ಉದಯರಶ್ಮಿ ದಿನಪತ್ರಿಕೆ
ಆಲಮಟ್ಟಿ: ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿ ಹದಗೆಟ್ಟಿರುವ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಿಡಗುಂದಿ ತಾಲ್ಲೂಕು ಘಟಕದ ಪದಾಧಿಕಾರಿಗಳು ಗುರುವಾರ ಇಲ್ಲಿನ ಗ್ರಾಮ ಪಂಚಾಯಿತಿ ಎದುರು ಪ್ರತಿಭಟಿಸಿದರು.
ಕರವೇ ನಿಡಗುಂದಿ ತಾಲ್ಲೂಕು ಘಟಕದ ಅಧ್ಯಕ್ಷ ಆನಂದ ಹಡಗಲಿ ಮಾತನಾಡಿ,
ಆಲಮಟ್ಟಿ ಗ್ರಾಮ ಪಂಚಾಯಿತಿಯ ಎಲ್ಲಾ ವಾರ್ಡ್ಗಳಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಮುಳ್ಳಿನ ಕಂಟಿಗಳು ಬೆಳೆದಿವೆ. ರಸ್ತೆಯ ತುಂಬಾ ತಗ್ಗುಗಳು ಬಿದ್ದು ನೀರು ನಿಲ್ಲುತ್ತಿರುವುದರಿಂದ ಸೊಳ್ಳೆಗಳ ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಈಗಾಗಲೇ ವಾರ್ಡ್ ನಂ. 03ರಲ್ಲಿ ತಗ್ಗು-ಗುಂಡಿಗಳಿಂದಾಗಿ ಎರಡು ಬೈಕ್ ಅಪಘಾತಗಳು ಸಂಭವಿಸಿದ್ದು, ರಸ್ತೆಗಳು ಮೃತ್ಯುಕೂಪಗಳಾಗಿ ಪರಿವರ್ತನೆಯಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ಕಸದ ವಾಹನ ಬಾರದ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಬಿಸಾಡುವಂತಾಗಿದೆ. ತಕ್ಷಣವೇ ರಸ್ತೆಗೆ ಮಣ್ಣು ಅಥವಾ ಮರಳು ಹಾಕಿ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು, ಮುಳ್ಳಿನ ಕಂಟಿಗಳನ್ನು ತೆರವುಗೊಳಿಸಬೇಕು ಹಾಗೂ ಪ್ರತಿದಿನ ಕಸದ ವಾಹನ ಬರುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.
ಮನವಿ ಪತ್ರ ಸ್ವೀಕರಿಸಿದ ಆಲಮಟ್ಟಿ ಪಿಡಿಓ ಲಿಖಿತ ಭರವಸೆ ನೀಡಿದ ಬಳಿಕ ಪ್ರತಿಭಟನೆ ಅಂತ್ಯಗೊಂಡಿತು.

