ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪ್ರತಿನಿತ್ಯ ಎಲ್ಲರೂ ಯೋಗಾಭ್ಯಾಸ ಮಾಡುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಶಿಕ್ಷಕ ಸಿದ್ದು ಚಿಂಚೋಳಿ ಹೇಳಿದರು.
ಸಿಂದಗಿ ತಾಲೂಕಿನ ಬ್ಯಾಲಿಹಾಳ–ಬಂಕಲಗಿ ಸರಕಾರಿ ಶಾಲಾ ಆವರಣದಲ್ಲಿ ಹಮ್ಮಿಕೊಂಡ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಯೋಗವು ಕೇವಲ ವ್ಯಾಯಾಮವಲ್ಲ. ಅದು ಆರೋಗ್ಯಕರ, ಸಂತೋಷಕರ ಮತ್ತು ಸಮತೋಲಿತ ಜೀವನದ ಮಾರ್ಗವಾಗಿದೆ. ಯೋಗವು ದೈಹಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ ಏಕಾಗ್ರತೆ, ಆತ್ಮವಿಶ್ವಾಸ ಹಾಗೂ ಸಕಾರಾತ್ಮಕ ಚಿಂತನೆಯನ್ನು ಬೆಳೆಸುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅತಿಥಿಗಳಾಗಿ ಆಗಮಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಾಂತೇಶ ನೂಲಾನವರ, ವರದಿಗಾರ ಶಿವಾನಂದ ಆಲಮೇಲ ಮಾತನಾಡಿ, ಯೋಗವು ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು ಕಾಪಾಡುವುದಲ್ಲದೆ ದೇಹಕ್ಕೆ ಚೈತನ್ಯ ಮತ್ತು ಶಕ್ತಿಯನ್ನು ನೀಡುತ್ತದೆ. ಇಂದಿನ ಒತ್ತಡದ ಜೀವನ ಶೈಲಿಯಲ್ಲಿ ಯೋಗದ ಮಹತ್ವ ಇನ್ನಷ್ಟು ಹೆಚ್ಚಾಗಿದೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ಯೋಗಾಭ್ಯಾಸವನ್ನು ರೂಢಿಸಿಕೊಂಡರೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಹೇಳಿದರು.
ಈ ವೇಳೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಆನಂದ ಶಾಬಾದಿ, ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಭಜಂತ್ರಿ, ಮುಖ್ಯೋಪಾಧ್ಯಾಯರಾದ ವಿ.ಎಸ್.ಪಾಟೀಲ, ಎಸ್.ಬಿ.ಪಾಟೀಲ, ಸುಖದೇವ ಹಿರೇಕುರುಬರ, ಶಿಕ್ಷಕರಾದ ಹಮೀದ್ ಅವಟಿ, ರೋಹಿತ ತಳಗೇರಿ, ರಮೇಶ ಪಾಳೇದ, ಶೈಲಾ ಪತ್ತಾರ ಸೇರಿದಂತೆ ಹಲವರು ವೇದಿಕೆ ಮೇಲಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ಸೂರ್ಯ ನಮಸ್ಕಾರದ ಪ್ರದರ್ಶನ ನೀಡಿದರು. ಯೋಗ ಶಿಕ್ಷಕ ಸಿದ್ಧಲಿಂಗ ಚೌಧರಿ ಅವರ ಮಾರ್ಗದರ್ಶನದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಸಲಾಯಿತು. ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಪೋಷಕರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗದ ಮಹತ್ವದ ಕುರಿತು ಅರಿವು ಪಡೆದರು.
ಕೊನೆಯಲ್ಲಿ ಎಲ್ಲರೂ ಪ್ರತಿದಿನ ಯೋಗಾಭ್ಯಾಸ ಮಾಡುವ ಸಂಕಲ್ಪ ಕೈಗೊಂಡರು.

