ದಲಿತ ಸೇನೆ ಚಡಚಣ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ | ಮಹಾದೇವ ಬನಸೋಡೆ ಕರೆ
ಉದಯರಶ್ಮಿ ದಿನಪತ್ರಿಕೆ
ಚಡಚಣ: ತಾಲೂಕಿನ ಶೋಷಿತರು, ನೊಂದವರು ಹಾಗೂ ಸಮಾಜದ ವಂಚಿತ ವರ್ಗಗಳ ಧ್ವನಿಯಾಗಿ ಕಾರ್ಯನಿರ್ವಹಿಸುವ ಸಂಕಲ್ಪದೊಂದಿಗೆ ದಲಿತ ಸೇನೆ ಚಡಚಣ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಅವರ ಆದೇಶದ ಮೇರೆಗೆ ಹಾಗೂ ವಿಜಯಪುರ ಜಿಲ್ಲಾಧ್ಯಕ್ಷ ಖಾಜು ಹೊಸಮನಿ ಅವರ ನೇತೃತ್ವದಲ್ಲಿ ಚಡಚಣ ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ವಿಶೇಷ ಸಭೆಯಲ್ಲಿ ಗುರುವಾರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಹಿರಿಯ ಮುಖಂಡ ಮಹಾದೇವ ಬನಸೋಡೆ, ಸಂಘಟನೆಯಲ್ಲಿ ಜವಾಬ್ದಾರಿ ವಹಿಸಿಕೊಂಡವರು ಹುದ್ದೆಗೆ ಮಾತ್ರ ಸೀಮಿತರಾಗದೆ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ನೊಂದವರು ಹಾಗೂ ತುಳಿತಕ್ಕೊಳಗಾದವರ ಪರವಾಗಿ ನಿರಂತರ ಹೋರಾಟ ನಡೆಸುವ ಮನೋಭಾವ ಬೆಳೆಸಿಕೊಳ್ಳಬೇಕು. ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರನ್ನು ಸಮಾನವಾಗಿ ಕಾಣುವ ಮೂಲಕ ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹೋದರತ್ವವನ್ನು ಬಲಪಡಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧ್ಯಕ್ಷ ಖಾಜು ಹೊಸಮನಿ ಮಾತನಾಡಿ, ಚಡಚಣ ತಾಲೂಕಿನಲ್ಲಿ ದಲಿತ ಸೇನೆಯು ಜನಪರ ಮತ್ತು ಪ್ರಗತಿಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರಬೇಕು ಎಂದರು. ಸಂಘಟನೆಯ ಹೆಸರನ್ನು ವೈಯಕ್ತಿಕ ಸ್ವಾರ್ಥಕ್ಕಾಗಿ ಬಳಸಿಕೊಳ್ಳದೆ, ಸಮಾಜದಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಸಂಘಟನೆಯ ಶಿಸ್ತು, ಘನತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವುದು ಪ್ರತಿಯೊಬ್ಬ ಪದಾಧಿಕಾರಿಯ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಈ ವೇಳೆ ತಾಲೂಕು ಅಧ್ಯಕ್ಷ ರಮೇಶ ಬೆಳ್ಳೆನವರ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದರು. ಗೌರವಾಧ್ಯಕ್ಷರಾಗಿ ದ್ಯಾಮಗೊಂಡ ಕಾಂಬಳೆ, ಉಪಾಧ್ಯಕ್ಷರಾಗಿ ಚೆನ್ನಪ್ಪ ಕಾಂಬಳೆ,ಪ್ರಧಾನ ಕಾರ್ಯದರ್ಶಿಯಾಗಿ ಭಗವಾನ ಬುದ್ಧ ಬನಸೋಡೆ,ಕಾರ್ಯದರ್ಶಿಗಳು: ಸದಾಶಿವ ಕಾಂಬಳೆ, ಸದಾಶಿವ ಹೊಸಮನಿ,ಸಂಘಟನಾ ಸಂಚಾಲಕರು: ಅನಿಲ ಸರತಾಪೆ, ಗೀರಿಶ ಬನಸೋಡೆ, ನಗರ ಘಟಕ ಅಧ್ಯಕ್ಷ: ಸಂದೇಶ ಬನಸೋಡೆ ಎಂದು ಘೋಷಿಸಿದರು.
ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಸಭೆಯಲ್ಲಿ ಮುಂಬರುವ ದಿನಗಳಲ್ಲಿ ತಾಲೂಕಿನ ಹಳ್ಳಿ-ಹಳ್ಳಿಗಳಿಗೆ ಭೇಟಿ ನೀಡಿ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದು, ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಹಾಗೂ ಸಮಾಜದ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಕುರಿತು ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಬಸವ ಸಮಿತಿ ಅಧ್ಯಕ್ಷ ಮುರುಘೇಂದ್ರ ಸಿಂಪಿ, ಚಂದ್ರಾಮ ಮೇಲಿನಕೇರಿ, ಯಲ್ಲಪ್ಪ ತಳಕೇರಿ ಸೇರಿದಂತೆ ಸಂಘಟನೆಯ ಅನೇಕ ಮುಖಂಡರು, ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

