ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ | ಚುನಾವಣಾಧಿಕಾರಿ & ಜಿಲ್ಲಾಧಿಕಾರಿ ಡಾ. ಆನಂದ ಕೆ ಮಾಹಿತಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ಜೂ.೨೯ ರಿಂದ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಭರದಿಂದ ನಡೆದಿದ್ದು, ಜು.೧೨ರವರೆಗೆ ಜಿಲ್ಲೆಯ ಪ್ರಗತಿ ವರದಿಯ ಪ್ರಕಾರ ಇಲ್ಲಿಯವರೆಗೆ ೧೮,೮೮,೬೫೭ ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ. ಅವುಗಳಲ್ಲಿ ೬,೪೪,೮೧೦ ಗಣಕೀಕರಣಗೊಂಡ ಗಣತಿ ನಮೂನೆಗಳಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.
ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ ಒಟ್ಟು ೧೯,೮೨,೧೧೪ ಮತದಾರರು ದಾಖಲಾಗಿದ್ದಾರೆ. ಇವರಿಗೆ ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸಿ, ಅಗತ್ಯ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ ಎಂದವರು ತಿಳಿಸಿದ್ದಾರೆ.
ಗಣತಿ ನಮೂನೆಗಳ ವಿತರಣೆ ಮತ್ತು ಡಿಜಿಟಲೀಕರಣ ಕಾರ್ಯವು ಜೂನ್.೩೦ ರಿಂದ ಜುಲೈ.೨೯ ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ ದಾಖಲೆಗಳೊಂದಿಗೆ ನಮೂನೆಗಳನ್ನು ಸಲ್ಲಿಸಬಹುದಾಗಿದೆ.
೧,೬೭೪ ಮತದಾರರು ಆನ್ ಲೈನ್ ಮೂಲಕ ಗಣತಿ ನಮೂನೆಗಳನ್ನು ಸಲ್ಲಿಸಿದ್ದಾರೆ. ೩೫೦೯ ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ. ೪,೭೩೮ ಮತದಾರರು ಮೃತಪಟ್ಟಿದ್ದಾರೆ. ೧,೩೬೪ಮತದಾರರು ಈಗಾಗಲೇ ನೋಂದಾಯಿಸಿಕೊಂಡಿರುವುದು ಪರಿಶೀಲನೆಯಲ್ಲಿ ಕಂಡುಬಂದಿದೆ.ಸಂಗ್ರಹಿಸಲಾಗದ ಅಥವಾ ಗೈರುಹಾಜರಾಗಿರುವ ಮತದಾರರು ೮೨ ಹಾಗೂ ೯೫ ಇತರೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

