ಮತದಾರರ ಪಟ್ಟಿಯ ಪರಿಷ್ಕರಣೆಗೆ ಮತ್ತಷ್ಟು ವೇಗ | ಮನೆ-ಮನೆಗೆ ಭೇಟಿ ನೀಡಿ ಪರಿಶೀಲಿಸಿದ ತಹಶೀಲ್ದಾರ್ ಸಂಜಯ ಇಂಗಳೆ | ಬಿ.ಎಲ್.ಓ ಗಳಿಗೆ ಕಟ್ಟುನಿಟ್ಟಿನ ಸೂಚನೆ
ಉದಯರಶ್ಮಿ ದಿನಪತ್ರಿಕೆ
ಚಡಚಣ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವನ್ನು ನಿಗದಿತ ಅವಧಿಯೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಚಡಚಣ ತಹಶೀಲ್ದಾರ್ ಸಂಜಯ ಇಂಗಳೆ ಅವರು ಪಟ್ಟಣದ ವಿವಿಧ ಮನೆ-ಮನೆಗೆ ಭೇಟಿ ನೀಡಿ ಮತದಾರರ ಗಣತಿ ಹಾಗೂ ನಮೂನೆ ವಿತರಣಾ ಕಾರ್ಯವನ್ನು ಪರಿಶೀಲಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಸೇರಿದಂತೆ ಅಗತ್ಯ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡಿ, ಚುನಾವಣಾ ಆಯೋಗದ ಈ ಅಭಿಯಾನಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.
ಪರಿಶೀಲನೆ ವೇಳೆ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಎಲ್.ಓ ಗಳ ಕಾರ್ಯವನ್ನು ಸೂಕ್ಷ್ಮವಾಗಿ ಅವಲೋಕಿಸಿದ ಅವರು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಮನೆ-ಮನೆಗೆ ತೆರಳಿ ಮತದಾರರನ್ನು ಭೇಟಿ ಮಾಡಿ ಇಎಫ್ಎಸ್ ನಮೂನೆಗಳನ್ನು ವಿತರಿಸುವುದರ ಜೊತೆಗೆ, ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿಯನ್ನು ನಿಖರವಾಗಿ ದಾಖಲಿಸಬೇಕು ಎಂದು ತಿಳಿಸಿದರು.
ಬಿ.ಎಲ್.ಓ ಗಳಿಗೆ ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ತಾಂತ್ರಿಕ ಅಥವಾ ಆಡಳಿತಾತ್ಮಕ ತೊಂದರೆ ಎದುರಾದಲ್ಲಿ ಕೂಡಲೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಆಡಳಿತ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅವರು ಭರವಸೆ ನೀಡಿದರು.
ಪ್ರಗತಿ ಕುರಿತು ಮಾಹಿತಿ ನೀಡಿದ ತಹಶೀಲ್ದಾರ್ ಸಂಜಯ ಇಂಗಳೆ ಅವರು, ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,79,083 ಮತದಾರರಿದ್ದು, ಇದುವರೆಗೆ 1,75,890 ಮತದಾರರಿಗೆ ಇಎಫ್ಎಸ್ ನಮೂನೆಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು. ಈ ಮೂಲಕ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ ಸಾಧನೆಯಾಗಿದ್ದು, ಉಳಿದಿರುವ ಮನೆಗಳಿಗೆ ಶೀಘ್ರದಲ್ಲೇ ಭೇಟಿ ನೀಡಿ ಕಾರ್ಯವನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಅರ್ಹ ಪ್ರತಿಯೊಬ್ಬ ನಾಗರಿಕನ ಹೆಸರು ಮತದಾರರ ಪಟ್ಟಿಯಲ್ಲಿ ನಿಖರವಾಗಿ ಸೇರ್ಪಡೆಯಾಗುವಂತೆ ನೋಡಿಕೊಳ್ಳುವುದು ಚುನಾವಣಾ ಆಯೋಗದ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಕಂದಾಯ ಇಲಾಖೆ, ಚುನಾವಣಾ ಸಿಬ್ಬಂದಿ ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರೂ ಅಗತ್ಯ ದಾಖಲೆಗಳನ್ನು ಒದಗಿಸಿ ಸಹಕರಿಸುವಂತೆ ತಹಶೀಲ್ದಾರ್ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಪ.ಪಂ.ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರೆ, ಬಿಎಲ್ಓ ಕಟ್ಟಿಮನಿ, ಗಚ್ಚಿನಕಟ್ಟಿ , ಹೂಗಾರ, ಜಂಗಲಗಿ ಹಾಗೂ ಗ್ರಾಮಸ್ಥರಾದ ಮಾಜಿ ಪ.ಪಂ.ಅಧ್ಯಕ್ಷ ಬಾಬುಗೌಡ ಪಾಟೀಲ, ಸೋಮು ಬಡಿಗೇರ, ಬಸವರಾಜ ಯಂಕಂಚಿ ಇನ್ನಿತರರು ಇದ್ದರು.

