ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಜಪೂತ ಸಮಾಜದ ಸರ್ವತೋಮುಖ ಪ್ರಗತಿಗಾಗಿ ರಜಪೂತ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಜಪೂತ ಸಮಾಜ ಬಾಂಧವರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಲಿಖಿತ ಮನವಿ ಸಲ್ಲಿಸಿದರು.
ನೇತೃತ್ವ ವಹಿಸಿದ್ದ ರಜಪೂತ ಸಮಾಜದ ಜಿಲ್ಲಾಧ್ಯಕ್ಷ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ ಮಾತನಾಡಿ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ರಜಪೂತ ಸಮಾಜದ ಏಳಿಗೆಗಾಗಿ ರಜಪೂತ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಸರ್ಕಾರ ಮುಂದಾಗಬೇಕಿದೆ,
ರಾಜ್ಯದಲ್ಲಿ ಲಕ್ಷಾಂತರ ಜನಸಂಖ್ಯೆ ಹೊಂದಿರುವ ರಜಪೂತ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಉದ್ಯೋಗದ ರಂಗದಲ್ಲಿ ತೀವ್ರವಾಗಿ ಹಿಂದುಳಿದಿದೆ, ಯುವ ಪೀಳಿಗೆಗೆ ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನ ಸಿಗದೇ ಸಮಾಜವು ಇಂದಿಗು ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಯುವಕರಿಗೆ ತರಬೇತಿ, ಸ್ವ ಉದ್ಯೋಗಕ್ಕೆ ಸಾಲ ಮೊದಲಾದ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಅಭಿವೃದ್ಧಿ ನಿಗಮ ಆರಂಭವಾಗಬೇಕಾಗಿರುವುದು ಅಗತ್ಯವಾಗಿದೆ,
ಈಗಾಗಲೇ ರಜಪೂತ ಸಮಾಜದ ಕೌಂಟಂಬಿಕ ಸಮೀಕ್ಷೆ ಹಾಗೂ
ಡಿಜಿಟಲ್’ ನೋಂದಣಿ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಸಮಗ್ರ ದತ್ತಾಂಶ ವರದಿಯು ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗದ ಪರಿಶೀಲನೆಯಲ್ಲಿದೆ. ಈ ಮಹತ್ವದ ಅಭಿಯಾನದ ಮೂಲಕ ಇಡೀ ರಾಜ್ಯದ ರಜಪೂತ ಸಮಾಜದ ಬಂಧುಗಳು ಒಗ್ಗಟ್ಟಾಗುತ್ತಿದ್ದಾರೆ,
ಕಲಬುರ್ಗಿ ಜಿಲ್ಲೆಯಲ್ಲಿ ಆರಂಭವಾಗಿರುವ ಈ ಪ್ರಕ್ರಿಯೆಗೆ ಪೂರಕವಾಗಿ ನಮ್ಮ ವಿಜಯಪುರ ಜಿಲ್ಲೆಯ ರಜಪೂತ ಸಮಾಜದ ಬಾಂಧವರೂ ಸಂಪೂರ್ಣ ಬೆಂಬಲವಿದೆ ಎಂದರು.
ಹೀಗಾಗಿ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ರಜಪೂತ ಅಭಿವೃದ್ಧಿ ಮಂಡಳಿ ಯನ್ನು ತಕ್ಷಣವೇ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ನಗರದ ರಜಪೂತ ಸಮಾಜದ ಪ್ರಮುಖರು ಈ ವೇಳೆ ಪಾಲ್ಗೊಂಡಿದ್ದರು.

