ಅಥಣಿಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಶಾಸಕ ಲಕ್ಷ್ಮಣ ಸವದಿ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ಅಥಣಿ: ಅಥಣಿ ಪಟ್ಟಣದ ಹೃದಯ ಭಾಗದಲ್ಲಿರುವ ಜೋಡಿ ಕೆರೆ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದ್ದು, ಶಾಸಕ ಲಕ್ಷ್ಮಣ ಸವದಿ ಅವರು ಮಂಗಳವಾರ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.
ಈ ವೇಳೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಂದ ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ಪಡೆದ ಶಾಸಕ ಲಕ್ಷ್ಮಣ ಸವದಿ ಅವರು, ಸ್ಥಳದಲ್ಲಿನ ಕೆಲ ಅವ್ಯವಸ್ಥೆಗಳನ್ನು ಗಮನಿಸಿ ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಾಮಗಾರಿಯನ್ನು ನಿಗದಿತ ವೇಳಾಪಟ್ಟಿಯಂತೆ, ಗುಣಮಟ್ಟ ಕಾಪಾಡಿಕೊಂಡು ವ್ಯವಸ್ಥಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪರಿಶೀಲನೆ ಬಳಿಕ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, “ಅಥಣಿ ಪಟ್ಟಣದ ಜನರ ಬಹುದಿನಗಳ ಕನಸಾಗಿದ್ದ ಜೋಡಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಈಗ ವೇಗ ಸಿಕ್ಕಿದೆ. ಅಥಣಿ ಪಟ್ಟಣ ನಗರಸಭೆಯಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಜೋಡಿ ಕೆರೆಯ ಅಭಿವೃದ್ಧಿಯಿಂದ ಪಟ್ಟಣದ ಸೌಂದರ್ಯ ಮತ್ತಷ್ಟು ಹೆಚ್ಚಲಿದೆ. ಕೆರೆಯ ಸುತ್ತಮುತ್ತ ಹಸಿರು ವಾತಾವರಣ ನಿರ್ಮಿಸಲು ವಿವಿಧ ಜಾತಿಯ ಗಿಡ-ಮರಗಳನ್ನು ನೆಡಲಾಗುವುದು. ಸಾರ್ವಜನಿಕರು ಬೆಳಿಗ್ಗೆ ಹಾಗೂ ಸಂಜೆ ವಾಯುವಿಹಾರ ನಡೆಸಲು ಅನುಕೂಲವಾಗುವಂತೆ ಕೆರೆಯ ಸುತ್ತ ಸುಸಜ್ಜಿತ ವಾಕಿಂಗ್ ಟ್ರ್ಯಾಕ್ ನಿರ್ಮಿಸಲಾಗುವುದು,” ಎಂದು ತಿಳಿಸಿದರು.
“ಸಾರ್ವಜನಿಕರ ಹಣದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ಕಳಪೆ ಗುಣಮಟ್ಟವನ್ನು ಸಹಿಸುವುದಿಲ್ಲ. ಕಾಮಗಾರಿಯನ್ನು ನಿಗದಿತ ಮಾನದಂಡಗಳಂತೆ, ಪಾರದರ್ಶಕವಾಗಿ ಹಾಗೂ ಗುಣಮಟ್ಟದಿಂದ ಪೂರ್ಣಗೊಳಿಸಬೇಕು. ಕಾಮಗಾರಿಯಲ್ಲಿ ನಿರ್ಲಕ್ಷ್ಯ ಅಥವಾ ಅವ್ಯವಸ್ಥೆಗೆ ಅವಕಾಶ ನೀಡುವುದಿಲ್ಲ,” ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು

