ಉದಯರಶ್ಮಿ ದಿನಪತ್ರಿಕೆ
ಅಥಣಿ: ಯೋಗವು ನಮ್ಮ ಬದುಕಿನಲ್ಲಿ ಹೊಸ ಆಯಾಮವನ್ನು ತಂದುಕೊಡುವುದರ ಜೊತೆಗೆ ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡುತ್ತದೆ. ಆದ್ದರಿಂದ ಯೋಗವನ್ನು ಕೇವಲ ವಿಶ್ವ ಯೋಗ ದಿನಾಚರಣೆಗೆ ಸೀಮಿತಗೊಳಿಸದೆ, ವರ್ಷದ ಎಲ್ಲಾ ದಿನಗಳಲ್ಲೂ ಜೀವನದ ಭಾಗವನ್ನಾಗಿಸಿಕೊಳ್ಳಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅವರು ಅಥಣಿ ಪಟ್ಟಣದ ಎಸ್.ಎಸ್.ಎಂ.ಎಸ್. ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ಬದಲಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯಿಂದ ಜನರು ವಿವಿಧ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಆರೋಗ್ಯಕರ ಮತ್ತು ರೋಗಮುಕ್ತ ಜೀವನ ನಡೆಸಬೇಕಾದರೆ ಪ್ರತಿದಿನ ಯೋಗಾಭ್ಯಾಸವನ್ನು ರೂಢಿಸಿಕೊಳ್ಳುವುದು ಅವಶ್ಯಕ ಎಂದು ಹೇಳಿದರು.
ನಂತರ ಮಾತನಾಡಿದ ತಹಸೀಲ್ದಾರ್ ಸಿದ್ರಾಯ ಬೋಸಗಿ, ಯೋಗವು ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದ್ದು, ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದರು.
ಇಂದಿನ ಒತ್ತಡದ ಬದುಕಿನಲ್ಲಿ ಯೋಗಾಭ್ಯಾಸ ಅತ್ಯಂತ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಪ್ರತಿದಿನ ಸ್ವಲ್ಪ ಸಮಯವನ್ನು ಯೋಗಕ್ಕಾಗಿ ಮೀಸಲಿಡಬೇಕು. ಯೋಗದಿಂದ ದೇಹದ ರೋಗನಿರೋಧಕ ಶಕ್ತಿ ವೃದ್ಧಿಯಾಗುವುದರ ಜೊತೆಗೆ ಮನಸ್ಸಿನ ಏಕಾಗ್ರತೆ ಹೆಚ್ಚುತ್ತದೆ. ವಿದ್ಯಾರ್ಥಿಗಳು, ಯುವಕರು ಹಾಗೂ ಸಾರ್ವಜನಿಕರು ಯೋಗವನ್ನು ತಮ್ಮ ದಿನಚರಿಯ ಭಾಗವನ್ನಾಗಿಸಿಕೊಳ್ಳುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ, ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್, ಉಪಾಧ್ಯಕ್ಷೆ ಭುವನೇಶ್ವರಿ ಯಂಕಚ್ಚಿ, ಶಿವಾನಂದ ಕಲ್ಲಾಪುರ, ಡಿಎಸ್ಪಿ ಪ್ರಶಾಂತ ಮುನ್ನೊಳಿ,ಎಂ.ಆರ್.ಮುಂಜಿ, ಅಶೋಕ ಗುಡಿಮನಿ, ಪ್ರವೀಣ ಹುಣಸಿಕಟ್ಟಿ, ಬಿ.ಜಿ.ಕಾಗೆ, ಮಲ್ಲಿಕಾರ್ಜುನ ಮಗದೂಮ, ಸಿಪಿಐ.ಸಂತೋಷ ಹಳ್ಳೂರ, ಡಾ.ಮಲ್ಲಿಕಾರ್ಜುನ ಹಂಜಿ, ರಾಮಣ್ಣ ಧರಿಗೌಡ, ಶಿವಾನಂದ ಮಾಳಗಾಂವಿ, ಸುರೇಶ ಚಿಕ್ಕಟಿ,ವಿವಿಧ ಯೋಗಾಸನಗಳ ಪ್ರದರ್ಶನ ನಡೆಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಯೋಗಾಭ್ಯಾಸ ಮಾಡಿದರು.
ಅಂತರಾಷ್ಟ್ರೀಯ ಯೋಗ ಗುರು ಭವರಲಾಲ ಆರ್ಯ ಅವರು ಯೋಗಾಸನವನ್ನು ಹೇಳಿಕೊಟ್ಟರು.

