ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ವಿಜಯಪುರ ಜಿಲ್ಲಾ ಅಧ್ಯಕ್ಷರಾದ ನಾಗರಾಜ ಕಬಾಡೆ ಅವರ ಅಧ್ಯಕ್ಷತೆಯಲ್ಲಿ ಸಂಘಟನೆಯ ನಿಯೋಗವು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಮನವಿಯಲ್ಲಿ, ನಾಗರಿಕ ವಿಧಾನಸಭಾ ಕ್ಷೇತ್ರದ ಅಲಿಯಾಬಾದ್ ಗ್ರಾಮ ಪಂಚಾಯತ್ ವಾರ್ಡ್ ಸಂಖ್ಯೆ-2ರ ಮೀಸಲಾತಿಯನ್ನು ನಿಯಮಾನುಸಾರ ಮರು ಪರಿಶೀಲಿಸಿ, ಪರಿಶಿಷ್ಟ ಜಾತಿ (ಎಸ್ಸಿ) ಮಹಿಳೆಗೆ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಲಾಯಿತು.
ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ-2 ಪರಿಶಿಷ್ಟ ಜಾತಿ (ಎಸ್ಸಿ) ಪುರುಷರಿಗೆ ಮೀಸಲಾಗಿತ್ತು. ಪ್ರಸ್ತುತ ಮೀಸಲಾತಿ ಸರಣಿಯ ನಿಯಮಗಳ ಪ್ರಕಾರ ಈ ಬಾರಿ ಸದರಿ ವಾರ್ಡ್ ಪರಿಶಿಷ್ಟ ಜಾತಿ (ಎಸ್ಸಿ) ಮಹಿಳೆಗೆ ಮೀಸಲಾಗಬೇಕಾಗಿತ್ತು. ಆದರೆ ಪ್ರಕಟಿಸಿರುವ ಮೀಸಲಾತಿಯಲ್ಲಿ ನಿಯಮ ಪಾಲನೆಯಾಗಿಲ್ಲ ಎಂಬ ಅನುಮಾನ ವ್ಯಕ್ತವಾಗಿದ್ದು, ಇದರಿಂದ ಪರಿಶಿಷ್ಟ ಜಾತಿಯ ಮಹಿಳೆಯರಿಗೆ ದೊರೆಯಬೇಕಾದ ಸಂವಿಧಾನಬದ್ಧ ಅವಕಾಶಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ದಾಖಲೆಗಳು ಹಾಗೂ ಮೀಸಲಾತಿ ಸರಣಿಯನ್ನು ಸಮಗ್ರವಾಗಿ ಪರಿಶೀಲಿಸಿ, ಯಾವುದೇ ಲೋಪದೋಷಗಳಿದ್ದಲ್ಲಿ ಅವುಗಳನ್ನು ಸರಿಪಡಿಸಿ, ವಾರ್ಡ್ ಸಂಖ್ಯೆ-2ನ್ನು ನಿಯಮಾನುಸಾರ ಎಸ್ಸಿ ಮಹಿಳೆಗೆ ಮೀಸಲಾತಿ ಕಲ್ಪಿಸುವಂತೆ ಸಂಘಟನೆ ಒತ್ತಾಯಿಸಿತು.
ಈ ಸಂದರ್ಭದಲ್ಲಿ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ರಾಜ್ಯಾಧ್ಯಕ್ಷ ಶ್ರೀ ಅಪ್ಪುರಾಜ್ ನಿಮಾದಾರ, ರಾಜ್ಯ ಉಪಾಧ್ಯಕ್ಷ ವಿಜಯಕುಮಾರ ನಿಮಾದಾರ, ಜಿಲ್ಲಾ ಗೌರವಾಧ್ಯಕ್ಷ ಕಿರಣಕುಮಾರ ಅಲಿಯಾಬಾದ, ರಾಜ್ಯ ಮಹಿಳಾ ಅಧ್ಯಕ್ಷೆ ನೀಲಾಂಬಿಕಾ ಕಟ್ಟಿಮನಿ, ವಿಜಯಪುರ ಜಿಲ್ಲಾ ಮಹಿಳಾ ಅಧ್ಯಕ್ಷೆ ಶಿಲ್ಪಾ ಮೇತ್ರಿ, ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಹಕ್ ಇನಾಮದಾರ, ನಗರ ಘಟಕದ ಅಧ್ಯಕ್ಷ ರವಿಚಂದ್ರ ಶಹಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಕಟ್ಟಿಮನಿ, ಸಾಹೇಬಲಾಲ ಹಿಪ್ಪರಗಿ, ಎಂ.ಎಂ. ಖಾನ್, ಸಂತೋಷ ಕಟ್ಟಿಮನಿ, ಹುಸೇನ ಹಿಪ್ಪರಗಿ, ರಾಘವೇಂದ್ರ ಕಾಸೆ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

