ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಾಮಾಜಿಕ ಭದ್ರತಾ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಹಾಗೂ ಅರ್ಹ ಫಲಾನುಭವಿಗಳ ಅಹವಾಲುಗಳನ್ನು ಆಲಿಸಲು ಜಿಲ್ಲಾಡಳಿತ ಜುಲೈ ೨೪ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲೆಯ ವಿವಿಧ ೧೫ ಗ್ರಾಮಗಳಲ್ಲಿ ‘ಪಿಂಚಣಿ ಅದಾಲತ್’ ನಡೆಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.
ಕಂದಾಯ ಇಲಾಖೆ ಹಾಗೂ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ಸುತ್ತೋಲೆಯನ್ವಯ ಈ ಅದಾಲತ್ ಗಳನ್ನು ಆಯೋಜಿಸಲಾಗುತ್ತಿದ್ದು, ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.
ಪಿಂಚಣಿ ಅದಾಲತ್ ನಡೆಯುವ ಸ್ಥಳಗಳ ವಿವರ: ಮುದ್ದೇಬಿಹಾಳ ತಾಲೂಕಿನ ಚೊಂಡಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ ೧೧ ಗಂಟೆಗೆ, ದೇವರಹಿಪ್ಪರಗಿ ತಾಲೂಕಿನ ಕೆಸರಟ್ಟಿ ತಾಂಡಾ ಸೇವಾಲಾಲ್ ದೇವಸ್ಥಾನದಲ್ಲಿ ಬೆಳಗ್ಗೆ ೧೧ ಗಂಟೆಗೆ. ವಿಜಯಪುರ ನಗರದ ಶಾಪೇಟಿ ಗಲ್ಲಿಯ ಶ್ರೀ ಮಹಾದೇವಪ್ಪನ ದೇವಸ್ಥಾನದಲ್ಲಿ ಬೆಳಗ್ಗೆ ೧೧ ಗಂಟೆಗೆ, ಲೋಹಗಾಂವ ಗ್ರಾಮದ ಸಮುದಾಯ ಭವನದಲ್ಲಿ ಬೆಳಗ್ಗೆ ೧೧ ಗಂಟೆಗೆ, ಬಬಲೇಶ್ವರ ಪಟ್ಟಣ ಪಂಚಾಯಿತಿಯಲ್ಲಿ ಬೆಳಗ್ಗೆ ೧೧ ಗಂಟೆಗೆ, ಮುಳ್ಳಾಳದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೧೧ ಗಂಟೆಗೆ, ನಿಡಗುಂದಿ ತಾಲೂಕಿನ ಹುಣಶ್ಯಾಳ ಪಿಸಿ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೧೧ ಗಂಟೆಗೆ, ಚೀರಲದಿನ್ನಿಯ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೧೧ ಗಂಟೆಗೆ, ಮುದ್ದೇಬಿಹಾಳ ತಾಲೂಕಿನ ಹಂಡರಗಲ್ಲು ಗ್ರಾಮದ ಗ್ರಾಮ ಚಾವಡಿಯಲ್ಲಿ ಬೆಳಗ್ಗೆ ೧೧ ಗಂಟೆಗೆ, ತಾಳಿಕೋಟೆ ಪಟ್ಟಣದ ಬಸ್ತಿ ಓಣಿ ಮಸೀದಿಯಲ್ಲಿ ಬೆಳಗ್ಗೆ ೧೧ ಗಂಟೆಗೆ, ಇಂಡಿಯ ನೆಹರು ನಗರದ ಶ್ರೀ ಸೇವಾಲಾಲ್ ದೇವಸ್ಥಾನದಲ್ಲಿ ಬೆಳಗ್ಗೆ ೧೧ ಗಂಟೆಗೆ, ಚಡಚಣ ತಾಲೂಕಿನ ಸಂಖ ಗ್ರಾಮದ ಶ್ರೀ ಲಾಯಗಂಗಾ ದೇವಸ್ಥಾನದಲ್ಲಿ ಬೆಳಗ್ಗೆ ೧೧ ಗಂಟೆಗೆ, ಸಿಂದಗಿ ಪಟ್ಟಣದ ವಾರ್ಡ್ ನಂ. ೬ ರ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಬೆಳಿಗ್ಗೆ ೧೧ಗಂಟೆಗೆ, ವರ್ಕಾನಳ್ಳಿಯ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಬೆಳಿಗ್ಗೆ ೧೧ ಗಂಟೆಗೆ, ಬಸವನಬಾಗೇವಾಡಿ ತಾಲೂಕಿನ ಮುತ್ತಗಿಯ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ ೧೧ ಗಂಟೆಗೆ ಹಾಗೂ ಸಿಂದಗಿ ತಾಲೂಕಿನ ಕಕ್ಕಳಮೇಲಿ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಬೆಳಗ್ಗೆ ೧೧ ಗಂಟೆಗೆ ಪಿಂಚಣಿ ಅದಾಲತ್ ನಡೆಯಲಿದೆ. ಈ ಎಲ್ಲ ಅದಾಲತ್ ಗಳಲ್ಲಿ ಆಯಾ ವಿಭಾಗದ ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರ್ ಗಳು ಭಾಗವಹಿಸಿದ್ದಾರೆ.
ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಇನ್ನು ಮುಂದೆ ನೇರ ಹಣ ವರ್ಗಾವಣೆ ಮೂಲಕ ಪಿಂಚಣಿ ಪಾವತಿಸಲು ಸರಕಾರ ತೀರ್ಮಾನಿಸಿದೆ. ಹಾಗಾಗಿ ಈ ಕಾರ್ಯವನ್ನು ಸಂಬಂಧಿಸಿದ ಬ್ಯಾಂಕ್, ಅಂಚೆ ಕಚೇರಿ ಅಧಿಕಾರಿಗಳ ಸಹಯೋಗದೊಂದಿಗೆ ಮಾಡಿಸಲು ಸೂಚಿಸಲಾಗಿದೆ.
ಸಾರ್ವಜನಿಕರು ಹಾಗೂ ಪಿಂಚಣಿ ಸಂಬಂಧಿತ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳು ನಿಗದಿತ ಸಮಯದಲ್ಲಿ ನಿಗದಿತ ಸ್ಥಳಗಳಿಗೆ ತೆರಳಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

