ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ತಾಲ್ಲೂಕಿನ ಯಾಳವಾರ ಗ್ರಾಮದ ಶ್ರೀಸೋಮೇಶ್ವರ ವಿದ್ಯಾವರ್ಧಕ ಸಂಘದ ಪ್ರೌಢಶಾಲೆ ನೂತನ ಕಟ್ಟಡ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟನೆ ಮತ್ತು ಸುವರ್ಣ ಮಹೋತ್ಸವದ ಅಂಗವಾಗಿ ಸ್ಮರಣ ಸಂಚಿಕೆ ಬಿಡುಗಡೆ, ಗುರುವಂದನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಇಂದು(ಭಾನುವಾರ) ಜರುಗಲಿವೆ ಎಂದು ಸಂಸ್ಥೆಯ ಅಧ್ಯಕ್ಷ ರಾಜುಗೌಡ ನಾಡಗೌಡ್ರ ತಿಳಿಸಿದ್ದಾರೆ.
ಗ್ರಾಮದ ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿ, ಬಾಳೆಹೊನ್ನುರ ರಂಭಾಪುರಿ ಜಗದ್ಗುರು ಡಾ.ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯರ ದಿವ್ಯ ಸಾನಿಧ್ಯದಲ್ಲಿ ನಡೆಯಲಿವೆ. ಯಾಳವಾರ ಗುರುಮಠದ ದಾರುಕಲಿಂಗಶ್ರೀಗಳು ಹಾಗೂ ಆಲಮೇಲ ಗುರು ಸಂಸ್ಥಾನ ಹಿರೇಮಠದ ಚಂದ್ರಶೇಖರ ಶ್ರೀಗಳು ನೇತೃತ್ವ ವಹಿಸುವವರು. ಹರಳಕಟ್ಟೆಯ ನಿಜಗುಣ ಸ್ವಾಮೀಜಿ, ಕಡಕೋಳ ಸಂಸ್ಥಾನಮಠದ ರಾಜಗುರು ಮಹಾಲಿಂಗ ಸ್ವಾಮಿಜೀ ಉಪಸ್ಥಿತರಿರುವರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಸಂಸದ ರಮೇಶ ಜಿಗಜಿಣಗಿ ಜ್ಯೋತಿ ಬೆಳಗಿಸುವರು. ಕೆ.ಎಸ್.ಐ.ಡಿ.ಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹಾಗೂ ಸ್ಥಳೀಯ ಶಾಸಕ ರಾಜುಗೌಡ ಪಾಟೀಲ (ಕುದರಿಸಾಲವಾಡಗಿ) ಸ್ಮರಣಸಂಚಿಕೆ ಬಿಡುಗಡೆಗೊಳಿಸುವರು.
ಮಾಜಿ ಶಾಸಕರುಗಳಾದ ಎಸ್.ಎಂ.ದೇಸಾಯಿ, ಶರಣಪ್ಪ ಸುಣಗಾರ ಸೇರಿದಂತೆ ರಾಜಕೀಯ ಮುಖಂಡರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ ಗುರುವಂದನೆ ಹಾಗೂ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮಾಗಮ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೧೯೭೦-೨೦೨೬ ರವರೆಗೆ ಪ್ರಥಮ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದೆ, ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಮಾಜಿ ಸಚಿವರು, ಶಾಸಕರು, ವಿ.ಪ ಸದಸ್ಯರು, ರಾಜಕೀಯ ಮುಖಂಡರು, ಸಂಸ್ಥೆಯ ನಿರ್ದೇಶಕ ಮಂಡಳಿ,ವಿವಿಧ ಘಟಕಗಳ ಪದಾಧಿಕಾರಿಗಳ, ಗ್ರಾಮದ ಪ್ರಮುಖರು, ಗಣ್ಯರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು, ಹಳೆವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ನಂತರ ರಾತ್ರಿ ವಿಜಯಪುರದ ಮಂದಾರ ಮೆಲೋಡೀಸ್ ಹಾಗೂ ಅವರಿಂದ ರಸಮಂಜರಿ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.
