ವಿಜಯಪುರದಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ:ಎಸ್ ಸಿಪಿ ಮತ್ತು ಟಿಎಸ್ಪಿ ಅನುದಾನವನ್ನು ಸಮರ್ಪಕ ಬಳಕೆ ಮಾಡಿಕೊಂಡು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆ ಲಾಭ ತಲುಪಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ೨೦೨೬-೨೭ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಮೇ ತಿಂಗಳಾಂತ್ಯಕ್ಕೆ ಸಾಧಿಸಿದ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆ ನಿಗದಿತ ಅನುಷ್ಠಾನಕ್ಕೆ ಕ್ರಮ ವಹಿಸಬೇಕು. ಆರ್ಥಿಕ ಹಾಗೂ ಭೌತಿಕ ಗುರಿ ನಿಗದಿತ ಅವಧಿಯಲ್ಲಿ ಗುರಿ ಸಾಧಿಸಬೇಕು ಎಂದರು. ಡಾ.ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು. ವಿವಿಧ ಯೋಜನೆಗಳಾದ ಗಂಗಾಕಲ್ಯಾಣ, ವಿವಿಧ ಯೋಜನೆ ಸೇರಿದಂತೆ ಗುರಿಗೆ ಅನುಸಾರ ಅನುಷ್ಟಾನಗೊಳಿಸಲು ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕು ಎಂದರು.
ಎಸ್ಸಿಪಿ, ಟಿಎಸ್ಪಿ ತಾಲೂಕಾ ಮಟ್ಟದಲ್ಲಿ ಕಡ್ಡಾಯ ಸಭೆ ಮಾಡಬೇಕು. ಒಂದು ರೂ. ಕೂಡಾ ಲ್ಯಾಪ್ಸ್ ಆಗಬಾರದು. ಯೋಜನೆ ಅನುಷ್ಠಾನಕ್ಕೆ ವಿಳಂಬ ಮಾಡಬಾರದು. ಬೇರೆ ಬೇರೆ ಯೋಜನೆಗಳ ಬಗ್ಗೆ ಫಾಲೊಅಪ್ ಮಾಡಿ ಹಂಚಿಕೆ ಮಾಡಿ ಅನುಷ್ಠಾನಗೊಳಿಸಿದರೆ ಸರಳವಾಗಲಿದೆ ಎಂದರು. ಆದರೆ ಸಮಸ್ಯೆ ಬಾರದಂತೆ ಮುಂಚಿತವಾಗಿ ಯೋಜನೆ ರೂಪಿಸಿಕೊಳ್ಳಬೇಕು. ಎಲ್ಲ ಇಲಾಖೆಗಳು ಇದನ್ನು ಗಮನಿಸಬೇಕು. ಬೇರೆ ಬೇರೆ ಇಲಾಖೆಯಿಂದ ಜಾರಿಯಾಗುವ ಯೋಜನೆ ಅರ್ಹರನ್ನು ತಲುಪಬೇಕು ಎಂದರು.
ಯಾವುದೇ ಯೋಜನೆ ಸ್ಥಳ ಪರಿಶೀಲನೆ ಕಡ್ಡಾಯವಾಗಿ ನಡೆಸಬೇಕು. ಪಿಡಿಒ ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಬೇಕು. ಎಸ್ಸಿಪಿ ಟಿಎಸ್ಸಿಪಿ ಯೋಜನೆ ಕಾಯ್ದೆಯಾಗಿದ್ದು, ಎಂದ ಅವರು, ಇದನ್ನು ಗಂಭೀರವಾಗಿ ಪರಿಗಣಿಸಿ, ರೆಗ್ಯುಲರ್ ಯೋಜನೆಯೊಂದಿಗೆ ಈ ಯೋಜನೆಗಳನ್ನು ಪರಿಶೀಲನೆ ಕಾರ್ಯ ನಿರ್ವಹಿಸಲು ಸೂಚನೆ ನೀಡಿದರು.
ಪ್ರವಾಸೋದ್ಯಮ ಇಲಾಖೆಯಡಿ ಮೊಬೈಲ್ ಕ್ಯಾಂಟಿನ್ ಅರ್ಜಿ ಆಹ್ವಾನಿಸಲಾಗಿದೆ. ೩೬ ಅರ್ಜಿ ಸ್ವೀಕರಿಸಿದೆ. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಜಾರಿಯಲ್ಲಿದ್ದು, ಅರ್ಹರನ್ನು ಆಯ್ಕೆ ಮಾಡಿ ಈ ಯೋಜನೆಯ ಲಾಭ ಅರ್ಹರಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚಿಸಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದಡಿ ಜಾರಿಯಾಗುತ್ತಿರುವ ಯೋಜನೆ ಅನುಪಾಲನೆ ಮಾಡಿ, ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಆಗಮಿಸಬೇಕು ಜಿಲ್ಲಾಧಿಕಾರಿ ಸೂಚಿಸಿದರು.ವಿದ್ಯಾರ್ಥಿ ವೇತನ ಅರ್ಜಿ ಹಾಕಿದ ವಿದ್ಯಾರ್ಥಿಗಳ ಅರ್ಜಿ ತಕ್ಷಣ ಇತ್ಯರ್ಥಪಡಿಸಿ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳು ತಕ್ಷಣ ಕ್ರಮವಹಿಸಬೇಕು. ವಸತಿ ನಿಲಯಕ್ಕೆಅರ್ಜಿ ಹಾಕುವ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಬೇಕು ಎಂದರು.
ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸುವ ನಿಟ್ಟಿನಲ್ಲಿ ದೀರ್ಘಾವಧಿ ಹಾಗೂ ಅಲ್ಪಾವಧಿ ಯೋಜನೆ ರೂಪಿಸಿಕೊಳ್ಳಬೇಕು ಎಂದು ಸಲಹೆ ಮಾಡಿದ ಅವರು, ದೀರ್ಘಾವಧಿ ಯೋಜನೆಯಡಿ ವಸತಿ ನಿಲಯಕ್ಕೆ ಸರ್ಕಾರಿ ಜಾಗೆ ಗುರುತಿಸಿ ಪಡೆದುಕೊಳ್ಳಬೇಕು. ತತ್ ಕ್ಷಣದಲ್ಲಿ ಅವಶ್ಯವಿರುವ ಮಕ್ಕಳಿಗನಿಸಾರವಾಗಿ ಸೂಕ್ತ ಬಾಡಿಗೆ ಕಟ್ಟಡ ಗುರುತಿಸಿಕೊಂಡು ಯಾವುದೇ ಸಮಸ್ಯೆ ಬಾರದ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮನಗೌಡ ಹಟ್ಟಿ, ಕೃಷಿ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್, ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಸಿದ್ರಾಮಯ್ಯ ಬರಗಿಮಠ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

