ಮತದಾರರ ನೋಂದಣಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಮನವಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನೈಜ ಮತದಾರರು ಮತದಾರರ ಪಟ್ಟಿಯಿಂದ ಹೊರಗೆ ಉಳಿಯದಂತೆ ಮತ್ತು ಅನರ್ಹ ಮತದಾರರನ್ನು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಗೆ ಸೇರ್ಪಡೆಯಾಗದಂತೆ ಕ್ರಮ ವಹಿಸಲು ಎಲ್ಲ ರಾಜಕೀಯ ಪಕ್ಷಗಳು ಹಾಗೂ ಮತದಾರರು ಸಹಕರಿಸಬೇಕು ಎಂದು ಮತದಾರರ ನೋಂದಣಾಧಿಕಾರಿಗಳು ಆಗಿರುವ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಅವರು ಹೇಳಿದರು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬುಧವಾರ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ನಗರದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ನಗರದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.
ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ತಮ್ಮ ಪಕ್ಷಗಳಿಂದ ನೇಮಿಸಿಕೊಂಡ ಬಿಎಲ್ ಒ ಗಳನ್ನು ಈ ಪರಿಷ್ಕರಣೆ ಕಾರ್ಯದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂ. ೩೦ ರಿಂದ ಜು. ೨೯ರವರೆಗೆ ಮತದಾರರ ಮನೆ ಮನೆಗೆ ತೆರಳಿ ಮತದಾರ ಗಣತಿ ನಮೂನೆಗಳನ್ನು ವಿತರಣೆ ಮಾಡಲಾಗುತ್ತಿದೆ. ಈ ಹಂತದಲ್ಲಿ ಆಯಾ ರಾಜಕೀಯ ಪಕ್ಷಗಳಿಂದ ನೇಮಿಸಿದ ಪ್ರತಿನಿಧಿಗಳು ಭಾಗವಹಿಸಬಹುದಾಗಿದೆ ಎಂದರು.
ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಜೂ. ೩೦ರಿಂದ ಜು. ೨೯ರವರೆಗೆ ಮತದಾರರ ಮನೆ ಮನೆಗೆ ತೆರಳಿ ಮತದಾರರ ಗಣತಿ ನಮೂನೆಗಳನ್ನು ವಿತರಣೆ ಮಾಡುತ್ತಿದ್ದು, ಸಾರ್ವಜನಿಕ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ತಮ್ಮ ಪಕ್ಷಗಳಿಂದ ನೇಮಿಸಿಕೊಂಡ ಬಿಎಲ್ ಎಗಳು ಈ ಕಾರ್ಯದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಇಲ್ಲಿಯವರೆಗೆ ೧,೮೪,೦೩೪ ಮತದಾರರ ಗಣತಿ ನಮೂನೆ ವಿತರಿಸಲಾಗಿದ್ದು, ಅದರಲ್ಲಿ ೨೧,೮೧೨ ಗಣತಿ ನಮೂನೆಗಳು ಡಿಜಿಟೈಸ್ ಮಾಡಲಾಗಿರುತ್ತದೆ, ಆನಲೈನ್ನಲ್ಲಿ ಮತದಾರರು ಸಲ್ಲಿಸಿದ ಒಟ್ಟು ಗಣತಿ ನಮೂನೆಗಳು ೭೪೦, ಸಂಗ್ರಹಿಸಲಾಗದ/ಗೈರುಹಾಜರಾದ ಮತದಾರರು ೩, ಶಾಶ್ವತವಾಗಿ ಸ್ಥಳಾಂತರಿಗೊಂಡ ಮತದಾರರು ೮೮, ಮರಣ ಹೊಂದಿರುವ ಮತದಾರರು ೨೧೬ ಬಗ್ಗೆ ಮಾಹಿತಿ ನೀಡಲಾಯಿತು. ಮತದಾರರಿಗೆ ಗಣತಿ ನಮೂನೆಗಳನ್ನು ಭರ್ತಿಮಾಡಲು ಸಹಾಯಮಾಡಲು ಮತದಾರರ ಅನುಕೂಲಕ್ಕಾಗಿ ಪ್ರತಿ ವಾರ್ಡ್ನಲ್ಲಿ ಈಗಾಗಲೇ ಮತದಾರರ ಸಹಾಯ ಕೇಂದ್ರ ಸ್ಥಾಪಿಸಲಾಗಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮತದಾರರಿಗೆ ಮನವಿ ಮಾಡಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಕುರಿತು ಸಾರ್ವಜನಿಕರಿಗೆ ಮಹಾನಗರ ಪಾಲಿಕೆಯ ಘನತ್ಯಾಜ್ಯ ವಾಹನಗಳಲ್ಲಿ ಧ್ವನಿ ವರ್ಧಕದ ಮೂಲಕ ಪ್ರಚಾರ ಮಾಡಲಾಗುತ್ತಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಮತದಾರರ ಸಹಾಯ ವಾಣಿ: ೦೮೩೫೨- ೨೦೦೨೨೫ ಸ್ಥಾಪಿಸಲಾಗಿದೆ ಎಂದರು.
ವಿಜಯಪುರ ನಗರ ಮತಕ್ಷೇತ್ರ ಸಂಬಂಧಿಸಿದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಚುನಾವಣಾ ಆಯೋಗದ ಎಲ್ಲಾ ಹಂತಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡಿರುವ ಪಾರದರ್ಶಕ ಪ್ರಕ್ರಿಯೆಯಾಗಿದೆ. ಯಾವುದೇ ಕಾರಣಕ್ಕೆ ಮತದಾರರ ಪಟ್ಟಿಯಿಂದ ನೈಜ ಮತದಾರರು ಹೊರಗುಳಿಯದಂತೆ ಹಾಗೂ ಅನರ್ಹ ಮತದಾರರು ಪಟ್ಟಿಯಲ್ಲಿ ಸೇರ್ಪಡೆಯಾಗದಂತೆ ನೋಡಿಕೊಳ್ಳಬೇಕು ಎಂದು ರಾಜಕೀಯ ಪಕ್ಷದ ಮುಖಂಡರು ಹಾಗೂ ಮತದಾರರಿಗೆ ಮನವಿ ಮಾಡಿದರು.
ಸಭೆಯಲ್ಲಿ ವಿವಿಧ ಪಕ್ಷಗಳ ರಾಜಕೀಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

