ವಿದ್ಯುತ್ ಖಾಸಗೀಕರಣ ವಿರೋಧಿಸಿ ವಿವಿಧ ರೈತಪರ ಸಂಘಟನೆಗಳಿಂದ ಚಡಚಣ ತಹಶೀಲ್ದಾರರಿಗೆ ಮನವಿ
ಉದಯರಶ್ಮಿ ದಿನಪತ್ರಿಕೆ
ಚಡಚಣ: ಕರ್ನಾಟಕದ ಹೆಸ್ಕಾಂ ಸೇರಿದಂತೆ ವಿದ್ಯುತ್ ವಿತರಣಾ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಹಾಗೂ ಟಾಟಾ ಪವರ್ ಕಂಪನಿ ಲಿಮಿಟೆಡ್ಗೆ ವಿದ್ಯುತ್ ವಿತರಣಾ ಪರವಾನಗಿ ನೀಡುವ ಪ್ರಯತ್ನಗಳನ್ನು ತಕ್ಷಣವೇ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ನೇತೃತ್ವದಲ್ಲಿ ನೂರಾರು ರೈತರು ಚಡಚಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಚಡಚಣ ತಾಲೂಕಿನ ಕೆಪಿಟಿಸಿಎಲ್ ಕಚೇರಿಯಿಂದ ತಹಶೀಲ್ದಾರ್ ಕಚೇರಿವರೆಗೆ ರೈತರು ಕಾಲ್ನಡಿಗೆ ಮೆರವಣಿಗೆ ನಡೆಸಿ ವಿದ್ಯುತ್ ಖಾಸಗೀಕರಣದ ಪ್ರಸ್ತಾವನೆ ಹಿಂಪಡೆಯುವಂತೆ ಒತ್ತಾಯಿಸಿದರು. ಸಂಘಟನೆಯ ಪದಾಧಿಕಾರಿಗಳು ಚಡಚಣ ತಹಶೀಲ್ದಾರ್ ಸಂಜಯ ಇಂಗಳೆ ಹಾಗೂ ಹೆಸ್ಕಾಂ ಎಇಇ ವಿಜಯಕುಮಾರ ಹವಾಲ್ದಾರ ಅವರ ಮೂಲಕ ಶುಕ್ರವಾರ ಪಟ್ಟಣದಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಮತ್ತು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಉಪಾಧ್ಯಕ್ಷ ಮಹಾದೇವ ಬನಸೋಡೆ, ರೈತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಹೆಸ್ಕಾಂ ಕಂಪನಿಯನ್ನು ಖಾಸಗೀಕರಣಗೊಳಿಸಬಾರದು ಎಂದು ಒತ್ತಾಯಿಸಿದರು. ಈಗಾಗಲೇ ಕೃಷಿಯಲ್ಲಿ ನಷ್ಟ ಅನುಭವಿಸುತ್ತಿರುವ ರೈತರಿಗೆ ವಿದ್ಯುತ್ ಖಾಸಗೀಕರಣವಾದರೆ ಕೃಷಿ ಚಟುವಟಿಕೆ ನಡೆಸುವುದು ಮತ್ತಷ್ಟು ಕಷ್ಟಕರವಾಗಲಿದೆ. ಇದರ ಪರಿಣಾಮ ಆಹಾರ ಉತ್ಪಾದನೆಯ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಿದರು.
ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಾಣಗೊಂಡಿರುವ ವಿದ್ಯುತ್ ಕಂಬಗಳು, ವಿದ್ಯುತ್ ತಂತಿಗಳು ಹಾಗೂ ಟ್ರಾನ್ಸಫಾರ್ಮರ್ಗಳಂತಹ ಮೂಲಸೌಕರ್ಯಗಳನ್ನು ಖಾಸಗಿ ಕಂಪನಿಗಳು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುವ ಸಾಧ್ಯತೆ ಇದೆ. ಜೊತೆಗೆ ಹೆಸ್ಕಾಂನಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಕಾರ್ಮಿಕರು ಹಾಗೂ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರ ಭವಿಷ್ಯದ ಮೇಲೂ ಖಾಸಗೀಕರಣದಿಂದ ಪರಿಣಾಮ ಉಂಟಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ರೈತರ ಪಂಪ್ಸೆಟ್ಗಳಿಗೆ ನೀಡಲಾಗುತ್ತಿರುವ ಉಚಿತ ವಿದ್ಯುತ್, ಬಡವರಿಗಾಗಿ ಇರುವ ಗೃಹ ಜ್ಯೋತಿ, ಕುಟೀರ ಜ್ಯೋತಿ ಹಾಗೂ ಭಾಗ್ಯಜ್ಯೋತಿ ಸೇರಿದಂತೆ ಜನಪರ ಯೋಜನೆಗಳು ಮುಂದಿನ ದಿನಗಳಲ್ಲಿ ಸ್ಥಗಿತಗೊಳ್ಳುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘದ ವಸಂತ ಭೈರಾಮಡಿ, ಸರ್ಕಾರ ತನ್ನ ಆರ್ಥಿಕ ಕೊರತೆಯನ್ನು ನೀಗಿಸಿಕೊಳ್ಳುವ ಸಲುವಾಗಿ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ರೈತರ ಪರವಾಗಿ ಕಾರ್ಯನಿರ್ವಹಿಸಬೇಕಾದ ಸರ್ಕಾರವೇ ರೈತರ ವಿರುದ್ಧದ ಧೋರಣೆ ಅನುಸರಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು
ರಾಜ್ಯದಲ್ಲಿ ಈಗಾಗಲೇ ಬರಗಾಲದ ವಾತಾವರಣ ನಿರ್ಮಾಣವಾಗಿದ್ದು, ರೈತರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವಿದ್ಯುತ್ ಖಾಸಗೀಕರಣ ಮಾಡಿದರೆ ರೈತರ ಮೇಲಿನ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಲಿದೆ. ಕೃಷಿ ಪಂಪ್ಸೆಟ್ಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
. ವಿದ್ಯುತ್ ಖಾಸಗೀಕರಣಕ್ಕೆ ಸಂಬಂಧಿಸಿದ ಪರವಾನಗಿ ಪ್ರಕ್ರಿಯೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಇಲ್ಲವಾದರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ದಯಾನಂದ ಕೋಳಿ, ಮುರುಗೇಶ ಸಿಂಪಿ, ನಾಗನಾಥಗೌಡ ಬಿರಾದಾರ, ಪ್ರಕಾಶ ಭತಗುಣಕಿ, ಪ್ರವೀಣ ಬಿರಾದಾರ, ಮಂಜುಳಾ ಪೂಜಾರಿ, ರಮೇಶ ಬೆಳ್ಳೆನವರ, ಗೇನಪ್ಪ ಬಿರಾದಾರ, ದಾನಮ್ಮಗೌಡತಿ ಪಾಟೀಲ, ರಮೇಶ ಭತಗುಣಕಿ, ಮಹಾದೇವ ಕರ್ಲಮಳ ನಿಂಗಪ್ಪ ಝಳಕಿ, ವಿಠ್ಠಲ ಮಾಳಾಬಾಗಿ, ಮಹೇಶ ಏಳಗಿ, ಅರ್ಜುನ ಬಿರಾದಾರ, ಮಂಜುಳಾ ಪೂಜಾರಿ, ರವೀಂದ್ರ ಹೂಗಾರ, ಅಬ್ಬಾಸಲಿ ಹಿಂಗಣಿ ಸೇರಿದಂತೆ ಸಂಘಟನೆಯ ಪ್ರಮುಖರು ಹಾಗೂ ಅನೇಕ ರೈತರು ಉಪಸ್ಥಿತರಿದ್ದರು.

