ಸಂಸ್ಥೆಗಳ ಕಾರ್ಯ ಶ್ಲಾಘಿಸಿದ ವಿಜಯಪುರ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅನೀಮಿಯಾ ಮುಕ್ತ ಭಾರತ ಹಾಗೂ ಅನೀಮಿಯಾ ಮುಕ್ತ ಕರ್ನಾಟಕ ಅಭಿಯಾನಕ್ಕೆ ಕೈಜೋಡಿಸಿ ರಾಜ್ಯಾದ್ಯಂತ ಜನಜಾಗೃತಿ, ತಪಾಸಣೆ ಹಾಗೂ ಉಚಿತ ಔಷಧಿ ವಿತರಣೆಯ ಮೂಲಕ ಮಹತ್ವದ ಸೇವೆ ಸಲ್ಲಿಸುತ್ತಿರುವ ಗ್ರಾಮೀಣ ಅಭಿವೃದ್ಧಿ ಸಂಸ್ಥೆ (ಐ.ಆರ್.ಡಿ.) ಮತ್ತು ಸ್ಪಂದನ ಸ್ವಯಂ ಸೇವಾ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಆಸ್ಪತ್ರೆ ವಿಜಯಪುರದ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಶಿವಾನಂದ ಮಾಸ್ತಿಹೊಳಿ ಹೇಳಿದರು.
ಮಂಗಳವಾರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಐ.ಆರ್.ಡಿ ಮತ್ತು ಸ್ಪಂದನ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತೆರೆಯಲಾದ ಉಚಿತ ಅನೀಮಿಯಾ ಅರಿವು, ರಕ್ತಹೀನತೆ ತಪಾಸಣೆ ಹಾಗೂ ಔಷಧಿ ವಿತರಣಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅನೀಮಿಯಾ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಾಬು ಜಿ. ಸಜ್ಜನ ಹಾಗೂ ಸ್ಪಂದನ ಸಂಸ್ಥೆಯ ಅಧ್ಯಕ್ಷ ಮಹಾದೇವ ದೇವರ ಅವರ ನೇತೃತ್ವದಲ್ಲಿ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮಿಣಜಗಿ ಗ್ರಾಮದಲ್ಲಿ ಪ್ರಾಯೋಗಿಕವಾಗಿ ೫೭೭ ಶಾಲಾ ಮಕ್ಕಳ ರಕ್ತಹೀನತೆ ತಪಾಸಣೆ ನಡೆಸಲಾಗಿತ್ತು. ಈ ವೇಳೆ ಶೇ.೩೮ ರಷ್ಟು ಮಕ್ಕಳು ಅನೀಮಿಯಾದಿಂದ ಬಳಲುತ್ತಿರುವುದು ಪತ್ತೆಯಾಗಿತ್ತು. ಈ ಅನುಭವದ ಆಧಾರದ ಮೇಲೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅನೀಮಿಯಾ ತಡೆ ಮತ್ತು ಜಾಗೃತಿ ಕಾರ್ಯಕ್ರಮವನ್ನು ವಿಸ್ತರಿಸಲಾಯಿತು. ಗುಜರಾತಿನ ಶ್ರೀಮದ್ ರಾಜಚಂದ್ರ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಆರ್ಥಿಕ ಸಹಕಾರ ನೀಡಿದ್ದು, ಕನ್ನೂರಿನ ಗ್ರಾಮ ಸುರಾಜ್ಯ ಸಂಸ್ಥೆಯೂ ಬೆಂಬಲ ನೀಡಿದೆ. ರಾಜ್ಯದ ೨೩ ಜಿಲ್ಲೆಗಳಲ್ಲಿ ೨೮ ಸ್ವಯಂಸೇವಾ ಸಂಸ್ಥೆಗಳ ಮೂಲಕ ಕಾರ್ಯಕ್ರಮ ಅನುಷ್ಠಾನಗೊಳ್ಳುತ್ತಿದ್ದು, ಎರಡು ವರ್ಷ ಮೇಲ್ಪಟ್ಟ ಮಕ್ಕಳಿಂದ ಹಿಡಿದು ಎಲ್ಲಾ ವರ್ಗದ ಜನರಿಗೆ ಉಚಿತ ಅನೀಮಿಯಾ ತಪಾಸಣೆ, ಔಷಧಿ ವಿತರಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
ಇಲ್ಲಿಯವರೆಗೆ ರಾಜ್ಯದಲ್ಲಿ ೧೫.೫೦ ಲಕ್ಷಕ್ಕೂ ಹೆಚ್ಚು ಜನರಿಗೆ ರಕ್ತಹೀನತೆ ಪರೀಕ್ಷೆ ನಡೆಸಿ ಉಚಿತ ಔಷಧಿ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಮಾತ್ರ ೧.೦೬ ಲಕ್ಷಕ್ಕೂ ಅಧಿಕ ಜನರಿಗೆ ಉಚಿತ ತಪಾಸಣೆ ನಡೆಸಲಾಗಿದೆ. ತಪಾಸಣೆಯಲ್ಲಿ ಜಿಲ್ಲೆಯ ಸುಮಾರು ಶೇ.೪೦ ರಷ್ಟು ಜನರಲ್ಲಿ ವಿವಿಧ ಹಂತದ ರಕ್ತಹೀನತೆ ಕಂಡುಬಂದಿದೆ ಎಂದರು.
ಮಕ್ಕಳಿಗೆ ಪೂರಕ ಪೌಷ್ಠಿಕ ಸಿರಪ್ಗಳು, ಎಲ್ಲಾ ವಯೋಮಾನದವರಿಗೆ ಜಂತಿನಾಶಕ ಔಷಧಿಗಳು ಹಾಗೂ ಕಬ್ಬಿಣಾಂಶದ ಮಾತ್ರೆಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದರು.
ಡಾ. ಬಾಬು ಜಿ. ಸಜ್ಜನ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಎಂ.ಎಸ್. ದೇವರ, ಮಾತನಾಡಿ, ಸಶಕ್ತ ಭಾರತ ನಿರ್ಮಾಣಕ್ಕೆ ಆರೋಗ್ಯವಂತ ಮಕ್ಕಳ ಅಗತ್ಯವಿದೆ. ಅನಾರೋಗ್ಯಕರ ಆಹಾರ ಪದ್ಧತಿಗಳ ಪರಿಣಾಮ ಮಕ್ಕಳಲ್ಲಿ ಅನೀಮಿಯಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉಚಿತ ತಪಾಸಣೆ, ಜಾಗೃತಿ ಹಾಗೂ ಪೂರಕ ಔಷಧಿ ವಿತರಣೆಯ ಮೂಲಕ ರಾಜ್ಯಾದ್ಯಂತ ಸೇವೆ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಧಿಕಾರಿ, ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದರು ಎಂದು ಪ್ರಕಟಣೆ ತಿಳಿಸಿದೆ.

