ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಶೈಕ್ಷಣಿಕ ಸಾಲಿನ ಕಿತ್ತೂರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯ ಮುಖ್ಯ ಆವರಣದ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರ ವಿಜಯಪುರ, ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿ ಹಾಗೂ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳ ಸಂಯೋಜಿತ ಮಹಾವಿದ್ಯಾಲಯಗಳಲ್ಲಿ ವಿವಿಧ ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ರಾಜ್ಯ ಸರ್ಕಾರದ ಯು.ಯು.ಸಿ.ಎಂ.ಎಸ್. ತಂತ್ರಾಂಶದ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲ್ಲು ಜುಲೈ ೨೦ ಕೊನೆಯ ದಿನಾಂಕವಾಗಿದೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಅದರ ಒಂದು ಮುದ್ರಿತ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಂಬಂಧಿತ ವಿಭಾಗ ಅಥವಾ ಕೇಂದ್ರಕ್ಕೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ವಿಶ್ವವಿದ್ಯಾಲಯ ತಿಳಿಸಿದೆ.
ಸ್ಥಳೀಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ೨೦೨೬-೨೭ನೇ ಶೈಕ್ಷಣಿಕ ಸಾಲಿನಿಂದ ವಿಜಯಪುರದ ಸ್ನಾತಕೋತ್ತರ ಕೇಂದ್ರದಲ್ಲಿ ಕನ್ನಡ, ಇಂಗ್ಲಿಷ್, ಇತಿಹಾಸ, ಸಮಾಜಕಾರ್ಯ, ವಾಣಿಜ್ಯಶಾಸ್ತ್ರ ಹಾಗೂ ಎಂ.ಸಿ.ಎ. ಕೋರ್ಸ್ಗಳ ಜೊತೆಗೆ ಉರ್ದು, ಮರಾಠಿ, ಗಣಿತಶಾಸ್ತ್ರ, ರಾಜ್ಯಶಾಸ್ತ್ರ ಮತ್ತು ಅರ್ಥಶಾಸ್ತ್ರ ವಿಷಯಗಳನ್ನೂ ಹೊಸದಾಗಿ ಆರಂಭಿಸಲಾಗಿದೆ.
ಇದಲ್ಲದೆ, ವಿಜಯಪುರ ಸ್ನಾತಕೋತ್ತರ ಕೇಂದ್ರದಲ್ಲಿ ಯಾವುದೇ ಸ್ನಾತಕೋತ್ತರ ಕೋರ್ಸ್ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ಮುಖ್ಯ ಆವರಣದ ಪ್ರವೇಶ ಶುಲ್ಕಕ್ಕೆ ಹೋಲಿಸಿದರೆ ಶೇ.೩೦ರಷ್ಟು ಶುಲ್ಕ ರಿಯಾಯಿತಿ ನೀಡಲಾಗುತ್ತಿದೆ.
ಜಿಲ್ಲೆಯ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಯು.ಯು.ಸಿ.ಎಂ.ಎಸ್. ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಅದರ ಪ್ರತಿ, ಅರ್ಜಿ ಶುಲ್ಕ ಪಾವತಿ ರಸೀದಿ ಹಾಗೂ ಅಗತ್ಯ ದಾಖಲೆಗಳ ಪ್ರತಿಗಳನ್ನು “ಸಂಯೋಜಕರು, ಸ್ನಾತಕೋತ್ತರ ಕೇಂದ್ರ, ತೊರವಿ, ವಿಜಯಪುರ” ಕಚೇರಿಗೆ ಸಲ್ಲಿಸಬೇಕು. ಅಂತಹ ವಿದ್ಯಾರ್ಥಿಗಳಿಗೆ ವಿಜಯಪುರ ಸ್ನಾತಕೋತ್ತರ ಕೇಂದ್ರದಲ್ಲಿಯೇ ಪ್ರವೇಶ ಪ್ರಕ್ರಿಯೆ ನಡೆಸಿ ಪ್ರವೇಶ ನೀಡಲಾಗುವುದು.
ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣ ತಿತಿತಿ.ಡಿಛಿub.ಚಿಛಿ.iಟಿ ಹಾಗೂ ೯೧೧೦೪೬೯೬೦೩, ೮೦೮೮೮೦೧೯೭೧ ದೂರವಾಣಿ ಸಂಖ್ಯೆಗಳ ಮೂಲಕ ಮಾಹಿತಿ ಪಡೆಯಬಹುದಾಗಿದೆ.
ವಿದ್ಯಾರ್ಥಿಗಳು ಈ ವಿಶೇಷ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಕಿತ್ತೂರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರ ಪ್ರಕಟಣೆ ತಿಳಿಸಿದೆ.
