ್ಯ ಪ್ರಕರಣಗಳಲ್ಲಿ ವಿಳಂಬ ಮಾಡದೇ ಪರಿಹಾರ ಒದಗಿಸಬೇಕು ಎಂದರು.
ನೀರಾವರಿ ಪಂಪಸೆಟ್ ಅರ್ಜಿ ಪರಿಶೀಲಿಸಿ ವಿದ್ಯುತ್ ಪರಿವರ್ತಕ ಅಳವಡಿಸಲು ಕ್ರಮವಹಿಸಬೇಕು. ಪರಿಶಿಷ್ಟ ಜಾತಿ ಸಮುದಾಯದವರು ವಾಸಿಸುವ ಕಾಲೊನಿಯಲ್ಲಿ ಕುಡಿಯುವ ನೀರಿನ ಅಭಾವವಾಗದಂತೆ ಸಮರ್ಪಕವಾಗಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದರು.
ಚರಂಡಿ ನೀರು ಸರಾಗವಾಗಿ ಹರಿಯಲು ಇರುವ ತೊಂದರೆಯನ್ನು ನಿವಾರಿಸಿಕೊಂಡು ಸಮಸ್ಯೆ ಪರಿಹರಿಸಬೇಕೆಂದು ಸೂಚಿಸಲಾಯಿತು.
ಸಮಾಜದ ಮುಖಂಡರೊಂದಿಗೆ ಸಮಿತಿ ಸಭೆಯನ್ನು ಕಾಲಕಾಲಕ್ಕೆ ನಡೆಸಬೇಕು. ಅರ್ಹರಿಗೆ ಸೂರು ಒದಗಿಸಲು ಗ್ರಾಮ ಸಭೆ ನಡೆಸಿ ಪಾರದರ್ಶಕವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಿ, ವಿವಿಧ ಯೋಜನೆಯಡಿ ಅರ್ಜಿ ಸಲ್ಲಿಸುವ ಅರ್ಹ ಫಲಾನುಭವಿಗಳ ಅರ್ಜಿ ಪರಿಶೀಲನೆ ನಡೆಸಿ ವಿಳಂಬ ಮಾಡದೇ ತಕ್ಷಣ ವಿಲೇವಾರಿ ಮಾಡಬೇಕು ಎಂದರು.
ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಿಹಾರ ಧನ ವಿತರಣೆಯಲ್ಲಿ ವೃಥಾ ವಿಳಂಬ ಮಾಡದೇ, ತ್ವರಿತಗತಿಯಲ್ಲಿ ಪರಿಹಾರ ಒದಗಿಸಬೇಕು ಎಂದರು. ಜನವರಿಯಿಂದ ಮೇ ತಿಂಗಳವರೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ದೌರ್ಜನ್ಯ ಅಧಿನಿಯಮ ೧೯೮೯ರನ್ವಯ ದಾಖಲಾದ ಪ್ರಕರಣಗಳ ಮಾಹಿತಿ ಸಭೆಗೆ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮನಗೌಡ ಹಟ್ಟಿ, ವಿಜಯಪುರ ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಗುರುಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಅಭಿಷೇಕ ಚಕ್ರವರ್ತಿ, ನಾನು ಸೋಮು ಲಮಾಣಿ, ರವಿಕಾಂತ ಬಿರಾದಾರ, ಸಿದ್ದು ರಾಯಣ್ಣವರ, ಬಂದಗಿ ಸಿದ್ದಪ್ಪ ಗಸ್ತಿ, ಯಮನಪ್ಪ ಸಿದರಡ್ಡಿ, ಮಲ್ಲು ತಳವಾರ, ರಾಜಶೇಖರ ಕೂಚಬಾಳ ಹಾಗೂ ಮಲ್ಲಪ್ಪ ಹಾದಿಮನಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

