ಬಬಲೇಶ್ವರ ಕ್ಷೇತ್ರ: ಜೂನ್ ೨೦ ರಿಂದ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಹಿನ್ನೆಲೆಯಲ್ಲಿ ೨೯-ಬಬಲೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ,ಮತಗಟ್ಟೆ ಅಧಿಕಾರಿಗಳು (ಬಿಎಲ್ಒ) ಹಾಗೂ ಮೇಲ್ವಿಚಾರಕರ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂ೨೦ ರಿಂದ ಜೂ.೨೯ ರವರೆಗೆ ಮತಗಟ್ಟೆ ಅಧಿಕಾರಿಗಳು, ಮೇಲ್ವಿಚಾರಕರಿಗೆ ಹಾಗೂ ಎಲ್ಲ ಪಕ್ಷದವರು ಆಯ್ಕೆ ಮಾಡಿದ ಮತಗಟ್ಟೆ ಮಟ್ಟದ ಏಜಂಟರಿಗ ತರಬೇತಿ ಹಮ್ಮಿಕೊಳ್ಳಲಾಗಿದೆ.
ತರಬೇತಿ ಪಡೆದ ಸಿಬ್ಬಂದಿಯ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆಯು ಜೂ.೩೦ ರಿಂದ ಜುಲೈ.೨೯ ರವರೆಗೆ ಎಲ್ಲಾ ಮತಗಟ್ಟೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರತಿ ಮನೆ-ಮನೆಗೆ ಭೇಟಿ ನೀಡಿ, ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಿ, ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕಾರ್ಯ ನಡೆಸಲಿದ್ದಾರೆ.
ಆದ್ದರಿಂದ, ಬಬಲೇಶ್ವರ ಕ್ಷೇತ್ರದ ಸಾರ್ವಜನಿಕರು ತಮ್ಮ ಮನೆಗೆ ಭೇಟಿ ನೀಡುವ ಮತಗಟ್ಟೆ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿ,ನಿಖರವಾದ ವಿವರಗಳನ್ನು ಭರ್ತಿ ಮಾಡುವ ಮೂಲಕ ಈ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ಸಹಕರಿಸಬೇಕೆಂದು ಬಬಲೇಶ್ವರ ತಹಶೀಲ್ದಾರರಾದ ಶ್ರೀಮತಿ ಶಾಂತಲಾ ಚಂದನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
