ಸಂಸದ ರಮೇಶ ಜಿಗಜಿಣಗಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ, ಕಲಬುರ್ಗಿ, ವಿಜಯಪುರ – ಹುಬ್ಬಳ್ಳಿ ರಸ್ತೆಯನ್ನು ಚತುಷ್ಪಥ ಮಾರ್ಗವನ್ನಾಗಿ ಪರಿವರ್ತನೆ ಹಿನ್ನೆಲೆಯಲ್ಲಿ ಸಂಸದ ರಮೇಶ ಜಿಗಜಿಣಗಿ
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಹತ್ವದ ಸಮಾಲೋಚನಾ ಸಭೆ ನಡೆಸಿದರು.
ವಿಜಯಪುರ ಮಹಾನಗರದಿಂದ ಕಲಬುರ್ಗಿ, ಹುಬ್ಬಳ್ಳಿ ಸೇರಿದಂತೆ ಅನೇಕ ಪ್ರಮುಖ ಮಹಾನಗರಗಳಿಗೆ ನಿತ್ಯ ಸಾವಿರಾರು ಜನರ ಓಡಾಟವಿದೆ, ಹೀಗಾಗಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಿ ವ್ಯವಸ್ಥಿತ ಸಂಚಾರಕ್ಕೆ ಅನುಕೂಲವಾಗಲು ವಿಜಯಪುರ- ಕಲಬುರ್ಗಿ, ವಿಜಯಪುರ -ಹುಬ್ಬಳ್ಳಿ ರಸ್ತೆ ಚತುಷ್ಪಥ ಮಾರ್ಗವಾಗಿ ಅಭಿವೃದ್ಧಿಗೊಳ್ಳಬೇಕಿದೆ ಎಂದು ಸಂಸದ ಜಿಗಜಿಣಗಿ ಹೇಳಿದರು.
ಈ ಕಾಮಗಾರಿಗೆ ಸಂಬಂಧಿಸಿದಂತೆ ಪೂರಕ ಅಂದಾಜು, ಪ್ರಸ್ತಾವನೆ ಸೇರಿದಂತೆ ವಿವಿಧ ಅನುಷ್ಠಾನ ಸಂಬಂಧಿಸಿದ ಸಮಗ್ರ ವಿಷಯಗಳನ್ನು ಸಮಾಲೋಚನೆ ನಡೆಸಿ ಮಾಹಿತಿ ಪಡೆದುಕೊಂಡರು.
ವಿಜಯಪುರ ಸೇರಿದಂತೆ ವಿವಿಧ ಭಾಗದ ರಾಷ್ಟ್ರೀಯ ಹೆದ್ದಾರಿಗಳಿಂದ ನೇರವಾಗಿ ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ವಿಶೇಷ ರಸ್ತೆ ಮಾರ್ಗ ನಿರ್ಮಾಣದ ಬಗ್ಗೆಯೂ ಚರ್ಚೆ ನಡೆಸಿದರು.
ವಿಜಯಪುರ ಮಹಾನಗರದಿಂದ ವಿವಿಧ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವಲ್ಲಿ ಬೈಪಾಸ್ ರಸ್ತೆ ನಿರ್ಮಾಣ, ನಗರದಲ್ಲಿ ರಿಂಗ್ ರೋಡ್ ನಿರ್ಮಾಣಕ್ಕೆ ಸಂಬಂಧಿಸಿದಂತೆಯೂ ಸಂಸದ ಜಿಗಜಿಣಗಿ ಮಾಹಿತಿ ಕಲೆ ಹಾಕಿದರು.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

