ಉದ್ಯೋಗ ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂ. ವಂಚನೆ | ವಿಜಯಪುರ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಮಾರ್ಗದರ್ಶನದಲ್ಲಿ ಸೆರೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ತಾನು ಡಿಎಸ್ಪಿ ಎಂದು ಹೇಳಿಕೊಂಡು ಖಾಕಿ ಸಮವಸ್ತ್ರ ಧರಿಸಿ ನಿರುದ್ಯೋಗಿ ಯುವಕರಿಗೆ ಪೊಲೀಸ್ ಹಾಗೂ ಪಿಎಸ್ಐ ಸೇರಿದಂತೆ ವಿವಿಧ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ನಡೆಸಿದ ಆರೋಪದಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಜಯಪುರ ಜಿಲ್ಲಾ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತನನ್ನು ಗ್ಯಾನನಗೌಡ @ ಜ್ಞಾನಗೌಡ @ ಗಣೇಶ @ ಸಿ. ಸಂಪತ್ಕುಮಾರ (31), ವರಗೋಡದಿನ್ನಿ ಗ್ರಾಮ, ಹುನಗುಂದ ತಾಲೂಕು, ಬಾಗಲಕೋಟೆ ಜಿಲ್ಲೆ ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, 2014ರ ಮಾರ್ಚ್ 29ರಂದು ವಿಜಯಪುರ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಅಪಹರಣ, ಕೊಲೆ ಯತ್ನ ಹಾಗೂ ವಂಚನೆ ಪ್ರಕರಣ ದಾಖಲಾಗಿತ್ತು. 2012ರಲ್ಲಿ ಕಾಖಂಡಕಿ ಗ್ರಾಮದ ವಿಠ್ಠಲ ಛಾಯಾಗೋಳ ಅವರ ಸಂಬಂಧಿಕನಿಗೆ ಪೊಲೀಸ್ ಉದ್ಯೋಗ ಕೊಡಿಸುವುದಾಗಿ ಹೇಳಿ ಆರೋಪಿಯು ಸುಮಾರು ₹1.20 ಲಕ್ಷ ಪಡೆದುಕೊಂಡಿದ್ದನು. ಬಳಿಕ ಉದ್ಯೋಗ ಕೊಡಿಸದೇ ಹಣ ವಾಪಸ್ ಕೇಳಿದಾಗ, ದೂರುದಾರನನ್ನು ಕಾರಿನಲ್ಲಿ ಅಪಹರಿಸಿ, ಹಲ್ಲೆ ನಡೆಸಿ, ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಸಮೀಪದ ಹುಲಗಿ ಗ್ರಾಮದ ಕಾಲುವೆಯಲ್ಲಿ ಕೈಗಳಿಗೆ ಬೇಡಿ ಹಾಕಿ, ಕಾಲು ಕಟ್ಟಿ ಗೋಣಿಚೀಲದಲ್ಲಿ ಹಾಕಿ ನೀರಿಗೆ ಎಸೆದು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರಕರಣದ ತನಿಖೆ ವೇಳೆ ಆರೋಪಿಯೊಂದಿಗೆ ಒಬ್ಬ ಮಹಿಳೆ ಸೇರಿ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದರಿಂದ ಪ್ರಕರಣವನ್ನು ಎಲ್ಪಿಆರ್ (Long Pending Register) ಎಂದು ಪರಿಗಣಿಸಲಾಗಿತ್ತು.
ಈ ನಡುವೆ 2026ರಲ್ಲಿ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದ್ದು, ತಾನು ಡಿಎಸ್ಪಿ ಎಂದು ಹೇಳಿಕೊಂಡು ಜೈಲರ್ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮುದ್ದೇಬಿಹಾಳ ತಾಲೂಕಿನ ಹಂದ್ರಾಳ ಗ್ರಾಮದ ವ್ಯಕ್ತಿಯಿಂದ ₹8 ಲಕ್ಷ ಪಡೆದು ವಂಚಿಸಿರುವ ಆರೋಪವೂ ಇದೆ.
ಆರೋಪಿಯ ಪತ್ತೆಯನ್ನು ಆದ್ಯತೆಯಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ, ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಎಪಿಎಂಸಿ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ ತಿಪ್ಪರೆಡ್ಡಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.
ಆರೋಪಿ ವಿವಿಧ ಹೆಸರುಗಳು ಹಾಗೂ ಮೊಬೈಲ್ ಸಂಖ್ಯೆಗಳ ಬಳಸಿ ತನ್ನ ಗುರುತು ಮರೆಮಾಚಿಕೊಂಡು ವಿವಿಧ ಊರುಗಳಲ್ಲಿ ಸಂಚರಿಸುತ್ತಿದ್ದನು. ತಾಂತ್ರಿಕ ಮಾಹಿತಿ ಹಾಗೂ ಮೊಬೈಲ್ ಲೊಕೇಷನ್ ಆಧರಿಸಿ ಪೊಲೀಸರು ಆತನನ್ನು ಜುಲೈ 6, 2026ರಂದು ಬೆಂಗಳೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪೊಲೀಸರ ಪ್ರಕಾರ, 2012ರಿಂದ ಮುದ್ದೇಬಿಹಾಳ, ಎಪಿಎಂಸಿ, ಆದರ್ಶನಗರ ಹಾಗೂ ತಾಳಿಕೋಟೆ ಪೊಲೀಸ್ ಠಾಣೆಗಳಲ್ಲಿ ಆರೋಪಿಯ ವಿರುದ್ಧ ವಂಚನೆ, ಸುಳ್ಳು ಗುರುತು ಬಳಕೆ, ಅಪಹರಣ, ಕೊಲೆ ಯತ್ನ ಹಾಗೂ ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ.
ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ತನಿಖಾ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಶ್ಲಾಘಿಸಿದ್ದಾರೆ.


