ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಅಧ್ಯಕ್ಷ ಬಸವರಾಜ ರಂಜುಣಗಿ ಒತ್ತಾಯ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಮಳೆಯ ಕೊರತೆಯಿಂದ ತೀವ್ರ ಹಾನಿಗೊಳಗಾದ ಪ್ರದೇಶಗಳನ್ನು ತಕ್ಷಣವೇ ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಬೆಳೆ ಹಾನಿಗೆ ಸೂಕ್ತ ಪರಿಹಾರ, ರೈತರಿಗೆ ಉಚಿತ ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ಕೃಷಿ ಪಂಪ್ಸೆಟ್ಗಳಿಗೆ ನಿರಂತರ ವಿದ್ಯುತ್ ಪೂರೈಕೆ, ಬೆಳೆ ವಿಮೆ ಮೊತ್ತವನ್ನು ಶೀಘ್ರದಲ್ಲಿ ವಿತರಣೆ ಹಾಗೂ ಅಗತ್ಯ ಕೃಷಿ ಸಹಾಯಧನ ನೀಡುವಂತೆ ಸರ್ಕಾರಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಅಧ್ಯಕ್ಷ ಬಸವರಾಜ ರಂಜುಣಗಿ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಕೊರತೆ ಹಾಗೂ ಕೃಷಿ ಚಟುವಟಿಕೆಗಳಿಗೆ ಉಂಟಾಗಿರುವ ತೀವ್ರ ಸಂಕಷ್ಟದಿಂದ ರೈತರು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಬೆಳೆ ನಷ್ಟ, ನೀರಿನ ಅಭಾವ ಮತ್ತು ಉತ್ಪಾದನಾ ವೆಚ್ಚದ ಏರಿಕೆಯಿಂದ ರೈತರು ಆರ್ಥಿಕವಾಗಿ ತೀವ್ರ ಹಿನ್ನಡೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರ ಕೃಷಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರಗಳು ತುರ್ತು ಕ್ರಮಕೈಗೊಂಡು, ಸಂಕಷ್ಟದಲ್ಲಿರುವ ರೈತರಿಗೆ ಆರ್ಥಿಕ ನೆರವು ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

