ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಹಿರಿಯ ನಾಗರಿಕರ ವೈದ್ಯಕೀಯ ವಿಭಾಗದ ವತಿಯಿಂದ ಬುಧವಾರ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ ಮತ್ತು ಜಾಗೃತಿ ಕುರಿತು ಕಾರ್ಯಕ್ರಮವನ್ನು ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಜಯಪುರ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಜಗದೀಶ ಕೆ. ಮಾತನಾಡಿ, ಹಿರಿಯ ನಾಗರಿಕರ ಮೇಲಿನ ದೌರ್ಜನ್ಯಕ್ಕೆ ಒಳಗಾದವರಿಗೆ ಸರಕಾರದಿಂದ ಲಭ್ಯವಿರುವ ನಾನಾ ನೆರವು ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಕುಟುಂಬದಲ್ಲಿ ದೌರ್ಜನ್ಯವನ್ನು ತಡೆಗಟ್ಟಲು ಹೊಸ ತಲೆಮಾರಿನೊಂದಿಗೆ ಹೊಂದಾಣಿಕೆ ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ಮಕ್ಕಳ ಸಣ್ಣಪುಟ್ಟ ತಪ್ಪುಗಳನ್ನು ಕ್ಷಮಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕುಟುಂಬದಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸಬೇಕು ಮತ್ತು ಪರಸ್ಪರ ಸಹಕಾರದಿಂದ ಕುಟುಂಬವನ್ನು ಸದೃಢವಾಗಿರಿಸಬೇಕು ಎಂದು ಅವರು ಸಲಹೆ ನೀಡಿದರು.
ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕಾನೂನು ಶಾಲೆಯ ಪ್ರಾಚಾರ್ಯ ಡಾ. ರಘುವೀರ ಕುಲಕರ್ಣಿ ಮಾತನಾಡಿ, ಹಿರಿಯ ನಾಗರಿಕರ ಹಕ್ಕುಗಳು ಮತ್ತು ಅವರ ರಕ್ಷಣೆಗಾಗಿ ಜಾರಿಯಲ್ಲಿರುವ ನಾನಾ ಕಾನೂನುಗಳ ಕುರಿತು ಮಾಹಿತಿ ನೀಡಿದರು.
ಹಿರಿಯರು ತಮ್ಮ ಇಚ್ಛಾಪತ್ರ ವನ್ನು ಸೂಕ್ತವಾಗಿ ರಚಿಸಿ ಸುರಕ್ಷಿತವಾಗಿ ಇಡಬೇಕು. ಜೀವಿತಾವಧಿಯಲ್ಲಿಯೇ ತಮ್ಮ ಆಸ್ತಿಯನ್ನು ಮಕ್ಕಳ ಹೆಸರಿಗೆ ವರ್ಗಾಯಿಸದಿರುವುದು ಒಳಿತು ಎಂದು ಅವರುಸಲಹೆ ನೀಡಿದರು.
ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಸಂಜೀವ ಬೆಂಟೂರ ಮಾತನಾಡಿ, ಹಿರಿಯ ನಾಗರಿಕರಿಗೆ ಆಸ್ಪತ್ರೆಯಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ವೈದ್ಯಕೀಯ ಮತ್ತು ಸಲಹಾ ಸೇವೆಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಹಿರಿಯ ನಾಗರಿಕರ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಮತ್ತು ವಿಭಾಗದ ಮುಖ್ಯಸ್ಥ ಡಾ. ಆನಂದ ಪಿ. ಅಂಬಲಿ ಮಾತನಾಡಿ, ಹಿರಿಯರ ಮೇಲಿನ ದೌರ್ಜನ್ಯವು ಅವರ ಮಾನಸಿಕ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ವಿವರಿಸಿದರು.
ದೌರ್ಜನ್ಯಕ್ಕೆ ಒಳಗಾದ ಹಿರಿಯರಿಗೆ ವೃದ್ಧಾಪ್ಯದ ವೈದ್ಯಕೀಯ ವಿಭಾಗದಲ್ಲಿ ವೈದ್ಯಕೀಯ ಚಿಕಿತ್ಸೆ, ಮಾನಸಿಕ ಆರೋಗ್ಯ ಸಲಹೆ ಮತ್ತು ಅಗತ್ಯ ಮಾರ್ಗದರ್ಶನವನ್ನು ನಿರಂತರವಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಿರಿಯ ನಾಗರಿಕರು, ದೌರ್ಜನ್ಯಕ್ಕೆ ಒಳಗಾಗುವ ಹಿರಿಯರಿಗೆ ನೆರವಾಗುವ ವಿಶೇಷ ಕೇಂದ್ರವನ್ನು ಸ್ಥಾಪಿಸಬೇಕು. ಹಿರಿಯರು ಹಾಗೂ ಮೊಮ್ಮಕ್ಕಳು ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು, ಮೊಮ್ಮಕ್ಕಳೊಂದಿಗೆ ಆತ್ಮೀಯ ಬಾಂಧವ್ಯ ಬೆಳೆಸಿಕೊಳ್ಳುವುದು, ಸೊಸೆಯೊಂದಿಗೆ ಹೊಂದಾಣಿಕೆಯಿಂದ ವರ್ತಿಸುವುದು ಹಾಗೂ ಮನೆಯ ದೈನಂದಿನ ಕಾರ್ಯಗಳಲ್ಲಿ ಕುಟುಂಬ ಸದಸ್ಯರಿಗೆ ಸಹಕರಿಸುವುದರಿಂದ ಕುಟುಂಬದಲ್ಲಿ ಸಂತೋಷ, ಸಾಮರಸ್ಯ ಮತ್ತು ಆರೋಗ್ಯಕರ ವಾತಾವರಣ ನಿರ್ಮಾಣವಾಗುತ್ತದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ಕುರಿತು ಆಯೋಜಿಸಿದ್ದ ಪೋಸ್ಟರ್ ಸ್ಪರ್ಧೆಯಲ್ಲಿ ವಿಜೇತರಾದ ಎಂ. ಕೆ. ಹಿರ್ಯಾಳ, ಅನುಪಮಾ ಸಿನ್ಹಾ, ಅಂಜಲಿ ವರ್ಮಾ ಹಾಗೂ ದಾನಮ್ಮ ಅರಳಿ ಅವರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರು, ವೈದ್ಯರು, ಬೋಧಕ ವರ್ಗದ ಸದಸ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

