ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರ ವಿಧಾನಸಭಾ ಮತಕ್ಷೇತ್ರದ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಚುನಾವಣಾ ಕೆಲಸದಲ್ಲಿ ಅಡ್ಡಿಪಡಿಸುತ್ತಿರುವ ಸಂಗತಿಗಳು ಗಮನಕ್ಕೆ ಬಂದಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದು, ಸಿಬ್ಬಂದಿಯ ಕರ್ತವ್ಯಕ್ಕೆ ಮತ್ತೆ ಅಡಚಣಿಯನ್ನುಂಟು ಮಾಡಿದಲ್ಲಿ ಅಂತಹವರ ವಿರುದ್ಧ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮತದಾರರ ನೋಂದಣಿ ಅಧಿಕಾರಿಯೂ ಆಗಿರುವ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಅವರು ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಮನೆ ಮನೆ ಸಮೀಕ್ಷೆ ಕಾರ್ಯ ಕೈಗೊಂಡಿದ್ದಾರೆ. ಈ ಕಾರ್ಯ ಪ್ರಗತಿಯಲ್ಲಿದೆ. ಹಾಗಾಗಿ ಸಾರ್ವಜನಿಕರು ಬಿಎಲ್ ಒ ಗಳಿಗೆ ಸಹಕರಿಸುವುದು ಆದ್ಯ ಕರ್ತವ್ಯವಾಗಿದೆ ತಿಳಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜಕೀಯ ಪಕ್ಷಗಳ ಸಭೆ ಕರೆದು, ಆಯಾ ಪಕ್ಷಗಳಿಂದ ಬಿಎಲ್ ಎ ಗಳನ್ನು ನೇಮಕ ಮಾಡಲಾಗಿದೆ. ಈ ಬಿಎಲ್ ಎಗಳು ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಮತದಾರರ ಮನೆ ತೋರಿಸುವ ಮೂಲಕ ಸಹಕಾರ ನೀಡುತ್ತಿದ್ದಾರೆ. ಆದರೆ ಇತ್ತೀಚಿಗೆ ವಿಜಯಪುರ ನಗರ ಮತಕ್ಷೇತ್ರದ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಅನಗತ್ಯ ಮಾಹಿತಿ ಕೇಳಿ ಬೆದರಿಕೆಯೊಡ್ಡುತ್ತಿದ್ದಾರೆ. ಇದರಿಂದಾಗಿ ಅವರಿಗೆ ಎಸ್ ಐಆರ್ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಬಿಎಲ್ ಒಗಳು ಎಸ್ ಐಆರ್ ಪ್ರಕ್ರಿಯೆ ವೀಕ್ಷಣೆ ಸಮಯದಲ್ಲಿ ಮತ್ತು ಗೂಗಲ್ ಮೀಟ್ ಸಭೆಯಲ್ಲಿ ನಮ್ಮ ಗಮನಸೆಳೆದಿದ್ದಾರೆ. ಮಹಾನಗರ ಪಾಲಿಕೆಯಿಂದ ಕಾಲ ಕಾಲಕ್ಕೆ ರಾಜಕೀಯ ಪಕ್ಷಗಳ ಸಭೆ ನಡೆಸಿ ಎಸ್ ಐಆರ್ ಮಾಹಿತಿ ನೀಡಲಾಗುತ್ತಿದೆ. ರಾಜಕೀಯ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳಿಗೆ ಮಾಹಿತಿ ಅವಶ್ಯವಿದ್ದಲ್ಲಿ ತಮ್ಮ ಪಕ್ಷದಿಂದ ನೇಮಕವಾದ ಬಿಎಲ್ ಎಗಳಿಂದ ಪಡೆದುಕೊಳ್ಳಬಹುದು. ಇಲ್ಲವೇ ಮಹಾನಗರ ಪಾಲಿಕೆ ಚುನಾವಣಾ ಶಾಖೆಯಿಂದ ಪಡೆದುಕೊಳ್ಳಬಹುದಾಗಿದೆ. ಆದರೆ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಅನಗತ್ಯ ಮಾಹಿತಿ ಕೇಳುತ್ತಿರುವದರಿಂದ ಎಸ್ ಐಆರ್ ಕಾರ್ಯಕ್ಕೆ ಕುಂಠಿತವಾಗುತ್ತಿದೆ. ಈ ಕಾರ್ಯಕ್ಕೆ ತೊಂದರೆ ಮಾಡುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಮುಲಾಜಿಲ್ಲದೇ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

