15 ವರ್ಷಗಳಿಂದ ಹದಗೆಟ್ಟ ರಸ್ತೆ | ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
ಉದಯರಶ್ಮಿ ದಿನಪತ್ರಿಕೆ
ಚಡಚಣ: ತಾಲೂಕಿನ ಗುಂದವಾನದಿಂದ ಶೀಗಣಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ವಹಿವಾಟು ರಸ್ತೆ ಕಳೆದ ಸುಮಾರು ಹದಿನೈದು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ.
ಈ ಕುರಿತು ಹಲವು ಬಾರಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತ ಮಲ್ಲಿಕಾರ್ಜುನ ತುಪ್ಪದ ಮಾತನಾಡಿ, “ಈ ರಸ್ತೆಯ ದುಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಹಿಡಿದು ಗ್ರಾಮ ಪಂಚಾಯತ್ ಅಧಿಕಾರಿಗಳವರೆಗೆ ಎಲ್ಲರ ಗಮನಕ್ಕೆ ತಂದಿದ್ದೇವೆ. ಆದರೆ ಕಣ್ಣಿದ್ದೂ ಕುರುಡರು, ಕಿವಿಯಿದ್ದೂ ಕಿವುಡರಂತೆ ಅಧಿಕಾರಿಗಳು ವರ್ತಿಸುತ್ತಿದ್ದಾರೆ. ಶಾಲಾ ವಿದ್ಯಾರ್ಥಿಗಳ ಹಾಗೂ ರೈತರ ಸಂಕಷ್ಟ ಯಾರಿಗೂ ಕಾಣುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ತುಕಾರಾಮ ಕರಗಣಿ ಮಾತನಾಡಿ, “ಸುಮಾರು 15 ವರ್ಷಗಳಿಂದ ರಸ್ತೆ ದುರಸ್ತಿಯಾಗಿಲ್ಲ. ಆದರೆ ಗ್ರಾಮ ಪಂಚಾಯತ್ ಮಾತ್ರ ಕಾಮಗಾರಿ ನಡೆಸಿದಂತೆ ಬೋಗಸ್ ಬಿಲ್ ಎತ್ತಿರುವ ಅನುಮಾನ ವ್ಯಕ್ತವಾಗುತ್ತಿದೆ. ರೈತರ ಸಮಸ್ಯೆಗಳಿಗೆ ಯಾವುದೇ ಬೆಲೆ ಇಲ್ಲ. ಸ್ವಲ್ಪ ಮಳೆ ಬಂದರೂ ರಸ್ತೆ ಸಂಪೂರ್ಣ ಕೆಸರುಮಯವಾಗಿ ಸುಗಮ ಸಂಚಾರಕ್ಕೆ ಅಸಾಧ್ಯವಾಗುತ್ತದೆ. ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ತೆರಳಲು ಹರಸಾಹಸ ಪಡಬೇಕಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಹೋಗುವುದೇ ಕಷ್ಟವಾಗಿದ್ದು, ಪ್ರತಿದಿನ ಜೀವದ ಹಂಗು ತೊರೆದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮಸ್ಥರ ಪ್ರಕಾರ, ಈ ರಸ್ತೆ ಸುಧಾರಣೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಕಚೇರಿಗೆ ಅನೇಕ ಬಾರಿ ಲಿಖಿತ ಮನವಿ ಸಲ್ಲಿಸಲಾಗಿದೆ. ಆದರೂ ಪಿಡಿಒ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಕನಿಷ್ಠ ಪ್ರಯತ್ನವನ್ನೂ ಕೂಡಾ ಮಾಡಿಲ್ಲ. ಯಾವುದಾದರೂ ದೊಡ್ಡ ಅನಾಹುತ ಸಂಭವಿಸಿದ ಬಳಿಕವೇ ಅಧಿಕಾರಿಗಳು ಎಚ್ಚೆತ್ತುಕೊಳ್ಳುವರೇ?” ಎಂಬ ಪ್ರಶ್ನೆಯನ್ನು ಗ್ರಾಮಸ್ಥರು ಎತ್ತಿದ್ದಾರೆ.
ತಕ್ಷಣ ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಗುಂದವಾನ–ಶೀಗಣಾಪುರ ಗ್ರಾಮಗಳ ಜನರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಶ್ರೀಮಂತ ತಳವಾರ, ರಮೇಶ ತುಪ್ಪದ, ಕೃಷ್ಣಾ ಕದಂ, ರುಕಮುದ್ದೀನ ಬಳಗಾರ, ಅಮಸಿದ್ದ ಕರಗಣಿ, ನಾಗಪ್ಪ ಮಾದರ, ಸೋಮನಾಥ ಬಡಿಗೇರ್, ಸುರೇಶ ಮಾದರ, ರೇವಪ್ಪ ಬಗಲಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

