ತ್ರೈಮಾಸಿಕ ಡಿಸ್ಟ್ರಿಕ್ಟ್ ಕನ್ಸಲ್ಟೇಟಿವ್ ಕಮಿಟಿ ಸಭೆ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬ್ಯಾಂಕರ್ಸ್ಗಳಿಗೆ ಜಿ.ಪಂ. ಸಿಇಓ ರಿಷಿ ಆನಂದ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗ್ರಾಹಕರು ಬ್ಯಾಂಕಿಗೆ ಕಾರ್ಯ ನಿಮಿತ್ತ ಆಗಮಿಸಿದ ಸಂದರ್ಭದಲ್ಲಿ ಅವರ ಕುಂದು ಕೊರತೆ ಆಲಿಸುವ ಮೂಲಕ ಅವರಿಗೆ ಸರಿಯಾಗಿ ಸ್ಪಂದನೆ ಮಾಡಬೇಕು. ಬ್ಯಾಂಕುಗಳಿಗೆ ಆಗಮಿಸುವ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಬೇಕು. ಸಕಾರಾತ್ಮಕ ಮನೋಭಾವದೊಂದಿಗೆ ಅವರ ಸಮಸ್ಯೆಗಳಿಗೆ ಕಿವಿಯಾಗಬೇಕು. ಆರ್.ಬಿ.ಐ ಮಾರ್ಗಸೂಚಿ ಪ್ರಕಾರ ಬ್ಯಾಂಕ್ ಯೋಜನೆಗಳ ಬಗ್ಗೆ ಗ್ರಾಹಕರಿಗೆ ಜಾಗೃತಿ ಮೂಡಿಸಬೇಕು ಮತ್ತು ಸೌಲಭ್ಯಗಳ ಕುರಿತು ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಹೇಳಿದರು ಅವರು, ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಗ್ರಣೀಯ (ಲೀಡ್) ಬ್ಯಾಂಕ್ ವತಿಯಿಂದ ತ್ರೈಮಾಸಿಕ ಡಿಸ್ಟ್ರಿಕ್ಟ್ ಕನ್ಸಲ್ಟೇಟಿವ್ ಕಮಿಟಿ ಸಭೆ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.
ಸಾಲ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು ಬಾಕಿ ಬಾಕಿ ಉಳಿಸಿಕೊಳ್ಳುವಂತಿಲ್ಲ. ಬ್ಯಾಂಕ್ ಸಾಲಗಳಿಗೆ ಅರ್ಜಿ ಸಲ್ಲಿಸಿದಾಗ ಒಂದು ವೇಳೆ ದಾಖಲಾತಿಗಳು ಅಪೂರ್ಣ ಇದ್ದಲ್ಲಿ ಗ್ರಾಹಕರಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು. ಪ್ರತಿಯೊಬ್ಬ ಗ್ರಾಹಕರ ಅರ್ಜಿಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡಲೇಬೇಕು. ಸರ್ಕಾರವು ಜಾರಿಗೊಳಿಸುವ ಯೋಜನೆಗಳ ಲಾಭ ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಬ್ಯಾಂಕಿನಲ್ಲಿ ಅರ್ಹ ಫಲಾನುಭವಿಗಳ ದಾಖಲೆ ಅನುಸಾರ ಬ್ಯಾಂಕ್ ಸಾಲ ಸೌಲಭ್ಯ ಅರ್ಜಿ ಪರಿಶೀಲನೆ ನಡಸಿ ಬೇಗ ಇತ್ಯರ್ಥಗೊಳಿಸಬೇಕು.. ಎಲ್ಲಾ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳುವಂತೆ ಫಲಾನುಭವಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು.
ವಿವಿಧ ಇಲಾಖೆಗಳಡಿ ಇರುವ ಯೋಜನೆಗಳಾದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ(ಎನ್.ಆರ್.ಎಲ್.ಎಮ್) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಇರುವ ಉದ್ಯೋಗಿನಿ ಯೋಜನೆ, ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಡಿ ಇರುವ ಸ್ವಾವಲಂಭಿ ಸಾರಥಿ ಯೋಜನೆ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸ್ವಾವಲಂಭಿ ಟ್ಯಾಕ್ಸಿ, ಗೂಡ್ಸ್, ಆಟೋ ರಿಕ್ಷಾ ಯೋಜನೆಗಳು, ಡಾ. ಬಿ. ಆರ್. ಅಂಬೇಡ್ಕರ್ ನಿಗಮದ ಯೋಜನೆಗಳು, ಪ್ರಧಾನ ಮಂತ್ರಿಗಳ ಉದ್ಯೋಗ ಸೃಷ್ಟಿ ಕಾರ್ಯಕ್ರಮ, ಸಮಾಜ ಕಲ್ಯಾಣ ಇಲಾಖೆಯ ಉದ್ಯಮ ಶೀಲತಾ, ಸ್ವಾವಲಂಭಿ ಸಾರಥಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ), ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರಿಕೀಕರಣ ಯೋಜನೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಹೆಸ್ಕಾಂ ಇಲಾಖೆಯ ಪ್ರಧಾನ ಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆಗಳ ಅಡಿಯಲ್ಲಿ ಅನೇಕ ಫಲಾನುಭವಿಗಳು ಸಾಲ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಿರುತ್ತಾರೆ. ಆದರೆ ಇಂತಹ ಅರ್ಜಿಗಳನ್ನು ಬ್ಯಾಂಕುಗಳಲ್ಲಿ ಬಾಕಿ ಉಳಿಸಿಕೊಂಡಿರುವುದು ಗಮನಕ್ಕೆ ಬಂದಿರುತ್ತದೆ. ಫಲಾನುಭವಿಗಳ ಬಾಕಿ ಉಳಿದ ಅರ್ಜಿಗಳನ್ನು ಪರಿಶೀಲಿಸಿ ಅತ್ಯಂತ ತುರ್ತಾಗಿ ವಿಲೇವಾರಿಗೆ ಕ್ರಮವಹಿಸಬೇಕು. ಒಂದು ವಾರದಲ್ಲಿ ಬಾಕಿ ಉಳಿದ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಸಂಪೂರ್ಣವಾಗಿ ವಿಲೇವಾರಿ ಮಾಡುವುದು.ಒಂದು ವೇಳೆ ವಿಳಂಬವಾದಲ್ಲಿ ಸಂಬಂದಪಟ್ಟ ಬ್ಯಾಂಕ್ ವ್ಯವಸ್ಥಾಪಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರಾದ ಅಶೋಕ ಕಲಘಟಗಿ, ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ (ಲೀಡ್ ಬ್ಯಾಂಕ ಡಿಸ್ಟ್ರಿಕ್ಟ್ ಮ್ಯಾನೇಜರ್) ಬಿ. ಸಿದ್ದಯ್ಯ, ಆರ್.ಬಿ.ಐ ವ್ಯವಸ್ಥಾಪಕರಾದ ಸಿಲ್ ಪ್ರಿಯಾ ಗೌತಮ್, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

