ವಿಜಯಪುರ ಜಿಪಂನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ | ಸಚಿವ ಡಾ.ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಕಟ್ಟಪ್ಪಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜುಲೈ ೨ನೇ ವಾರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆದಾಗ್ಯೂ ಮಳೆ ಅಭಾವದಿಂದ ಜಿಲ್ಲೆಯಾದ್ಯಂತ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜವಾಬ್ದಾರಿ ಅರಿತು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆ ಸೇರಿದಂತೆ ಗ್ರಾಮೀಣ, ನಗರ, ಸ್ಥಳೀಯ ಸಂಸ್ಥೆ ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಆಯಾ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ವಿದ್ಯುತ್ ಪರಿವರ್ತಕಗಳ ಸಮಸ್ಯೆಯಿದ್ದಲ್ಲಿ ಸ್ಪೀಡ್ ಅಪ್ ಮಾಡಿ ಕುಡಿಯುವ ನೀರಿಗೆ ತಕ್ಷಣಕ್ಕೆ ವಿದ್ಯುತ್ ಪೂರೈಕೆಯಾಗುವಂತೆ ಹೆಸ್ಕಾಂ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಖಾಸಗಿ ಬೋರ್ ವೆಲ್ ಗುರುತಿಸಿ: ಎಲ್ಲೆಲ್ಲಿ ನೀರಿನ ಸಮಸ್ಯೆ ಉಲ್ಬಣವಾಗಬಹುದೋ,ಮುಂಚಿತವಾಗಿ ಮಾಹಿತಿ ಪಡೆದುಕೊಂಡು ಅಂತಹ ಸ್ಥಳದಲ್ಲಿ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅದಕ್ಕೆಂದೇ ಖಾಸಗಿ ಬೋರವೆಲ್ ಗಳನ್ನು ಗುರುತಿಸಿ, ಅತಿ ಅವಶ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ವಹಿಸಬೇಕು ಎಂದರಲ್ಲದೆ, ಮಳೆ ಬರುವವರೆಗೆ ಮುಂಚಿತವಾಗಿ ಯೋಜನೆ ರೂಪಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದರು.
ಸಭೆಯಲ್ಲಿ ನಾಗಠಾಣ ಶಾಸಕರಾದ ವಿಠ್ಠಲ ಕಟಕದೊಂಡ, ದೇವರ ಹಿಪ್ಪರಗಿ ಶಾಸಕರಾದ ರಾಜುಗೌಡ ಪಾಟೀಲ,ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗಂಗಾಧರ ಸಂಬಣ್ಣಿ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿಗಳಾದ ರಿಷಿ ಆನಂದ, ಎಸ್ಪಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಣಿ ಕೆಬಿ ಹಾಗೂ ಬಳಗಾನೂರ ಕೆರೆ ತುಂಬಿವೆ
ವಿಜಯಪುರ ನಗರದಲ್ಲಿ ಭೂತನಾಳ ಕೆರೆಯಿಂದ ಐದು ವಾರ್ಡಗೆ ನೀರಿನ ತಾಪತ್ರಯವಿಲ್ಲ. ತಾಜಬಾವಡಿ ಪುನಶ್ಚೇತನಗೊಳಿಸಿದ್ದು ನೀರಿನ ಸದ್ಭಳಕೆಯಾಗಬೇಕು. ತಾಜಬಾವಡಿಗೆ ಯುಜಿಡಿ ನೀರು ಸೇರ್ಪಡೆಯಾಗದಂತೆ ಯೋಜನೆ ಸಿದ್ಧಪಡಿಸಿಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆನಂದ ಕೆ. ಅವರು ಸಚಿವರಿಗೆ ವಿವರಣೆ ನೀಡಿದರು

ನಿರ್ಲಕ್ಷ್ಯ ವಹಿಸಿದರೆ ಕ್ರಮ
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಸಮನ್ವಯತೆಯಿಂದ ಗಂಭೀರವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು. ಇನ್ನೊಂದೆಡೆ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಮೊಬೈಲ್ ಆನ್ ಇಟ್ಟುಕೊಂಡೇ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಮಳೆಯಾಗಿ ಒಳಹರಿವು ಹೆಚ್ಚಳವಾಗುವವರೆಗೆ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕುಡಿಯುವ ಉದ್ಧೇಶಕ್ಕಾಗಿ ನೀರನ್ನು ಕಾಯ್ದಿರಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ ಸಚಿವರು ಕುಡಿಯುವ ನೀರಿಗೆ ಆದ್ಯತೆಯಾಗಿಸಿಕೊಂಡು ಅತಿ ಜಾಗೃತೆಯಿಂದ ಕಾರ್ಯ ನಿರ್ವಹಿಸಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆ ಅಭಾವ, ಸಮಸ್ಯೆ ಎದುರಿಸಲು ಸಜ್ಜಾಗಿ
ಜಿಲ್ಲೆಯಲ್ಲಿ ಈ ವರ್ಷ ಮಳೆ ಕಡಿಮೆಯಾಗಿರುವುದರಿಂದ ಮುಂದೆ ಉಲ್ಬಣಿಸಬಹುದಾದ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಜಾನುವಾರುಗಳಿಗೆ ಕುಡಿಯುವ ನೀರು, ಬಿತ್ತನೆ ಬೀಜ, ರಸಗೊಬ್ಬರ ಮೇವು ಎಲ್ಲ ವಿಚಾರ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾಗಿ ಸಚಿವರು ತಿಳಿಸಿದರು.
ಜುಲೈ ಎರಡನೇ ವಾರ ಮಳೆ ಬರಬಹುದೆಂದು ಹವಾಮಾನ ಇಲಾಖೆ ಹೇಳಿದೆ. ಕುಡಿಯುವ ನೀರಿನ ಸಮಸ್ಯೆಯಾದ ಸಂದರ್ಭದಲ್ಲಿ ಆದಾಗ್ಯೂ ಬೋರ್ ವೆಲ್ ಕೊರೆಯಿಸಿ, ವಿದ್ಯುತ್ ಅಳವಡಿಸಿ ನೀರು ಪೂರೈಸಲು ಸಮಯ ಬೇಕಾಗುತ್ತದೆ. ಆದರೆ, ಖಾಸಗಿ ಬೋರ್ ವೆಲ್ ಗಳನ್ನು ಗುರುತಿಸಿಕೊಟ್ಟುಕೊಳ್ಳಲು ಸೂಚಿಸಿದ್ದಾಗಿ ಸಚಿವರು ತಿಳಿಸಿದರು.
ತಾಜ್ ಬಾವಡಿ ನೀರನ್ನು ಅನ್ಯ ಉದ್ಧೇಶಕ್ಕೆ ಬಳಸಿಕೊಳ್ಳಲು ಸೂಚಿಸಲಾಗಿದೆ. ಗ್ರಾಪಂ ಮಟ್ಟದಲ್ಲಿ ಅನಿವಾರ್ಯ ಸಂದರ್ಭದಲ್ಲಿ ಖಾಸಗಿ ಬೋರವೆಲ್ ಗಳಿಂದ ಟ್ಯಾಂಕರ್ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದೂ ಸೂಚಿಸಿದ್ದಾಗಿ ಸಚಿವರು ತಿಳಿಸಿದರು.

