ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಂ.ಪಾಟೀಲ ರಸ್ತೆ, ಪ್ರಕೃತಿ ಕಾಲೋನಿಯಲ್ಲಿ ವಿಶೇಷ ಚೇತನ ಮಕ್ಕಳಿಗಾಗಿ ಸ್ಥಾಪಿಸಲಾದ ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆಯನ್ನು ಜುಲೈ 27 ಸೋಮವಾರ ರಂದು ಬೆ.9ಗಂ. ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ, ಬಿ.ಎಲ್.ಡಿ.ಇ ಪ್ರಧಾನಕಾರ್ಯದರ್ಶಿ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿದ ಅವರು, ವಿಶೇಷ ಚೇತನ ಮಕ್ಕಳು ಇತರ ಮಕ್ಕಳಂತೆ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಈ ಶಾಲೆಯನ್ನು ಸ್ಥಾಪಿಸಲಾಗಿದೆ. ಇಲ್ಲಿ ದೈಹಿಕ, ಬೌದ್ಧಿಕ, ಶ್ರವಣ, ದೃಷ್ಟಿ ಹಾಗೂ ಕಲಿಕಾ ನ್ಯೂನ್ಯತೆಗಳನ್ನು ಹೊಂದಿರುವ ಮಕ್ಕಳ ಅಗತ್ಯಕ್ಕೆ ಅನುಗುಣವಾಗಿ ಶಿಕ್ಷಣ, ತರಬೇತಿ ಹಾಗೂ ಚಿಕಿತ್ಸೆ ನೀಡಲಾಗುವುದು. ಈ ಶಾಲೆಯಲ್ಲಿ ವಿಶೇಷ ತರಬೇತಿ ಪಡೆದ ಶಿಕ್ಷಕರು, ಫಿಸಿಯೋಥೆರಪಿ, ಶ್ರವಣ, ಮನೋವೈಜ್ಞಾನಿಕ ಸಮಾಲೋಚನೆ ಸೇರಿದಂತೆ ವಿಶೇಷ ತಜ್ಞರು ಈ ಮಕ್ಕಳ ಸಮಗ್ರ ಬೆಳವಣಿಗೆಗೆ ಅಗತ್ಯವಿರುವ ಚಿಕಿತ್ಸೆಗಳನ್ನು ನೀಡಲಿದ್ದಾರೆ. ಅಲ್ಲದೇ, ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸಿ, ಅವರನ್ನು ಸಾಧ್ಯವಾದ ಮಟ್ಟಿಗೆ ಇತರ ಮಕ್ಕಳೊಂದಿಗೆ ಬೆರೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವುದಾಗಿದೆ ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಂಭವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ನಿರ್ದೇಶಕ ರಾಜೇಂದ್ರ ರುಣವಾಲ, ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಸಂಭವ ಸಂಸ್ಥೆ ನಿರ್ದೇಶಕರು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.

